ಮಂಗಳೂರು ವಿವಿ ಮತ್ತು ಯೇನೆಪೊಯ ವಿವಿ ಜಂಟಿಯಾಗಿ ನಡೆಸಿದ ಕೊರಗ ಜನಾಂಗದ ಕುರಿತ ಅನುವಂಶಿಕ ಅಧ್ಯಯನದಲ್ಲಿ ಕೊರಗರ ಮೂಲದ ಕುರಿತು ಮಹತ್ವದ ಫಲಿತಾಂಶ ಲಭಿಸಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ. ಪಿ ಎಲ್ ಧರ್ಮ ತಿಳಿಸಿದರು.
ಮಂಗಳೂರು ವಿವಿ ಇತರ ಖಾಸಗಿ ವಿವಿಗಳ ಜತೆ ಸಂಶೋಧನೆ ಆಧಾರಿತ ಒಪ್ಪಂದ ಮಾಡಿಕೊಂಡಿತ್ತು. ಅದರ ಭಾಗವಾಗಿ ಈ ಸಂಶೋಧನೆ ನಡೆದಿದ್ದು, ಮಹತ್ವದ ಮೈಲುಗಲ್ಲು ಸಾಧಿಸಿದೆ. ಮಂಗಳೂರು ವಿವಿ ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಎಂ ಎಸ್ ಮುಸ್ತಾಕ್ ಮತ್ತು ಯೇನೆಪೊಯ ಅಧ್ಯಯನ ಕೇಂದ್ರದ ಡಾ. ರಣಜಿತ್ ದಾಸ್ ನೇತೃತ್ವದಲ್ಲಿ ಈ ಸಂಶೋಧನೆ ನಡೆದಿದೆ ಎಂದು ತಿಳಿಸಿದರು.
ಸಂಶೋಧಕ ಡಾ. ಎಂ ಎಸ್ ಮುಸ್ತಾಕ್ ಮಾತನಾಡಿ, “ಸಂಶೋಧನೆಯ ಮುಖ್ಯ ಉದ್ದೇಶ ಕೊರಗರ ಮೂಲದ ನಿಖರ ಸ್ವರೂಪ ಪತ್ತೆ ಹಚ್ಚುವುದಾಗಿತ್ತು. ವೈಜ್ಞಾನಿಕ ಪರೀಕ್ಷೆಗಳನ್ನು ಬಳಸಿಕೊಂಡು ಕೊರಗರ ಜೀನ್ ಸಂಯೋಜನೆ(ಜೆನೆಟಿಕ್ ಕಾಂಪೊಸಿಶನ್)ಯನ್ನು ವಿಶ್ಲೇಷಿಸಲಾಗಿದೆ. ಕೊರಗರ ಜೀನ್ ಸಂಯೋಜನೆ 3 ಪ್ರಮುಖ ಮೂಲಗಳಿಂದ ಬಂದಿರುವುದು ಸಂಶೋಧನೆಯಲ್ಲಿ ಖಚಿತವಾಗಿದೆ. ಪ್ರಾಚೀನ ದಕ್ಷಿಣ ಭಾರತೀಯರು(ಇವರು ಅಂಡಮಾನ್ ದ್ವೀಪದ ಬೇಟೆಯಾಡುವ ಜನಾಂಗಕ್ಕೆ ಸಂಬಂಧಿಸಿದವರು), ಸಿಂಧು ನಾಗರಿಕತೆಯ ಅಂಚಿನ ಜನರು ಇವರು ಸಿಂಧು ನಾಗರಿಕತೆಯ ಸುತ್ತಮುತ್ತ ವಾಸಿಸುತ್ತಿದ್ದ ಜನಾಂಗ) ಹಾಗೂ ಇರಾನ್ ಪರ್ವತ ಪ್ರದೇಶದ ಪ್ರಾಚೀನ ಕೃಷಿಕರ ಮೂಲಗಳಿಂದ ಬಂದಿದೆ ಎಂದರು. ಕೊರಗರ ಅನುವಂಶಿಕ ವಸ್ತುವಿನಲ್ಲಿ ಕಂಡುಬಂದ ಇರಾನ್ ನ್ಯೂಲಿಥಿಕ್ ಅಂಶವು ಇತರ ಭಾರತೀಯ ಜನಾಂಗಗಳಲ್ಲಿ ಕಂಡು ಬರುವುದಕ್ಕಿಂತ ಸಂಪೂರ್ಣ ವಿಭಿನ್ನವಾಗಿತ್ತು. ಇದು ತುಂಬ ಪ್ರಾಚೀನ ಮೂಲದಿಂದ ಬಂದದ್ದು, ಇದರರ್ಥ ಕೊರಗರು ಭಾರತದ ಜನಾಂಗೀಯ ಇತಿಹಾಸದಲ್ಲಿ ಹಳೆಯ ಮತ್ತು ಸ್ವತಂತ್ರ ಶಾಖೆಯಾಗಿ ಉಳಿದಿದ್ದಾರೆ. ಸಂಶೋಧನೆಯಲ್ಲಿ ಇಂದಿನ ವಿವಿಧ ದ್ರಾವಿಡ ಭಾಷಾ ಜನಾಂಗಗಳ ಜೀನ್ ಮಾದರಿಗಳನ್ನು ಪರೀಕ್ಷಿಸಲಾಯಿತು. ಕೊರಗರ ಅಂಶವಿಲ್ಲದೆ ಭಾರತೀಯ ಜನಾಂಗಗಳ ಮೂಲದ ಸಂಪೂರ್ಣ ಪರಿಕಲ್ಪನೆ ನೀಡಲು ಸಾಧ್ಯವಾಗುವುದಿಲ್ಲ ಎಂಬುದು ಸಂಶೋಧನೆ ಸಾಬೀತುಪಡಿಸಿದೆ” ಎಂದು ವಿವರಿಸಿದರು.
ಇದನ್ನೂ ಓದಿ: ಮಂಗಳೂರು | ಕೊರಗರ ಮೂಲದ ಮಹತ್ವದ ಅಂಶ ಪತ್ತೆ: ಕುಲಪತಿ ಪ್ರೊ. ಪಿ ಎಲ್ ಧರ್ಮ ಮಾಹಿತಿ
ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು. ಇವರ ಜೀನ್ಗಳಲ್ಲಿ ಅಡಕವಾಗಿರುವ ಅಂಶವು ಭಾರತದ ಪುರಾತನ ಇತಿಹಾಸದಲ್ಲಿ ನಾಪತ್ತೆಯಾದ ಒಂದು ಪ್ರಮುಖ ಕೊಂಡಿಯಾಗಿದೆ ಎಂದರು.
ಸಂಶೋಧಕ ಡಾ. ರಣಜಿತ್ ದಾಸ್ ಮಾತನಾಡಿ, “ಕೊರಗ ಸಮುದಾಯದಲ್ಲಿ ಕಂಡುಬರುವ ಜೀನ್ ಹ್ಯಾಪ್ಲೊಟೈಪ್, ಅವರೊಳಗಿನ ಅಂತರ್ ವಿವಾಹದ ಪರಿಣಾಮ ಆಗಿರಬಹುದು. ಅಲ್ಲದೆ ಈ ಅಧ್ಯಯನ ಅನೇಕ ಅನುವಂಶಿಕ ಕಾಯಿಲೆಗಳಿಗೆ ಕಾರಣವಾಗಬಹುದಾದ ರೂಪಾಂತರಗಳನ್ನು ಪತ್ತೆ ಹಚ್ಚಿದೆ. ಕೊರಗ ಸಮುದಾಯದಲ್ಲಿ ಶಿಶು ಸಾವಿನ ಪ್ರಮಾಣ, ನರಸಂಬಂಧಿ ತೊಂದರೆಗಳು, ಕುರುಡುತನ, ಬಂಜೆತನ ಕಂಡುಬಂದಿದ್ದು, ಇದರ ಒಟ್ಟಾರೆ ಪರಿಣಾಮವಾಗಿ ಕೊರಗರ ಜೀವಿತಾವಧಿ ಕಡಿಮೆಯಾಗಲು ಕಾರಣವಾಗಿರಬಹುದು” ಎಂದು ತಿಳಿಸಿದರು.
ಮಂಗಳೂರು ವಿವಿ ಪ್ರಾಧ್ಯಾಪಕಿ ಡಾ.ಸಬಿತಾ ಸೇರಿದಂತೆ ಮತ್ತಿತರರು ಇದ್ದರು.





