ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ ವಿಷಯ ಹಾಗೂ ನಾಗಮೋಹನ್ ದಾಸ್ ಆಯೋಗ ನೀಡಿರುವ ವರದಿಯನ್ನು ವಿರೋಧಿಸಿ ಮಾರ್ಚ್ 25ರಂದು ಬೆಂಗಳೂರಿನ ಫ್ರಿಡಂ ಪಾರ್ಕ್ನಲ್ಲಿ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಛಲವಾದಿ ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ವಿ.ರಮೇಶ್ ಛಲವಾದಿ ಹೇಳಿದರು.
ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಅವರು ಮಾತನಾಡಿ ನಾಗಮೋಹನ್ ದಾಸ್ ಆಯೋಗದ ವರದಿ ಅವೈಜ್ಞಾನಿಕವಾಗಿದ್ದು ಅದನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು. ಜೊತೆಗೆ ಹೋರಾಟವನ್ನು ಯಶಸ್ವಿಗೊಳಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಮಾರ್ಚ್ 25, 2026 ರಂದು ಬೆಂಗಳೂರಿನ ಫ್ರಿಡಂ ಪಾರ್ಕ್ನಲ್ಲಿ ನಡೆಯಲಿರುವ ಬಲಗೈ ಜಾತಿಗಳ ಬೃಹತ್ ಹೋರಾಟದಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಮುಖಂಡರು ಮತ್ತು ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಪರಿಶಿಷ್ಟ ಜಾತಿಯ ಹಲವು ಸಮುದಾಯಗಳ ಹಕ್ಕುಗಳು ಮತ್ತು ಭವಿಷ್ಯವನ್ನು ಕಾಪಾಡುವ ಉದ್ದೇಶದಿಂದ ಈ ಹೋರಾಟವನ್ನು ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದೆ. ಆದ್ದರಿಂದ ಬಾಗೇಪಲ್ಲಿ, ಚೇಳೂರು ಹಾಗೂ ಗುಡಿಬಂಡೆ ತಾಲೂಕಿನ ಎಲ್ಲಾ ಹಳ್ಳಿಗಳಿಂದ ಸಮಾಜದ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಐತಿಹಾಸಿಕ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಾತನಾಡಿ ನಾಗಮೋಹನ ದಾಸ್ ಆಯೋಗದ ವರದಿ ಪರಿಶಿಷ್ಟ ಜಾತಿಯ ಇತರೆ ಅನೇಕ ಸಮುದಾಯಗಳ ಶೈಕ್ಷಣಿಕ ಹಾಗೂ ಉದ್ಯೋಗಾವಕಾಶ ಗಳನ್ನು ಕಸಿದುಕೊಳ್ಳುವ ಅನ್ಯಾಯವಾಗಿದ್ದು, ಇದನ್ನು ತಕ್ಷಣವೇ ತಿರಸ್ಕರಿಸಬೇಕು ಎಂದು ಆಗ್ರಹಿಸಿದರು. ಒಕ್ಕೂಟದ ರಾಜ್ಯ ಸಮಿತಿಯಿಂದ ಒಳಮೀಸಲಾತಿ ರಹಿತ ಹಳೆಯ ಮೀಸಲಾತಿ ವ್ಯವಸ್ಥೆಯನ್ನು ಜಾರಿಗೆ ತರಲು ಒತ್ತಾಯಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ತಾಲ್ಲೂಕು ಹಾಗೂ ಜಿಲ್ಲೆಯ ಬಲಗೈ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು ಎಂದು ಹೇಳಿದರು.
ತದನಂತರ ತಾಲ್ಲೂಕು ಅದ್ಯಕ್ಷ ಮುನಿರಾಜು ಮಾತನಾಡಿ ನಮ್ಮ ಸಮುದಾಯದ ಶಕ್ತಿ ಪ್ರದರ್ಶನ ಮಾಡುವ ಸಮಯ ಬಂದಿದೆ. ನಾವು ಮೌನವಾಗಿದ್ದರೆ ಸರ್ಕಾರ ನಮ್ಮನ್ನು ನಿರ್ಲಕ್ಷ್ಯ ಮಾಡುತ್ತದೆ. ನಮ್ಮ ಹಕ್ಕುಗಳಿಗೆ ಧಕ್ಕೆ ಬಂದರೆ ತೀವ್ರ ಹೋರಾಟ ನಡೆಸಲಾಗುವುದು ನಾಗ ಮೊಹನದಾಸ್ ವರದಿಯನ್ನು ಅವೈಜ್ಞಾನಿಕ ಎಂದು ಆರೋಪಿಸಿ, ಯಾವುದೇ ಕಾರಣಕ್ಕೂ ಅದನ್ನು ಜಾರಿಗೆ ತರಬಾರದು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಇದನ್ನು ಓದಿದ್ದೀರಾ..? ಆನ್ಲೈನ್ ನಲ್ಲಿ ಹಾಲು ಖರೀದಿ ವಿರೋಧಿ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ
ಈ ಸಂದರ್ಭದಲ್ಲಿ ತಾಲ್ಲೂಕು ಛಲವಾದಿ ಮಹಾಸಭೆ ಮುಖಂಡರಾದ ವೇಣುಗೋಪಾಲ್, ಓಬಲೇಶ್,ಮುನಿ ನಾರಾಯಣಪ್ಪ,ಮುನಿಯಪ್ಪ ,ನರಸಿಂಹಮೂರ್ತಿ,ವೆಂಕಟೇಶ್, ರಮಣ,ಚಿನ್ನಪ್ಪಯ್ಯ,ಶ್ರೀರಾಮ, ಕೃಷ್ಣಪ್ಪ, ಅಶೋಕ,ಅಂಜಿನಪ್ಪ ಹಾಗೂ ಇತರರು ಹಾಜರಿದ್ದರು.





