ದೇಶದಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗಗಳು ಶಾಮೀಲಾಗಿ ಮತ ಕಳ್ಳತನದಲ್ಲಿ ತೊಡಗಿವೆ ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪದ ನಂತರ ದೇಶಾದ್ಯಂತ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನಕ್ಕೆ ಮಂಡ್ಯದಲ್ಲೂ ಉತ್ತಮ ಸ್ಪಂದನೆ ಸಿಕ್ಕಿದೆ. ಕಾಂಗ್ರೆಸ್ ಪಕ್ಷವು ಮಂಡ್ಯದಲ್ಲಿ ಶನಿವಾರ ಸಹಿ ಸಂಗ್ರಹ ಅಭಿಯಾನವನ್ನು ನಡೆಸಿತು.
ಮಂಡ್ಯ ನಗರದ ಹೊಳಲು ಸರ್ಕಲ್ನಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ವತಿಯಿಂದ ‘ವೋಟ್ ಚೋರಿ’ ವಿರುದ್ಧ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ ಡಿ ಗಂಗಾಧರ್, “ಪ್ರಜಾಪ್ರಭುತ್ವ ಹಾಗೂ ಚುನಾವಣಾ ವ್ಯವಸ್ಥೆಯನ್ನು ಬುಡಮೇಲು ಮಾಡಲು ಬಿಜೆಪಿ ಯತ್ನಿಸುತ್ತಿದೆ. ಎಐಸಿಸಿ ಹಾಗೂ ಕೆಪಿಸಿಸಿ ಸೂಚನೆ ಮೇರೆಗೆ ಜಿಲ್ಲೆಯ ಕೆ.ಆರ್.ಪೇಟೆ ನಾಗಮಂಗಲ, ಶ್ರೀರಂಗಪಟ್ಟಣ, ಮಳವಳ್ಳಿ, ಮದ್ದೂರು ಪಾಂಡವಪುರ, ಮಂಡ್ಯ ಸೇರಿದಂತೆ ಜಿಲ್ಲೆಯ ಎಲ್ಲಾ ಭಾಗಗಳಲ್ಲೂ ಕೇಂದ್ರ ಸರ್ಕಾರದ ಮತಗಳ್ಳತನದ ವಿರುದ್ಧ ಸಹಿ ಅಭಿಯಾನ ಹಮ್ಮಿಕೊಂಡಿದ್ದೇವೆ” ಎಂದು ಹೇಳಿದರು.
“ಮತಗಳ್ಳತನ ಮಾಡುವ ಮೂಲಕ ಬಿಜೆಪಿ ಅಧಿಕಾರ ಹಿಡಿಯುತ್ತಿದೆ. ಮತದಾರರ ಪಟ್ಟಿಯಲ್ಲಿ ಸುಳ್ಳು ಹೆಸರು ಇರುವುದನ್ನು ಕಾಂಗ್ರೆಸ್ ಸಾಕ್ಷ್ಯ ಸಮೇತ ಜನರ ಮುಂದಿಟ್ಟಿದೆ. ಒಬ್ಬ ಮತದಾರ ಹಲವು ಕ್ಷೇತ್ರಗಳಲ್ಲಿ ಮತ ಚಲಾವಣೆ ಮಾಡಿರುವುದು ಪತ್ತೆಯಾಗಿದೆ. ಇದರ ವೀಡಿಯೊ ದಾಖಲೆಗಳನ್ನು ಬಿಡುಗಡೆ ಮಾಡಲು ಚುನಾವಣಾ ಆಯೋಗ ಮೀನಾ-ಮೇಷ ಎಣಿಸುತ್ತಿದೆ” ಎಂದು ತಿಳಿಸಿದರು.
ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕಾಗಿದ್ದ ಆಯೋಗ ಬಿಜೆಪಿಯ ಕೈಗೊಂಬೆಯಾಗಿದೆ. ಹೊರರಾಜ್ಯದ ಮತದಾರರು ಕರ್ನಾಟಕದ ಮತದಾರರ ಪಟ್ಟಿಯಲ್ಲಿದ್ದರೂ ಕಣ್ಮುಚ್ಚಿ ಕುಳಿತಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮುಂದಿಟ್ಟಿರುವ ಪ್ರಶ್ನೆಗಳಿಗೆ ಉತ್ತರ ನೀಡುವುದನ್ನು ಬಿಟ್ಟು ಬಿಜೆಪಿಯ ಮುಖವಾಣಿಯಂತೆ ವರ್ತಿಸುತ್ತಿದೆ” ಎಂದು ಕಿಡಿಕಾರಿದರು.
ಮತಗಳ್ಳತನದ ಹೊಸ ಪಿಡುಗು
ರಾಜ್ಯ ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ ಎಸ್ ಆತ್ಮಾನಂದ ಮಾತನಾಡಿ, “ಮತದಾನ ಬಹಳ ಪಾವಿತ್ರ್ಯವಾದದ್ದು ಇದನ್ನು ಅರಿತುಕೊಳ್ಳಬೇಕು, ಮತಗಳ್ಳತನದ ಹೊಸ ಪಿಡುಗು ನಮ್ಮ ಮಧ್ಯ ಉದ್ಬವವಾಗಿರುವುದು ಆತಂಕಕಾರಿ ಸಂಗತಿ. ಚುನಾವಣಾ ಆಯೋಗ ಹಾಗೂ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷದ ವರಿಷ್ಠರ ಅಣತಿ ಮೇರೆಗೆ ನ್ಯಾಯಯುತ ಕಾರ್ಯವನ್ನು ಒದಗಿಸಿಕೊಡಬೇಕು ಎಂದು ಸಹಿ ಸಂಗ್ರಹ ಅಭಿಯಾನ ಮಾಡುತ್ತಿದ್ದೇವೆ. ಸಾರ್ವಜನಿಕರು ಸಹಿ ಸಂಗ್ರಹ ಅಭಿಯಾನಕ್ಕೆ ಸಹಕರಿಸಿ ನಮ್ಮ ಹಕ್ಕನ್ನು ಉಳಿಸಿಕೊಳ್ಳುವ ಕಾರ್ಯದಲ್ಲಿ ಭಾಗಿಯಾಗಬೇಕು” ಎಂದು ತಿಳಿಸಿದರು.
ಸಹಿ ಸಂಗ್ರಹ ಅಭಿಯಾನದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶುಭದಾಯಿನಿ, ಸಣ್ಣ ಕೈಗಾರಿಕೆ ಇಲಾಖೆ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್ ಅಪ್ಪಾಜಿ, ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗ ಕಾಂಗ್ರೆಸ್ ಅಧ್ಯಕ್ಷ ಸಾತನೂರು ಕೃಷ್ಣ, ಜಿಲ್ಲಾ ಕಾಂಗ್ರೆಸ್ ವಕ್ತಾರ ಸಿ.ಎಂ. ದ್ಯಾವಪ್ಪ, ಮುಡಾ ನಿರ್ದೇಶಕ ಅರುಣ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಚಂದಗಾಲು ವಿಜಯಕುಮಾರ್ ಅಭಿಲಾಷ್, ಚಿಕ್ಕಬಳ್ಳಿ ಕೃಷ್ಣ, ಹಳುವಾಡಿ ವೆಂಕಟೇಶ್, ಎನ್. ಸೋಮ ಶೇಖರ್,ರಾಜಣ್ಣ,ಉದಯ್, ಹನ್ಸಿಯಬಾನ್, ಶಕುಂತಲಾ, ವೀಣಾ ಶಂಕರ್ ಸೇರಿದಂತೆ ಇತರರು ಭಾಗವಹಿಸಿದ್ದರು.






