ಮಂಡ್ಯ ಜಿಲ್ಲೆಯ ರಿವರ್ ವ್ಯಾಲಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಂಗವಿಕಲರ ಕಲ್ಯಾಣ ಇಲಾಖೆಯ ಅನುದಾನವನ್ನು ಭಾರೀ ಪ್ರಮಾಣದಲ್ಲಿ ದುರುಪಯೋಗಪಡಿಸಿಕೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಸಮಿತಿ (KRS) ಪಕ್ಷದ ಮಂಡ್ಯ ಜಿಲ್ಲಾ ಘಟಕವು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸಮಗ್ರ ತನಿಖೆಗೆ ಆಗ್ರಹಿಸಿದೆ.
ಪತ್ರಿಕೆಯಲ್ಲಿ ಪ್ರಕಟವಾದ ವರದಿಗಳ ಪ್ರಕಾರ, ಈ ಸಂಸ್ಥೆಯು ಮೃತಪಟ್ಟ ವ್ಯಕ್ತಿಗಳನ್ನು ದಾಖಲೆಗಳಲ್ಲಿ ಜೀವಂತವಾಗಿರಿಸಿ, ಅವರ ಹೆಸರಿನಲ್ಲಿ ಸರಕಾರಿ ಹಣವನ್ನು ಲೂಟಿ ಮಾಡುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ.
ಸತ್ತು ಹೋದವರ ಆಧಾರ್ ಕಾರ್ಡ್ಗಳನ್ನು ಬಳಸಿ, ನಕಲಿ ಸಹಿ ಮಾಡಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟುಮಾಡಲಾಗುತ್ತಿದೆ. ಸರಕಾರದ ಕಟ್ಟುನಿಟ್ಟಿನ ಮಾರ್ಗಸೂಚಿಗಳಿದ್ದರೂ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೆಲವು ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಕೈಜೋಡಿಸಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

2026ರ ಜ.27ರಂದು ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು. ಅವರ ಪ್ರಮುಖ ಬೇಡಿಕೆಗಳು ಈ ಕೆಳಗಿನಂತಿವೆ:
ತಕ್ಷಣವೇ ತನಿಖಾ ತಂಡವನ್ನು ರಚಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಅಂಗವಿಕಲರ ಸಬಲೀಕರಣ ಇಲಾಖೆಯ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು. ಭ್ರಷ್ಟಾಚಾರ ಸಾಬೀತಾದಲ್ಲಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಲ್ಲದೆ, ಆದಾಯಕ್ಕಿಂತ ಅಧಿಕವಾಗಿ ಹೊಂದಿರುವ ಅವರ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು.
ಇದನ್ನೂ ಓದಿ: ಮಂಡ್ಯ | ಯುವಜನರ ಭಾವನೆಗಳ ಜತೆಗಿನ ರಾಜಕೀಯ ಚೆಲ್ಲಾಟ ನಿಲ್ಲಿಸಿ: ಸಿಪಿಐಎಂ
ಸಾರ್ವಜನಿಕರ ತೆರಿಗೆ ಹಣವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಬದಲು, ಈ ರೀತಿ ಅಕ್ರಮ ಎಸಗುತ್ತಿರುವುದು ಖಂಡನೀಯ ಎಂದು ಪಕ್ಷದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯ ಒದಗಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.





