ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯ ಸಮೀಕರಣದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಮುಂಡಗೋಡಿನ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಬಿಜೆಪಿಯ ಪ್ರಭಾವಿ ಯುವ ಮುಖಂಡ ರವಿ ಹಾವೇರಿ ಅವರು ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಮುಖಂಡರು ಹಾಗೂ ಕೆಪಿಸಿಸಿ ಸದಸ್ಯರಾದ ವಿವೇಕ್ ಹೆಬ್ಬಾರ್ ಅವರ ನೇತೃತ್ವದಲ್ಲಿ ಈ ಸೇರ್ಪಡೆ ಪ್ರಕ್ರಿಯೆ ನಡೆಯಿತು. ವಿವೇಕ್ ಹೆಬ್ಬಾರ್ ಅವರು ರವಿ ಹಾವೇರಿ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲನ್ನು ಹಾಕಿ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.
ಕಾಂಗ್ರೆಸ್ಗೆ ಆನೆಬಲ: ಮೂಲತಃ ವೃತ್ತಿಯಲ್ಲಿ ಗುತ್ತಿಗೆದಾರರಾಗಿರುವ ರವಿ ಹಾವೇರಿ ಅವರು ಭೋವಿ ಸಮಾಜದ ಪ್ರಬಲ ಮುಖಂಡರಾಗಿದ್ದಾರೆ. ಈ ಹಿಂದೆ ಬಿಜೆಪಿ ಪಕ್ಷದಲ್ಲಿ ಹಲವು ಪ್ರಮುಖ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಅವರು, ಸಂಘಟನಾತ್ಮಕವಾಗಿ ಉತ್ತಮ ಹಿಡಿತ ಹೊಂದಿದ್ದಾರೆ.
ಅವರ ಈ ಸೇರ್ಪಡೆಯಿಂದ ಮುಂಬರುವ ದಿನಗಳಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ‘ಆನೆ ಬಲ’ ಬಂದಂತಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ರವಿ ಹಾವೇರಿ ಅವರು, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಹಾಗೂ ವಿವೇಕ್ ಹೆಬ್ಬಾರ್ ಅವರ ಕಾರ್ಯವೈಖರಿಯನ್ನು ಮೆಚ್ಚಿ ತಾವು ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಶಿರಸಿ | ಆಯ್ದ ಹತ್ಯೆಗಳ ಬಗ್ಗೆ ಮಾತ್ರ ಆಕ್ರೋಶವೇಕೆ? ಉಪೇಂದ್ರ ಪೈ–ಅನಂತಮೂರ್ತಿ ಹೆಗಡೆಗೆ ಅರ್ಜುನ್ ಮಿಂಟಿ ನೇರ ಪ್ರಶ್ನೆ
ಇದೇ ಸಂದರ್ಭದಲ್ಲಿ ಮತ್ತೊಬ್ಬ ಗುತ್ತಿಗೆದಾರರಾದ ನಾಗಪ್ಪ ಯಲ್ಲಪ್ಪ ವಡ್ಡರ (ಹೊಂಡಾ) ಅವರು ಕೂಡ ಪಕ್ಷ ಸೇರ್ಪಡೆಯಾದರು.
ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ, ಜಿಲ್ಲಾಧ್ಯಕ್ಷರಾದ ಸಾಯಿ ಗಾಂವ್ಕರ್ ಅವರು, ಕುಮಟಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಶೆಟ್ಟಿ, ಉತ್ತರ ಕನ್ನಡ ಜಿಲ್ಲೆಯ ಮಹಿಳಾ ಅಧ್ಯಕ್ಷೆ ಶಾರದಾ ಬಾಯಿ ರಾಠೋಡ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಸುಧಾ ಭೋವಿವಡ್ಡರ, ಜ್ಞಾನದೇವ ಗುಡಿಯಾಳ, ಕೃಷ್ಣಾ ಹಿರೇಹಳ್ಳಿ, ಸಲ್ಮಾ ಕಿರಣ ಶೇರಖಾನೆ, ಹಾಗೂ ಸ್ಥಳೀಯ ಕಾಂಗ್ರೆಸ್ ನಾಯಕರು ಹಾಗೂ ರವಿ ಹಾವೇರಿ ಅವರ ಬೆಂಬಲಿಗರು ಉಪಸ್ಥಿತರಿದ್ದರು.





