ಗ್ರಾಮೀಣ ಪ್ರದೇಶದ ಲಭ್ಯ ಸಂಪನ್ಮೂಲಗಳನ್ನು ಬಳಸಿಕೊಂಡು ಪರಿಸ್ಥಿತಿಗೆ ಹೊಂದಾಣಿಕೆಯಾಗಿ ಸಹಕಾರ ನೀಡುವುದೇ ರಾಷ್ಟೀಯ ಸೇವಾ ಯೋಜನಾ ಶಿಬಿರ (NSS)ದ ಮುಖ್ಯ ಉದ್ದೇಶ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಕಾರ್ಯದರ್ಶಿ ನಾಡೋಜ ಡಾ. ವೂಡೆ ಪಿ. ಕೃಷ್ಣ ಹೇಳಿದರು.
ಶ್ರೀರಂಗಪಟ್ಟಣ ತಾಲೂಕಿನ ಚಿನ್ನಾಯಕನಹಳ್ಳಿ ಗ್ರಾಮದಲ್ಲಿ ಮೈಸೂರಿನ ಶೇಷಾದ್ರಿಪುರಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಎನ್ಎಸ್ಎಸ್ ಘಟಕ ವತಿಯಿಂದ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
“ನಗರ ಪ್ರದೇಶದ ಶಿಬಿರಾರ್ಥಿಗಳು ಗ್ರಾಮೀಣ ಪ್ರದೇಶದ ವಾತಾವರಣಕ್ಕೆ ಹೊಂದಿಕೊಳ್ಳುವ, ಜೀವನ ಮೌಲ್ಯಗಳನ್ನು ಬೆಳೆಸಿಕೊಳ್ಳುವ, ಗ್ರಾಮೀಣ ಪ್ರದೇಶದ ಸಂಪ್ರದಾಯ ಸಂಸ್ಕೃತಿ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಶಿಬಿರದ ಉದ್ದೇಶಗಳನ್ನು ಸಾರ್ಥಕ ಪಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ ಸುಜಯ್ ಕುಮಾರ್ ಮಾತನಾಡಿ, “ಶಿಬಿರಾರ್ಥಿಗಳು ಗ್ರಾಮೀಣ ಜನರ ಆರೋಗ್ಯ, ಸಾರಿಗೆ ನಿಯಮಗಳು ಕಾನೂನು ಅರಿವು, ಸ್ವಚ್ಛತೆಗೆ, ಶ್ರಮಾದಾನ, ರಕ್ತದಾನ, ಆರೋಗ್ಯ ತಪಾಸಣೆ ಸೇರಿದಂತೆ ಇತರ ಸಾಮಾಜಿಕ ಕೆಲಸಗಳನ್ನು ನಿರ್ವಹಿಸುವಂತಾಗಲಿ ಎಂದು ಶಿಬಿರಾರ್ಥಿಗಳ ಸೇವೆ ನಮ್ಮ ಗ್ರಾಮ ನಿಮ್ಮ ಸೇವೆಯನ್ನು ಸ್ಮರಿಸಿ ಕೊಳ್ಳುವಂತಾಗಲಿ” ಎಂದು ಶಿಬಿರಾರ್ಥಿಗಳಿಗೆ ಶುಭ ಕೋರಿದರು.
ಇದನ್ನೂ ಓದಿ: ಮಂಡ್ಯ | ಪ್ರೇಮ ವಿವಾಹ; ಯುವಕನ ಮನೆಗೆ ಬೆಂಕಿ ಹಚ್ಚಿದ ಯುವತಿ ತಂದೆ
ಇದೇ ಸಂದರ್ಭದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ಇಂಜಿನಿಯರ್ ಜೈ ಕುಮಾರ್, ನಾಗರಾಜು,
ಮರಳಾಗಾಲ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬೋರೇಗೌಡ, ಕಾರ್ಯದರ್ಶಿ ಮಂಜುನಾಥ್, ಗ್ರಾಮದ ಮುಖಂಡರು, ಕಾಲೇಜಿನ ಪ್ರಾಂಶುಪಾಲ ಡಾ. ಕೆ ಪ್ರಹ್ಲಾದ್ ರಾವ್, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ. ರಾಘವೇಂದ್ರ ಕಾಲೇಜಿನ ಪ್ರಾಧ್ಯಾಪಕರು, ಉಪನ್ಯಾಸಕರು, ಗ್ರಾಮದ ಜೈ ಶ್ರೀರಾಮ್ ಯುವಕರ ಸಂಘದ ಎಲ್ಲಾ ಸದಸ್ಯರುಗಳು, ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.





