ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರದ ನೀತಿಯೇ ಕಾರಣ. ಹೀಗಾಗಿ ಬಿಜೆಪಿಯವರು ಮೊದಲು ಪ್ರಧಾನಿ ನರೇಂದ್ರ ಮೋದಿಯವರ ಕಚೇರಿ ಎದುರು ಪ್ರತಿಭಟನೆ ನಡೆಸಿ ಪೆಟ್ರೋಲ್, ಡೀಸೆಲ್ ದರ ಇಳಿಕೆಗೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಲಿ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿರುಗೇಟು ನೀಡಿದರು.
ಕಲಬುರಗಿಯಲ್ಲಿ ಸೋಮವಾರ ನಿರ್ಮಾಣ ಹಂತದ ಜಯದೇವ ಆಸ್ಪತ್ರೆಯ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
“ಈ ಹಿಂದೆ ಯುಪಿಎ ಸರಕಾರ ಅಧಿಕಾರದಲ್ಲಿದ್ದ ವೇಳೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಿದ್ದರೂ ರಾಜ್ಯ ಸರ್ಕಾರ ಜನರ ಮೇಲೆ ಭಾರ ಹಾಕಲು ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹಾಕಿರಲಿಲ್ಲ. ನೆರೆಯ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಅತ್ಯಂತ ಕಡಿಮೆ ಇದೆ” ಎಂದು ಸಮಜಾಯಿಷಿ ನೀಡಿದರು.
“ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾದರೂ ಇಂದಿನ ಕೇಂದ್ರ ಸರ್ಕಾರ ಅದರ ಲಾಭವನ್ನು ಗ್ರಾಹಕರಿಗೆ ತಲುಪಿಸಿಲ್ಲ. ಬದಲಾಗಿ ಸಾಕಷ್ಟು ಲೂಟಿ ಮಾಡಿದ್ದಾರೆ. ಕಚ್ಚಾ ತೈಲ ಬೆಲೆ ಹೆಚ್ಚಾದಾಗ ಇಲ್ಲಿಯೂ ಹೆಚ್ಚಿಸಿದ್ದಾರೆ. ಹೀಗಾಗಿ ತೈಲ ಬೆಲೆ ಹೆಚ್ಚಾಗಿಯೇ ಇದೆ” ಎಂದರು.
“ಬರುವ ಆಗಸ್ಟ್ ಕೊನೆ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಕಲಬುರಗಿಯ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ. ಜೊತೆಗೆ 150 ಹಾಸಿಗೆ ಸಾಮರ್ಥ್ಯದ ಕ್ಯಾನ್ಸರ್ ಆಸ್ಪತ್ರೆ, 200 ಹಾಸಿಗೆಯ ತಾಯಿ-ಮಕ್ಕಳ ಹಾಗೂ 50 ಹಾಸಿಗೆಯ ತುರ್ತು ಚಿಕಿತ್ಸಾ ಕೇಂದ್ರ ನಿರ್ಮಾಣಕ್ಕೆ ಶೀಘ್ರ ಅಡಿಗಲ್ಲು ಹಾಕಲಾಗುವುದು” ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗುಟ್ಕಾ ತಂದುಕೊಡದ ಕಾರಣಕ್ಕೆ 7 ವರ್ಷದ ಬಾಲಕಿ ಹತ್ಯೆ: ಆರೋಪಿ ಬಂಧನ
“ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ಜನರು ಕಾಂಗ್ರೆಸ್ಗೆ ಆಶೀರ್ವಾದ ಮಾಡಿದಕ್ಕಾಗಿ ಜನರ ಋಣ ತೀರಿಸುವ ನಿಟ್ಟಿನಲ್ಲಿ 371 ಹಾಸಿಗೆ ಸಾಮರ್ಥ್ಯದ ಜಯದೇವ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಜನರಿಗೆ ಸೇವೆಗಾಗಿ ಒದಗಿಸಲಾಗುತ್ತಿದೆ” ಎಂದರು.





