ಮದ್ದೂರು ತಾಲೂಕು ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಬುಧವಾರವೂ ಮುಂದುವರಿದಿದ್ದು, ಮಂಡ್ಯ ಜಿಲ್ಲಾ ಕೆಆರ್ಎಸ್ (ಕರ್ನಾಟಕ ರಾಷ್ಟ್ರ ಸಮಿತಿ) ಪಕ್ಷವು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಹೋರಾಟಕ್ಕೆ ಪೂರ್ಣ ಬೆಂಬಲ ಘೋಷಿಸಿದೆ.
ಗೆಜ್ಜಲಗೆರೆಯಲ್ಲಿ ಕಳೆದ 23 ದಿನಗಳಿಂದ ನಿರಂತರವಾಗಿ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು, ವಯೋವೃದ್ಧರು, ಹೆಣ್ಣುಮಕ್ಕಳು ಹಾಗೂ ಗ್ರಾಮಸ್ಥರು ಮಳೆಯನ್ನೂ ಲೆಕ್ಕಿಸದೆ ಭಾಗವಹಿಸುತ್ತಿದ್ದಾರೆ. ವಿವಿಧ ಪ್ರಗತಿಪರ ಸಂಘಟನೆಗಳೂ ಸಹ ಈ ಹೋರಾಟಕ್ಕೆ ಧ್ವನಿಗೂಡಿಸಿವೆ. “ಗ್ರಾಮದ ಅಸ್ಮಿತೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಗೆಜ್ಜಲಗೆರೆಯನ್ನು ನಗರಸಭೆಗೆ ಸೇರಿಸುವ ನಿರ್ಧಾರವನ್ನು ಕೈಬಿಡಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆ.ಆರ್.ಎಸ್ ಪಕ್ಷದ ಮುಖಂಡರು, “ಜನರ ಭಾವನೆಗಳಿಗೆ ವಿರುದ್ಧವಾಗಿ ಸರ್ಕಾರ ಹಾಗೂ ಆಡಳಿತ ಮಂಡಳಿ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ. 23 ದಿನಗಳಿಂದ ಶಾಂತಿಯುತವಾಗಿ ಹೋರಾಟ ನಡೆಯುತ್ತಿದ್ದರೂ ಶಾಸಕರು ಇತ್ತ ಗಮನ ಹರಿಸದಿರುವುದು ವಿಷಾದನೀಯ. ಶಾಸಕರು ಕೂಡಲೇ ಮಧ್ಯಪ್ರವೇಶಿಸಿ ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸಲು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಮಂಡ್ಯ | ರೈತರು ಸಮಗ್ರ ಕೃಷಿ, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ
ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ್ ಜಿ ಎಂ, ಮಂಡ್ಯ ಜಿಲ್ಲಾಧ್ಯಕ್ಷ ಡಿ ಜಿ ನಾಗರಾಜ್, ಜಿಲ್ಲಾ ಉಪಾಧ್ಯಕ್ಷ ಮಲ್ಲೇಶ್ ಹೆಬ್ಬಕವಾಡಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಪ್ರಮೋದ ಎಸ್, ರೈತ ಘಟಕದ ಪ್ರಧಾನ ಕಾರ್ಯದರ್ಶಿ ಹರೀಶ್, ಯುವ ಘಟಕದ ಪ್ರಧಾನ ಕಾರ್ಯದರ್ಶಿ ದೀಪಿಕಾ, ಮದ್ದೂರು ತಾಲೂಕು ಕಾರ್ಯದರ್ಶಿ ಮಲ್ಲಯ್ಯ ರಾಚಯ್ಯ ಹಾಗೂ ಪ್ರಮುಖರಾದ ತಿಮ್ಮೇಗೌಡ, ನಾಗರಾಜ್, ವೆಂಕಟೇಶ್ ಸೇರಿದಂತೆ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.





