ಶ್ರೀನಿವಾಸಪುರ: ಪಟ್ಟಣದ ಎಂ.ಜಿ. ರಸ್ತೆಯಲ್ಲಿ ನಡೆಯಬಹುದಾಗಿದ್ದ ಭೀಕರ ಅಪಘಾತದಿಂದ ಪಾರಾಗುವಂತಾಗಿದೆ ಯಾವುದೇ ಪ್ರಾಣಾಪಯವಿಲ್ಲದೆ ಪೊಲೀಸ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೃಹತ್ ಗಾತ್ರದ ಬೀದಿ ದೀಪ ನೆಲಕ್ಕುರುಳಿದ ಆತಂಕಕಾರಿ ಘಟನೆ ನಗರದಲ್ಲಿ ನಡೆದಿದೆ. ಕೋಲಾರ ಮಾರ್ಗವಾಗಿ ಆಗಮಿಸುತ್ತಿದ್ದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (DAR) ಪೊಲೀಸ್ ವಾಹನವು ತರಕಾರಿ ವೃತ್ತದ ಬಳಿ ಚಲಿಸುವ ವೇಳೆ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾರೆ.
ಈ ವೇಳೆ ನಿಯಂತ್ರಣ ತಪ್ಪಿದ ವಾಹನವು ರಸ್ತೆ ವಿಭಜಕವನ್ನು (ಡಿವೈಡರ್) ಹತ್ತಿ ಅಲ್ಲಿದ್ದ ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ದ್ವಿಚಕ್ರ ವಾಹನ ಸವಾರ ಮಹಿಳೆಗೆ ತಲೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಎಂ.ಜಿ. ರಸ್ತೆಯಲ್ಲೇ ಅವರೆಕಾಯಿ ಮೂಟೆಗಳನ್ನು ಲೋಡ್ ಮಾಡಲು ಟೆಂಪೋ ಆಟೋ ಮತ್ತು ಟ್ರ್ಯಾಕ್ಟರ್ಗಳನ್ನು ಸಾಲಾಗಿ ನಿಲ್ಲಿಸುವುದರಿಂದ ಸಂಚಾರಕ್ಕೆ ತೀವ್ರ ಅಡ್ಡಿಯಾಗುತ್ತಿದೆ.
ಇದನ್ನು ಓದಿದ್ದೀರಾ..?ಶಿಡ್ಲಘಟ್ಟ | ಸರ್ಕಾರಿ ಶಾಲೆ ಜಾಗ ಒತ್ತುವರಿ ಆರೋಪ: ತಹಶೀಲ್ದಾರ್ ಭೇಟಿ, ತೆರವುಗೊಳಿಸುವ ಭರವಸೆ
ಈ ಕುರಿತು ಮಂಡಿಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕನ್ನಡ ಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳಿಂದ ನಿರಂತರ ಹೋರಾಟ ಮಾಡಲಾಗುತ್ತಿದೆ. ಆದರೆ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಮೌನಕ್ಕೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇಕ್ಕಟ್ಟಾದ ರಸ್ತೆಯಲ್ಲಿ ವಾಹನ ಸವಾರರು ಮತ್ತು ಪಾದಚಾರಿಗಳು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ಸುಗಮ ಸಂಚಾರ ಎಂಬುದು ಇಲ್ಲಿ ಮರೀಚಿಕೆಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಈ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.




