ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಮಾಡುವ ಸರ್ಕಾರದ ನಿರ್ಣಯದ ಕರಿತು ಸ್ಥಳೀಯ ಶಾಸಕರು, ಗ್ರಾಮಸ್ಥರು ಮತ್ತು ಪ್ರತಿಭಟನಾಕಾರರೊಂದಿಗೆ ಮುಕ್ತವಾಗಿ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸುವುದು ಸೂಕ್ತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.
ಗೆಜ್ಜಲಗೆರೆ ಗ್ರಾಮ ಪಂಚಾಯತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಮಾಡುವ ಸರ್ಕಾರದ ನಿರ್ಣಯದ ವಿರುದ್ಧ ಗ್ರಾಮಸ್ಥರು ನಡೆಸುತ್ತಿರುವ ಹೋರಾಟದ ಕುರಿತು ಮಂಡ್ಯ ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.
”ಗೆಜ್ಜಲಗೆರೆ ಗ್ರಾಮವನ್ನು ಮದ್ದೂರು ನಗರಸಭೆಗೆ ಸೇರಿಸುವ ಕುರಿತು ಈಗಾಗಲೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಜತೆಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯೂ ಪೂರ್ಣಗೊಂಡಿದೆ” ಎಂದು ಸಚಿವರು ಮಾಹಿತಿ ನೀಡಿದರು.

”ಈ ವಿಚಾರವಾಗಿ ಹೋರಾಟ ನಡೆಸುತ್ತಿರುವ ಸಂಘಟನೆಯ ಪ್ರಮುಖರಾದ ಸುನಂದಾ ಜಯರಾಮ್ ಈಗಾಗಲೇ ಎರಡು ಬಾರಿ ನನ್ನನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಮಂಡ್ಯಕ್ಕೆ ಬರುವ ದಾರಿಯಲ್ಲಿಯೂ ಅವರು ಈ ಬಗ್ಗೆ ಚರ್ಚಿಸಿದ್ದಾರೆ. ಗ್ರಾಮಸ್ಥರ ಭಾವನೆಗಳಿಗೆ ಗೌರವ ನೀಡಿ, ಈ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಹಲವು ಬಾರಿ ಮಾತುಕತೆ ನಡೆಸಿದ್ದೇನೆ” ಎಂದು ಸಚಿವರು ಸ್ಪಷ್ಟಪಡಿಸಿದರು.
”ತಾಲೂಕಿನ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಈ ತೀರ್ಮಾನವನ್ನು ಎಲ್ಲರ ಒಪ್ಪಿಗೆಯ ಮೇರೆಗೆ ತೆಗೆದುಕೊಂಡಿರುವುದಾಗಿ ಶಾಸಕರು ನನ್ನ ಗಮನಕ್ಕೆ ತಂದಿದ್ದಾರೆ. ಆದರೂ ಗ್ರಾಮಸ್ಥರು ‘ನಮ್ಮ ಊರೊಂದನ್ನು ಬಿಟ್ಟುಬಿಡಿ’ ಎಂದು ವಿನಂತಿಸುತ್ತಿದ್ದಾರೆ. ಈ ಹಂತದಲ್ಲಿ ಶಾಸಕರು ಯಾವುದೇ ಪೂರ್ವಾಗ್ರಹ ಇಲ್ಲದೆ ಹೋರಾಟ ನಿರತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾತನಾಡಬೇಕು” ಎಂದು ಸಚಿವರು ಸಲಹೆ ನೀಡಿದರು.
”ಈಗಾಗಲೇ ಪ್ರಕ್ರಿಯೆಗಳು ಪೂರ್ಣಗೊಂಡಿರುವುದರಿಂದ ಹೋರಾಟಗಾರರು, ಶಾಸಕರ ಮೂಲಕ ಅಥವಾ ನೇರವಾಗಿ ಮುಖ್ಯಮಂತ್ರಿಯವರಿಗೆ ಈ ವಿಷಯದ ಬಗ್ಗೆ ಮತ್ತೊಮ್ಮೆ ಸವಿಸ್ತಾರವಾದ ಮನವಿ ಸಲ್ಲಿಸಬೇಕು. ಆಗ ಮಾತ್ರ ಈ ವಿಚಾರದಲ್ಲಿ ಏನಾದರೂ ಬದಲಾವಣೆ ಮಾಡಲು ಸಾಧ್ಯವಾಗುತ್ತದೆ. ಪಂಚಾಯತ್ ರಾಜ್ ವ್ಯವಸ್ಥೆಯು ಆಡಳಿತ ವಿಕೇಂದ್ರೀಕರಣದ ಬಲವಾದ ಅಡಿಪಾಯವಾಗಿದೆ. ಈ ವ್ಯವಸ್ಥೆಯನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಅದಾನಿ, ಅಂಬಾನಿಗಳನ್ನು ಗ್ರಾಮ ಪಂಚಾಯಿತಿಗೂ ತರುವ ಹುನ್ನಾರ ನಡೆದಿದೆ: ಸಚಿವ ಆರ್ ಬಿ ತಿಮ್ಮಾಪುರ್
ಸೆಸ್ಕ್ ಅಧ್ಯಕ್ಷ ಮತ್ತು ಶಾಸಕ ಎ ಬಿ ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮೈಶುಗರ್ ಅಧ್ಯಕ್ಷ ಸಿ ಡಿ ಗಂಗಾಧರ್, ಕಾಂಗ್ರೆಸ್ ಕಾರ್ಯಾಧ್ಯಕ್ಷ ಚಿದಂಬರ್, ಮುಡಾ ಅಧ್ಯಕ್ಷ ಬಿ ಪಿ ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶೈಲು ಸೇರಿದಂತೆ ಇತರರು ಇದ್ದರು.





