ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡು ಬದುಕುತ್ತಿದ್ದ ವೃದ್ಧ ದಂಪತಿಗಳ ಮನೆಯನ್ನು ಅಧಿಕಾರಿಗಳು ಏಕಾಏಕಿ ಧ್ವಂಸಗೊಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಮನೆ ಕಳೆದುಕೊಂಡು ನಿರಾಶ್ರಿತರಾಗಿರುವ ದಂಪತಿ, ಅಧಿಕಾರಿಗಳು ನಮ್ಮನ್ನು ಬದುಕಲಂತೂ ಬಿಡುತ್ತಿಲ್ಲ. ನಾವು ಕಂಗಾಲಾಗಿದ್ದೇವೆ. ನಮಗೆ ದಯಾಮರಣ ಕೊಡಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮ ಅವರಿಗೆ ಪತ್ರ ಬರೆದಿದ್ದಾರೆ.
ಮೂಲತಃ ಚಿತ್ರದುರ್ಗ ಜಿಲ್ಲೆಯವರಾದ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಗಳಿಗೆ ಯಾವುದೇ ಪಿತ್ರಾರ್ಜಿತ ಅಥವಾ ಸ್ವಯಾರ್ಜಿತ ಆಸ್ತಿಯಿಲ್ಲ. ಹೀಗಾಗಿ, ಕಡಬಾ ತಾಲೂಕಿನ ಕೌಕ್ರಾಡಿ ಗ್ರಾಮದ ಕಾವಿನಬಾಗಿಲು ಎಂಬಲ್ಲಿ ಸರ್ಕಾರಿ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದರು. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಆದರೆ, ಅವರು ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವುದನ್ನು ಸಹಿಸದ ಬೆಳ್ತಂಗಡಿ ತಾಲೂಕಿನ ಅಶೋಕ್ ಆಚಾರ್ಯ ಎಂಬಾತ, ಅವರನ್ನು ಒಕ್ಕಲೆಬ್ಬಿಸಬೇಕೆಂದು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಬೆನ್ನಲ್ಲೇ, ಅಧಿಕಾರಿಗಳು ಕಳೆದ ಫೆಬ್ರವರಿಯಲ್ಲಿಯೇ ಮನೆ ಧ್ವಂಸಗೊಳಿಸಲು ಮುಂದಾಗಿದ್ದಾರೆ. ಅಧಿಕಾರಗಳನ್ನು ತಡೆದಿದ್ದ ಸ್ಥಳೀಯರು ದಂಪತಿಗಳನ್ನು ಒಕ್ಕಲೆಬ್ಬಿಸದಂತೆ ಒತ್ತಾಯಿಸಿದ್ದರು.
ಆದರೆ, ಈಗ ಅಧಿಕಾರಿಗಳು ಏಕಾಏಕಿ ಮನೆ ಮೇಲೆ ದಾಳಿ ಮಾಡಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಹೊರಗೆ ಎಸೆದು, ಮನೆಯನ್ನು ಧ್ವಂಸಗೊಳಿಸಿದ್ದಾರೆ. ಅಂಗಲಾಚಿದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ದಂಪತಿಗಳು ಅಳಲು ತೋಡಿಕೊಂಡಿದ್ದಾರೆ.
ಈ ವರದಿ ಓದಿದ್ದೀರಾ?: ಬುಲ್ಡೋಜರ್ ನ್ಯಾಯ’ ನಿಷೇಧ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು; ಯೋಗಿ ಸರ್ಕಾರಕ್ಕೆ ತರಾಟೆ
”ಸರ್ಕಾರಿ ಜಾಗದಲ್ಲಿ ಸಣ್ಣ ಮನೆ ಕಟ್ಟಿಕೊಂಡು ಬದುಕುತ್ತಿದ್ದೇವೆ. ಆ ಮನೆಯಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ. ಇಲ್ಲವೇ, ವೃದ್ಧರಾದ ನಮಗೆ ದಯಾಮರಣ ಕೊಡಿ” ಎಂದು ವೃದ್ದ ದಂಪತಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.




