ದಕ್ಷಿಣ ಕನ್ನಡ ಜಿಲ್ಲೆಯ ಜನರನ್ನು ಕಾಡುತ್ತಿರುವ ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ ಮುಂತಾದ ಸಮಸ್ಯೆಗಳನ್ನು ಬಗೆಹರಿಸಬೇಕಾದ ಬಿಜೆಪಿಯ ಶಾಸಕರು ಕಂಬಳ, ಹುಲಿ ಕುಣಿತ, ದೋಸೆ ಹಬ್ಬ, ಆಹಾರ ಮೇಳದಂತಹ ಆಡಂಬರದ ಉತ್ಸವ ಆಯೋಜನೆಯಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿಗಳೂ ಬಿಜೆಪಿ ಜತೆಗೆ ಜಿದ್ದಿಗೆ ಬಿದ್ದಿದ್ದು, ಕಂಬಳ, ಹುಲಿಕುಣಿತ ಆಯೋಜನೆಯಲ್ಲಿ ಬ್ಯುಸಿ ಇದ್ದಾರೆ ಎಂದು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಆರೋಪಿಸಿದರು.
ಜಿಲ್ಲೆಯ ಮಂಗಳೂರು ನಗರದಲ್ಲಿ ಸಿಪಿಐಎಂ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದ್ದು, ಜಿಲ್ಲೆಯ ಜನರ ಬದುಕನ್ನು ಹಸನುಗೊಳಿಸಲು ಅಗತ್ಯವಾದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾತನಾಡಿದರು.
“ಖಾಸಗಿ ವೈದ್ಯಕೀಯ ಕಾಲೇಜುಗಳು, ಕಾರ್ಪೊರೇಟ್ ಆಸ್ಪತ್ರೆಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು, ರಿಯಲ್ ಎಸ್ಟೇಟ್ ಲಾಬಿಗಳು ಜಿಲ್ಲೆಯ ರಾಜಕಾರಣದ ಮೇಲೆ ಪೂರ್ತಿ ಹಿಡಿತ ಸಾಧಿಸಿವೆ. ಜನಪ್ರತಿನಿಧಿಗಳು ಇವುಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಖಾಸಗೀಕರಣದಿಂದ ಬಡ ಜನರು ಆರೋಗ್ಯ, ಶಿಕ್ಷಣ ಸೇವೆಯಿಂದ ವಂಚಿತರಾಗಬೇಕಾದ ದುಃಸ್ಥಿತಿ ಎದುರಾಗಿದೆ. ಸರ್ಕಾರಿ ಕ್ಯಾನ್ಸರ್ ಆಸ್ಪತ್ರೆ ಕಿದ್ವಾಯಿ, ಜಯದೇವ ಹೃದ್ರೋಗ ಆಸ್ಪತ್ರೆಯ ಘಟಕಗಳು ಜಿಲ್ಲೆಯ ಪಾಲಿಗೆ ಈಗಲೂ ಮರೀಚಿಕೆಯಾಗಿವೆ. ವೆನ್ಲಾಕ್ ಸರ್ಕಾರಿ ಜಿಲ್ಲಾ ಆಸ್ಪತ್ರೆಯೂ ಸೇರಿದಂತೆ ಅನೇಕ ಸರ್ಕಾರಿ ಆಸ್ಪತ್ರೆಗಳು ಖಾಸಗಿ ವೈದ್ಯಕೀಯ ಕಾಲೇಜುಗಳ ಪಾಲಾಗಿವೆ” ಎಂದು ದೂರಿದರು.

ಸಿಪಿಐಎಂ ದ. ಕ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, “ಜಿಲ್ಲೆಯಲ್ಲಿ ವಸತಿರಹಿತರಿಗೆ ಮನೆ ನಿವೇಶನ ಹಸ್ತಾಂತರಿಸದೇ 2 ದಶಕಗಳಾಗಿವೆ. ಪಾಲಿಕೆ ವ್ಯಾಪ್ತಿಯಲ್ಲಿ ಮನೆರಹಿತ ಬಡವರಿಗೆ ಹಕ್ಕುಪತ್ರ ನೀಡಿ 8 ವರ್ಷಗಳಾದ ಬಳಿಕವೂ ಆ ವಸತಿ ಯೋಜನೆ ಆರಂಭವಾಗಿಲ್ಲ. ನಗರವು ರಿಯಲ್ ಎಸ್ಟೇಟ್, ಟಿಡಿಆರ್ ದಂಧೆಕೋರರ ಸ್ವರ್ಗವಾಗಿ ಮಾರ್ಪಟ್ಟಿದೆ. ಮೀನುಗಾರಿಕಾ ದಕ್ಕೆಯಂತೂ ಗಬ್ಬು ನಾರುತ್ತಿದೆ, ಇಲ್ಲಿ ಆಳುವ ಸರ್ಕಾರಗಳು ಮೀನುಗಾರರು, ವ್ಯಾಪಾರಿಗಳು, ಕಾರ್ಮಿಕರನ್ನು ನಿಕೃಷ್ಟವಾಗಿ ಕಾಣುತ್ತಿವೆ. ಮೀನುಗಾರರ ಸಮಸ್ಯೆಗಳನ್ನು ಕೇಳುವವರೇ ಇಲ್ಲದಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯ ಕೃಷ್ಣಪ್ಪ ಕೊಂಚಾಡಿ ಮಾತನಾಡಿ, “ಜಿಲ್ಲೆಯ ಜನಸಂಖ್ಯೆಯಲ್ಲಿ ಆದಿವಾಸಿಗಳು, ಅರಣ್ಯವಾಸಿಗಳು, ದಲಿತರು, ಅಲೆಮಾರಿ ಸಮುದಾಯಗಳ ಪ್ರಮಾಣ ಶೇ.16ರಷ್ಟಿದೆ. ಇವರನ್ನು ಜಿಲ್ಲಾಡಳಿತ, ಜನಪ್ರತಿನಿಧಿಗಳು ಪೂರ್ತಿ ಕಡೆಗಣಿಸಿದ್ದಾರೆ. ಅಭಿವೃದ್ಧಿ ಯೋಜನೆಗಳಲ್ಲಿ ಈ ಸಮುದಾಯಗಳಿಗೆ ಜಾಗವೇ ಇಲ್ಲ” ಎಂದು ಹೇಳಿದರು.
ಕಾರ್ಯಕ್ರಮಕ್ಕೂ ಮೊದಲು ನಡೆದ ಮೆರವಣಿಗೆಯಲ್ಲಿ ಆರೋಗ್ಯ, ಉದ್ಯೋಗ, ಶಿಕ್ಷಣ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿ ಜನರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿ ನಗರದ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನ ಸೌಧದವರೆಗೆ ಬೃಹತ್ ಜಾಥಾ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ಸಿಪಿಐಎಂ ಕಾರ್ಯಕರ್ತರು ಕೆಂಬಾವುಟವನ್ನು ಕೈಯಲ್ಲಿ ಹಿಡಿದು ಹೆಜ್ಜೆಹಾಕಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಹಿಂದೂಗಳು ನಮ್ಮ ಶತ್ರುಗಳಲ್ಲ, ನಮ್ಮ ಶತ್ರು ಆರ್ಎಸ್ಎಸ್: ನಿವೃತ್ತ ನ್ಯಾ.ಬಿ.ಜಿ ಕೋಲ್ಸೆ
ʼಜನ ಸಾಮಾನ್ಯರ ನಡಿಗೆ ಉತ್ತಮ ಬದುಕಿನ ಕಡೆಗೆʼ ಧ್ಯೇಯವಾಕ್ಯದಲ್ಲಿ ನಡೆದ ಈ ಜಾಥಾದ ಉದ್ದಕ್ಕೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಪ್ರತಿಭಟನಕಾರರು ಘೋಷಣೆ ಕೂಗಿದರು. ಅಭಿವೃದ್ದಿಯ ಫಲ ಜನಸಾಮಾನ್ಯರಿಗೂ ತಲುಪುವಂತೆ ಯೋಜನೆಗಳನ್ನು ರೂಪಿಸಬೇಕು. ಬಡವರಿಗೂ ವಸತಿ ಸಿಗಬೇಕು. ಖಾಸಗಿ ಆಸ್ಪತ್ರೆಗಳ ಲೂಟಿಗೆ ಕಡಿವಾಣ ಹಾಕಬೇಕು. ಶಿಕ್ಷಣ ಸಂಸ್ಥೆಗಳ ಲಾಬಿಯನ್ನು ಮಟ್ಟ ಹಾಕಬೇಕು” ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಸಿಪಿಎಂ ಮುಖಂಡರಾದ ಬಿ ಎಂ ಭಟ್, ವಸಂತ ಆಚಾರಿ, ಜಯಂತಿ ಶೆಟ್ಟಿ, ಸುಕುಮಾರ್, ಸದಾಶಿವ ದಾಸ್ ಮಾತನಾಡಿದರು. ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ ಯಾದವ ಶೆಟ್ಟಿ ಬಹಿರಂಗ ಸಭೆಯ ಅಧ್ಯಕ್ಷತೆ ವಹಿಸಿದ್ದರು. ನಗರ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಕಾರ್ಯಕ್ರಮ ನಿರೂಪಿಸಿದರು.





