ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಟ್ಟು, ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿ ತಯಾರು ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸಮಾಡಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಶಿಕ್ಷಕರಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿಯ ವತಿಯಿಂದ ನಾಗಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
“ಈ ಹಿಂದೆ ಶಿಕ್ಷಕರು ಶಾಲೆ ಇರುವ ಗ್ರಾಮದಲ್ಲೇ ವಾಸ್ತವ್ಯ ಹೂಡಿ ಮಕ್ಕಳಿಗೆ ಸಂಜೆ ಸಮಯದಲ್ಲೂ ಶಿಕ್ಷಣ ಹೇಳಿಕೊಡುತ್ತಿದ್ದರು. ಆದರೆ ಇಂದಿನ ಪರಿಸ್ಥಿತಿ ಹಾಗಿಲ್ಲ. ಬಹುತೇಕ ಶಿಕ್ಷಕರು ತಾಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿದ್ದು, ಶಾಲೆ ಬಿಟ್ಟ ಬಳಿಕ ಮನೆಗೆ ತೆರಳುತ್ತಾರೆ ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸುವುದಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದರು.
“ಶಿಕ್ಷಕರು ಮಕ್ಕಳ ಭೋದನೆಗೆ ಹೆಚ್ಚು ಸಮಯ ನೀಡಿ. ಶಾಲೆ ಪ್ರಾರಂಭವಾಗುವ ಮುನ್ನವೇ ಶಾಲೆಗೆ ತೆರಳಿ. ಮಕ್ಕಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲೂ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಿ” ಎಂದರು.
“ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ ಗ್ರಾಮೀಣ ಪ್ರದೇಶದ ಮಕ್ಕಳು ಐಎಎಸ್, ಐಪಿಎಸ್ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳಾಗುವಂತೆ ಪ್ರೋತ್ಸಾಹಿಸುವ ಕೇಲಸವಾಗಬೇಕಿದೆ. ಜೊತೆಗೆ ಸಮಾಜದಲ್ಲಿ ಪ್ರಗತಿಪರ ಆಲೋಚನೆ ಮಾಡುವ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಬೇಕಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ, ಕಟ್ಟಡ ಕಾರ್ಮಿಕರ ಪ್ರತಿಭಟನೆ
“ಸರ್ಕಾರ ಶಿಕ್ಷಕರ ಪರವಾಗಿದೆ. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುತ್ತದೆ” ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ ನಾಗೇಶ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವರಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಹೆಚ್ ಬಿ, ಡಯಟ್ ಸಂಸ್ಥೆಯ ಉಪನಿರ್ದೇಶಕ ಪುರುಷೋತ್ತಮ, ಧನಲಕ್ಷ್ಮಿ ಚಲುವರಾಯಸ್ವಾಮಿ ಸೇರಿದಂತೆ ಇತರ ಗಣ್ಯರು ಇದ್ದರು.





