ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ)ಯ ಹೆಸರನ್ನು, ‘ವಿಕಸಿತ ಭಾರತ–ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್’ (ವಿಬಿ–ಜಿ ರಾಮ್ ಜಿ) ಎಂದು ಮರುನಾಮಕರಣ ಹೆಸರಲ್ಲಿ ಕಾಯಿದೆಯನ್ನೇ ಬುಡಮೇಲು ಮಾಡಲು ಹೊರಟಿರುವ ಹುನ್ನಾರವನ್ನು ಕೇಂದ್ರ ಸರ್ಕಾರ ನಿಲ್ಲಿಸಬೇಕು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮಹಾತ್ಮ ಗಾಂಧಿ ಫೋಟೋ ಹಿಡಿದು ಪ್ರತಿಭಟನೆ ನಡೆಸಿದರು.
ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
“ಕೇಂದ್ರ ಸರ್ಕಾರ ಮನರೇಗಾ ಯೋಜನೆ ರದ್ದುಗೊಳಿಸುವುದು ಸರಿಯಲ್ಲ. ಮಹಾತ್ಮ ಗಾಂಧಿಯವರು ಈ ದೇಶದ ಮಹಾನ್ ನಾಯಕರು. ಅಂಥವರ ಭಾವಚಿತ್ರ ತೆಗೆಯುವ ಕೆಲಸ ಸರಿಯಲ್ಲ. ನಿರಂತರವಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮತ್ತು ಆರ್ಎಸ್ಎಸ್ ನೇತೃತ್ವದ ಕೇಂದ್ರ ಸರ್ಕಾರ ದೌರ್ಜನ್ಯ ನಡೆಸುತ್ತಿದೆ. ತಕ್ಷಣವೇ ಈ ನಿರ್ಧಾರ ಕೈಬಿಟ್ಟು ಮಸೂದೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ ಎಸ್ ಚಿದಂಬರ್, ಮುಡಾ ಅಧ್ಯಕ್ಷ ಬಿ ಪಿ ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷ ಚಂದಗಾಲು ವಿಜಯಕುಮಾರ್, ಚಿನಕುರಳಿ ರಮೇಶ್, ಕಮಲರಾಜ್, ಪದ್ಮ ಮೋಹನ್, ಪ್ರಕಾಶ್, ಕಿರಣ್ ಕುಮಾರ್, ಕ್ರಾಂತಿಸಿಂಹ, ಸಿ ಎಂ ದ್ಯಾವಪ್ಪ, ಗುರು ಆತ್ಮಾನಂದ, ಹೆಚ್ ವಿ ನಾಗರಾಜು, ಅಭಿಲಾಶ್, ಕೃಷ್ಣೆಗೌಡ ಸೇರಿದಂತೆ ಹಲವರು ಇದ್ದರು.
‘ವಿಕಸಿತ ಭಾರತ–ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್’ (ವಿಬಿ–ಜಿ ರಾಮ್ ಜಿ) ವಿರುದ್ಧ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಕಾರ್ಯಕರ್ತರು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, “ಮರುನಾಮಕರಣ ಮಾಡುವ ಮೂಲಕ ಕೇಂದ್ರ ಸರ್ಕಾರ ‘ಮನರೇಗಾ’ವನ್ನು ದುರ್ಬಲಗೊಳಿಸಲು ಹೊರಟಿದೆ. ಇದರ ಜತೆಗೆ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಜನರ ಮನಸ್ಸಿನಿಂದ ಅಳಿಸಿಹಾಕುವ ಯತ್ನದ ಕುಟಿಲ ತಂತ್ರದ ನೀತಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಗ್ರಾಮೀಣ ಭಾಗದ ಕೂಲಿಕಾರರಿಗೆ ಮಹಾ ವಂಚನೆ ಮಾಡಲು ಹೊರಟಿರುವ ಕೇಂದ್ರದ ನಡೆ ಸರಿಯಲ್ಲ. ಕೃಷಿ ಕೂಲಿಕಾರರಿಗೆ ಹಾಗೂ ನಿರುದ್ಯೋಗಿಗಳಿಗೆ ಮಹಾನ್ ವಂಚನೆ ಮಾಡುತ್ತಿದ್ದು, ವರ್ಷದಿಂದ ವರ್ಷಕ್ಕೆ ಈ ಯೋಜನೆಗೆ ನೀಡುತ್ತಿದ್ದ ಅನುದಾನವನ್ನು ಕಡಿತ ಮಾಡುತ್ತಿದೆ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಸಹಕಾರ ಸಂಘಬೇಡ, ನೇರ ಪಾವತಿಗೆ ಮುನಿಸಿಪಲ್ ಕಾರ್ಮಿಕರ ಒತ್ತಾಯ
“ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಹಿಂದೆ ಇದ್ದ ಹಲವು ಯೋಜನೆಗಳ ಹೆಸರನ್ನು ಬದಲಾಯಿಸಿರುವುದೇ ಇವರ ಸಾಧನೆ ಆಗಿದೆಯೇ ಹೊರತು ಹೊಸ ಯೋಜನೆಗಳನ್ನು ಜಾರಿಗೊಳಿಸಿಲ್ಲ. ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನೂ ಈಡೇರಿಸದೆ ದೇಶದ ಜನತೆಗೆ ಮಹಾ ವಂಚನೆ ಮಾಡಲಾಗುತ್ತಿದೆ” ಎಂದು ದೂರಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ, ಜಿಲ್ಲಾ ಘಟಕದ ಅಧ್ಯಕ್ಷೆ ಡಿ. ಕೆ ಲತಾ, ಉಪಾಧ್ಯಕ್ಷೆ ಶೋಭಾ, ಕಾರ್ಯದರ್ಶಿ ಸುಶೀಲಾ, ಮುಖಂಡರಾದ ಜಯಲಕ್ಷ್ಮಿ, ವೈ ಟಿ ಸವಿತಾ ಇದ್ದರು.





