ಮುಂಡಗೋಡ: ಇಲ್ಲಿನ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (ಪಿ.ಎಸ್.ಐ) ಆಗಿ ಸೇವೆ ಸಲ್ಲಿಸುತ್ತಿದ್ದ ಯಲ್ಲಾಲಿಂಗ ಕುನ್ನೂರ(33) ಅವರು ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲವು ದಿನಗಳಿಂದ ಕಾಮಾಲೆ (Jaundice) ಮತ್ತು ಯಕೃತ್ತಿನ (Liver) ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.
ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನವರಾದ ಯಲ್ಲಾಲಿಂಗ ಅವರು ಅತ್ಯಂತ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದು ಹೆಸರುವಾಸಿಯಾಗಿದ್ದರು.
ಮುಂಡಗೋಡ ಪೊಲೀಸ್ ಠಾಣೆಗೆ ಎರಡನೇ ಬಾರಿಗೆ ಪಿ.ಎಸ್.ಐ ಆಗಿ ಅಧಿಕಾರ ಸ್ವೀಕರಿಸಿದ್ದ ಇವರು, ಈ ಹಿಂದೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿಯೂ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದರು.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಜಾತ್ರಾ ಮಹೋತ್ಸವಗಳಲ್ಲೂ ಜೂಜಿನ ಕರಿನೆರಳು; ಬೀಳಬೇಕಿದೆ ಬ್ರೇಕ್
ಕೇವಲ 33ನೇ ವಯಸ್ಸಿನಲ್ಲಿಯೇ ಜನಸ್ನೇಹಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಅವರು, ಅಕಾಲಿಕ ಮರಣಕ್ಕೆ ತುತ್ತಾಗಿರುವುದು ಸಾರ್ವಜನಿಕರಲ್ಲಿ ಮತ್ತು ಪೊಲೀಸ್ ಇಲಾಖೆಯಲ್ಲಿ ತೀವ್ರ ಆಘಾತ ಮೂಡಿಸಿದೆ. ಮೃತರು ಒಬ್ಬ ಪುತ್ರಿಯನ್ನು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಯುವ ಅಧಿಕಾರಿಯ ಅಗಲಿಕೆಗೆ ಮುಂಡಗೋಡಿನ ಜನತೆ ಹಾಗೂ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಒಬ್ಬ ದಕ್ಷ ಅಧಿಕಾರಿಯನ್ನು ಕಳೆದುಕೊಂಡ ಜಿಲ್ಲೆಯ ಪೊಲೀಸ್ ಪಡೆ ಶೋಕಸಾಗರದಲ್ಲಿ ಮುಳುಗಿದೆ





