87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20 ರಿಂದ 22 ರವರೆಗೆ 3 ದಿನಗಳ ಕಾಲ ನಡೆಯಲಿದೆ. ರಚಿತವಾಗಿರುವ ಸಮಿತಿಗಳು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ್ ತಿಳಿಸಿದರು.
ಅವರು ಮಂಡ್ಯ ಜಿಲ್ಲಾ ಪಂಚಾಯತಿಯ ಕಾವೇರಿ ಸಭಾಂಗಣದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ – 2024 ಕ್ಕೆ ಸಂಬಂಧಿಸಿದಂತೆ ಸಮಿತಿಗಳ ಸಭೆ ನಡೆಸಿ ಮಾತನಾಡಿದರು.
ಸಮಿತಿಯ ಎಲ್ಲಾ ಸದಸ್ಯರು ಸಕ್ರಿಯವಾಗಿ ಸಭೆಗಳಲ್ಲಿ ಪಾಲ್ಗೊಳ್ಳಬೇಕು. ಕಾರ್ಯಕ್ರಮಗಳು ಉತ್ತಮವಾಗಿ ಮೂಡಿ ಬರಲು ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಮ್ಮ ಹಂತದಲ್ಲಿ ಸಭೆಗಳನ್ನು ನಡೆಸಿ ಕಾರ್ಯ ಯೋಜನೆಗಳನ್ನು ರೂಪಿಸಬೇಕು ಎಂದರು.
ಸಾಂಸ್ಕೃತಿಕ ಹಾಗೂ ಮೆರವಣಿಗೆ ಸಮಿತಿ:
ಕನ್ನಡ ಸಾಹಿತ್ಯ ಸಮ್ಮೇಳನದ ಮೂರು ದಿನಗಳ ಕಾಲ ಸಂಜೆಯ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ 1 ಮುಖ್ಯ ವೇದಿಕೆ ಹಾಗೂ 2 ಸಮಾನಾಂತರ ವೇದಿಕೆ ಇರಲಿದೆ. ಕ್ರಿಯಾಯೋಜನೆ ತಯಾರಿಸಿ ಅಂದಾಜು ಮೊತ್ತವನ್ನು ನೀಡಬೇಕು ಎಂದರು.
ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೂ ಆದ್ಯತೆ ನೀಡುವುದರಿಂದ ವಿವಿಧ ಕಲಾ ಪ್ರಕಾರಗಳನ್ನು ತಿಳಿಸಬಹುದು. ಆದ್ದರಿಂದ ಇಡೀ ಜಿಲ್ಲೆ ಹಾಗೂ ರಾಜ್ಯದ ಕಲಾ ತಂಡಗಳಿಗೆ ಅವಕಾಶ ನೀಡಲಾಗುವುದು. ಪ್ರತಿ ಜಿಲ್ಲೆಯನ್ನು ಪ್ರತಿನಿಧಿಸುವ ಕಲಾ ತಂಡಗಳಿಗೂ ಸಹ ಅವಕಾಶ ನೀಡಲಾಗುತ್ತದೆ. ಮೆರವಣಿಗೆಯಲ್ಲಿ ಸ್ಥಳೀಯ ತಂಡಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ಸ್ಮರಣಾ ಸಂಚಿಕೆ ಸ್ಮರಣಾ ಸಂಚಿಕೆಯನ್ನು ಸಾಹಿತ್ಯ ಸಮ್ಮೇಳನ ನಡೆಯುವ ಮೂರು ದಿನಗಳ ಅವಧಿಯಲ್ಲಿ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಬೇಕು. ಇದು ಉತ್ತಮವಾಗಿ ಮೂಡಿಬರಲು ಕನ್ನಡ ನಾಡು, ನುಡಿ, ಕಲೆಯ ಬಗ್ಗೆ ಲೇಖನಗಳನ್ನು ಸಂಗ್ರಹಿಸಿ ಇದು ವಿಷಯಾಧಾರಿತವಾಗಿರಬೇಕು. ಹೊರ ರಾಜ್ಯ ಹಾಗೂ ಜಿಲ್ಲೆಯವರಿಗೆ ಮಾಹಿತಿ ನೀಡಿ ಸಂಗ್ರಹಿಸಬೇಕು. ಉತ್ತಮ ಗುಣಮಟ್ಟವಿರುವ ಲೇಖನಗಳನ್ನು ಆಯ್ಕೆ ಮಾಡಬೇಕು ಎಂದರು.

ಪ್ರತಿ ದಿನ ಒಂದೂವರೆ ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಸ್ವಚ್ಛತೆಗೆ ಬೇಕಿರುವ ತಂಡಗಳನ್ನು ರಚಿಸಿಕೊಳ್ಳಬೇಕು. ಪಾರ್ಕಿಂಗ್, ವೇದಿಕೆ, ಆಹಾರ ಕೌಂಟರ್ ಇನ್ನಿತರೆ ಸ್ಥಳಗಳಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿಕೊಳ್ಳಬೇಕು. ಹೆಚ್ಚಿನ ಜನರು ಬೇಕಿದ್ದು, ಸ್ವಯಂ ಸೇವಕರು ಹಾಗೂ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ರಚಿಸಿ, ಈಗಿನಿಂದಲೇ ಅವರಿಗೆ ತರಬೇತಿ ನೀಡಬೇಕು ಎಂದರು.
ತಾತ್ಕಾಲಿಕ ಆಸ್ಪತ್ರೆ ತೆರೆದು ವೈದ್ಯರು ಹಾಗೂ ಇನ್ನಿತರೆ ಸಿಬ್ಬಂದಿಗಳನ್ನು ನಿಯೋಜಿಸಿಕೊಳ್ಳಬೇಕು. ಔಷಧ ಹಾಗೂ ಬೇಕಿರುವ ಇನ್ನಿತರೆ ವಸ್ತುಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಆಹಾರ ತಯಾರಿಕಾ ಸ್ಥಳದಲ್ಲಿ ಹೆಚ್ಚಿನ ಆಹಾರ ಸುರಕ್ಷತಾ ಅಧಿಕಾರಿಗಳ ಅವಶ್ಯಕತೆ ಇದ್ದು, ನಿಯೋಜಿಸಿಕೊಳ್ಳಲು ಕೇಂದ್ರ ಕಚೇರಿಗೆ ಪತ್ರ ಬರೆಯಬೇಕಿದೆ. ಸ್ಥಳ ಪರಿಶೀಲನೆ ನಡೆಸಿ ತಾತ್ಕಾಲಿಕ ಶೌಚಾಲಯಗಳನ್ನು ತೆರೆಯಲು ಯೋಜನೆ ರೂಪಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜುರವರು ಮಾತನಾಡಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವಾಗಿರುವುದರಿಂದ ವಿಭಿನ್ನ ಕಲಾ ತಂಡಗಳಿಗೆ ಹೆಚ್ಚಿನ ಆದ್ಯತೆ ನೀಡುವುದರಿಂದ ಎಲ್ಲ ಕಲಾ ಪ್ರಕಾರಗಳಿಗೂ ಅವಕಾಶ ನೀಡುವುದು ಮುಖ್ಯವಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1 ದಿನಕ್ಕೆ ಎಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬಹುದು ಎಂದು ಸಮಿತಿಯಲ್ಲಿ ಚರ್ಚಿಸಿ, ಸಮಯವನ್ನು ನಿಗದಿಪಡಿಸಿ ಎಂದರು.
ಮೈಕ್ರೋ ಲೆವಲ್ ಯೋಜನೆ ತಯಾರು ಮಾಡಿ ಬೇರೆ ಜಿಲ್ಲೆಯಿಂದ ಸೆಳೆದು ನಿಯೋಜಿಸಿಕೊಳ್ಳಬಹುದು. ಪ್ರತಿ ಕಡೆ ವೈದ್ಯರನ್ನೊಳಗೊಂಡ ಯುನಿಟ್ ರಚಿಸಬೇಕು. ಚಿಕ್ಕ ಆಂಬುಲೆನ್ಸ್ಗಳನ್ನು ನಿಯೋಜನೆ ಮಾಡಿಕೊಳ್ಳಬೇಕು. ಖಾಸಗಿ ಆಸ್ಪತ್ರೆಯವರಿಗೆ ಸಹ ಪತ್ರ ಬರೆದು ಅವರನ್ನು ಸಹ ಮೂರು ದಿನಗಳನ್ನು ನಿಯೋಜಿಸಿ ಕೊಡುವಂತೆ ಮನವಿ ಮಾಡಬೇಕು ಎಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ ಕನ್ನಡ ಸಾಹಿತ್ಯ ಸಮ್ಮೇಳನದ ಸಮನ್ವಯ ಸಮಿತಿ ಅಧ್ಯಕ್ಷೆ ಡಾ ಮೀರಾ ಶಿವಲಿಂಗಯ್ಯ, ಸೇರಿದಂತೆ ವಿವಿಧ ಸಮಿತಿಯ ಹೆಚ್.ಎಸ್ ಮುದ್ದೇಗೌಡ, ತೈಲೂರು ವೆಂಕಟಕೃಷ್ಣ, ಮಾ ರಾಮಕೃಷ್ಣ ಸೇರದಂತೆ ಗಣ್ಯರು ಉಪಸ್ಥಿತರಿದ್ದರು.





