ಸಮಗ್ರ ಕೃಷಿಯಿಂದ ಸುಸ್ಥಿರತೆ ಎಂಬ ಧ್ಯೇಯ ವಾಕ್ಯದಡಿ ಮಂಡ್ಯದ ವಿ ಸಿ ಫಾರಂ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದಲ್ಲಿ ಮೂರು ದಿನ ಕೃಷಿಮೇಳ ನಡೆಯಲಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕೃಷಿ ಮೇಳದ ಅಗತ್ಯ ಹಾಗೂ ಅರಿವಿನ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೃಷಿ ವಿವಿ ವಿಶೇಷ ಅಧಿಕಾರಿ ಕೆ ಎಂ ಹರಿಣಿಕುಮಾರ್ ತಿಳಿಸಿದರು.
ನಗರದಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿ, “ಮಂಡ್ಯದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ಸರ್ಕಾರದ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ, ರೇಷ್ಮೆ, ಅರಣ್ಯ, ಮೀನುಗಾರಿಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಬಾರ್ಡ್ ಸಹಯೋಗದಲ್ಲಿ ಡಿಸೆಂಬರ್ 5, 6 ಮತ್ತು 7ರಂದು ಆಯೋಜಿಸಲಾಗಿದೆ” ಎಂದು ಹೇಳಿದರು.
“ಡಿ.5ರ ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಘನ ಉಪಸ್ಥಿತಿ ಇರುವರು. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸುವರು. ಸಚಿವರಾದ ಎನ್ ಚಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ, ಕೆ ವೆಂಕಟೇಶ್ ಆಗಮಿಸುವರು. ಶಾಸಕರಾದ ಎಂ ಬಿ ರಮೇಶ್ ಬಂಡಿಸಿದ್ದೇಗೌಡ, ಪಿ ರವಿಕುಮಾರ್, ಎಚ್ ಟಿ ಮಂಜು, ಕೆ ಎಂ ಉದಯ್, ಪಿ ಎಂ ನರೇಂದ್ರಸ್ವಾಮಿ, ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ, ಕೆ ವಿವೇಕಾನಂದ, ಮಧು ಜಿ ಮಾದೇಗೌಡ ಭಾಗವಹಿಸುವರು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಧರಣಿ: CITU ಮಂಗಳೂರು ಜಿಲ್ಲಾ ಘಟಕ ಬೆಂಬಲ
“ಡಿ.6ರ ಬೆಳಿಗ್ಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರಾಜ್ಯ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಗಮಿಸುವರು. ಡಿ.7ರ ಮಧ್ಯಾಹ್ನ 2 ಗಂಟೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಭಾಗವಹಿಸುವರು” ಎಂದು ಹೇಳಿದರು.





