ಮಂಗಳೂರು ನಗರದಲ್ಲಿ ಇತ್ತೀಚಿಗೆ ಹನಿಟ್ರ್ಯಾಪ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ಕೇರಳ ಮೂಲದ ಗಲ್ಫ್ ಉದ್ಯಮಿಯೊಬ್ಬರಿಗೆ ಬಂಟ್ವಾಳದ ಹನಿಟ್ರ್ಯಾಪ್ ತಂಡವೊಂದು ಮೋಸ ಮಾಡಿ 44.80 ಲಕ್ಷ ರೂ.ಗಳನ್ನು ವಂಚಿಸಿದೆ ಎಂದು
ಬೆಂಗಳೂರಿನ ನ್ಯಾಯವಾದಿ ಸೌದಾ ಆರೋಪಿಸಿದ್ದಾರೆ.
ಮಂಗಳೂರಿನ ವುಡ್ಲ್ಯಾಂಡ್ ಹೊಟೇಲ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಕೇರಳದ 53 ವರ್ಷದ ಮುಹಮ್ಮದ್ ಅಶ್ರಫ್ ತಾವರಕಡನ್ ಎಂಬುವವರು ಸೌದಿಯಲ್ಲಿ ಉದ್ಯೋಗದಲ್ಲಿದ್ದಾರೆ. ಅವರಿಗೆ ಬಶೀರ್ ಕಡಂಬು, ಸಫಿಯಾ ಮಾಣಿ ಮತ್ತು ಇತರ ಆರೋಪಿಗಳು ಸೆ.24ರಂದು ಮಂಗಳೂರಿಗೆ ಕರೆಸಿ ಹೆಣ್ಣು ತೋರಿಸುವ ನೆಪದಲ್ಲಿ ಫೋಟೋ ವಿಡಿಯೋ ಮಾಡಿಸಿ ಬಳಿಕ ಹಣಕ್ಕಾಗಿ ಬೆದರಿಕೆ ಹಾಕಿದ್ದಾರೆ. ವಿವಾಹಿತರಾಗಿರುವ ಅಶ್ರಫ್ ವೀಡಿಯೋ ಬಹಿರಂಗವಾಗುತ್ತದೆ ಎಂಬ ಭಯದಿಂದ 44.80 ಲಕ್ಷ ಹಣವನ್ನು ಆರೋಪಿಗಳ ವಿವಿಧ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿದ್ದಾರೆ. ಈ ಮಧ್ಯೆ ಅಶ್ರಫ್ ಅವರ ಪತ್ನಿಗೂ ಬೇರೆಯವರ ಅಶ್ಲೀಲ ವಿಡಿಯೋವೊಂದನ್ನು ಕಳುಹಿಸಿ ಹಣ ನೀಡದಿದ್ದರೆ ನಿಮ್ಮ ಪತಿಯ ಇಂತಹ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಕಳೆದ ವಾರ ವಿಟ್ಲ ಪೊಲೀಸ್ ಠಾಣೆಗೆ ಆಗಮಿಸಿ ಅಶ್ರಫ್ ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಒಂದು ವಾರ ಕಳೆದರೂ ಆರೋಪಿಗಳ ಬಂಧನವಾಗಿಲ್ಲ. ಕೇಸ್ ದಾಖಲಿಸಲು ಪೊಲೀಸ್ ಠಾಣೆಯಲ್ಲಿ ಸಾಕಷ್ಟು ತೊಂದರೆಯಾಗಿತ್ತು. ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಕೇಸ್ ದಾಖಲಾಗಿದೆ. ಇದೀಗ ಸಂತ್ರಸ್ತ ಅಶ್ರಫ್ ಅವರಿಗೆ ನ್ಯಾಯ ದೊರೆಯಬೇಕಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಖಾಲಿಯಿರುವ ಹುದ್ದೆಗಳ ಭರ್ತಿ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ
ಆರೋಪಿ ಸಫಿಯಾ ಎಂಬುವವರು 2010ರಿಂದಲೂ ಹನಿಟ್ರ್ಯಾಪ್ನಂತಹ ಕೃತ್ಯಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಇಂತಹ ಹಲವು ತಂಡಗಳು ಮಂಗಳೂರು ಸೇರಿದಂತೆ ವಿವಿಧೆಡೆ ಸಕ್ರಿಯವಾಗಿದೆ. ಇವರು ಉದ್ಯಮಿಗಳನ್ನು ತಮ್ಮ ಬಲೆಗೆ ಹಾಕಿಕೊಂಡು ಹಣ ದೋಚುತ್ತಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಬೇಕು” ಎಂದು ಸೌದಾ ಒತ್ತಾಯಿಸಿದ್ದಾರೆ.
ಸಂತ್ರಸ್ತ ಮುಹಮ್ಮದ್ ಅಶ್ರಫ್, ಅಬ್ದುಲ್ ರಝಾಕ್ ಇದ್ದರು.





