‘ಪ್ರಸಾದ್ ಯೋಜನೆ’ಯಿಂದ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ದಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದರು.
ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಸಾದ್ ಯೋಜನೆ’ಯ ‘ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಚಾಮುಂಡಿ ಬೆಟ್ಟದಲ್ಲಿ ಪರಿಸರಕ್ಕೆ ದಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುತ್ತಿದೆ. ಬೆಟ್ಟಕ್ಕೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಚಾಮುಂಡಿ ಬೆಟ್ಟದಲ್ಲಿ ವಾಸಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಆದ್ದರಿಂದಲೇ, ಇಂದು ಚಾಮುಂಡಿ ಬೆಟ್ಟದ ನಿವಾಸಿಗಳ ಅಹವಾಲುಗಳನ್ನು ಹಾಗೂ ಅನಿಸಿಕೆಗಳನ್ನು ಸ್ವೀಕರಿಸಲಾಗುತ್ತಿದೆ. ನಿವಾಸಿಗಳ ಸಲಹೆಗಳನ್ನು ಪಡೆದು ಅದರಂತೆ ಯೋಜನೆ ರೂಪಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಸಕರಾದ ಜಿ.ಟಿ. ದೇವೇಗೌಡ ಮಾತನಾಡಿ, ವಿವಿಐಪಿ ದರ್ಶನದ ಸಂಧರ್ಭದಲ್ಲಿ ಇತರೆ ಜನರು 50 ಜನ ನುಗ್ಗುವುದರಿಂದ ಗೊಂದಲ ಉಂಟಾಗುತ್ತದೆ. ಇದಕ್ಕೆ ಒಂದು ಪರಿಹಾರವನ್ನು ರೂಪಿಸಬೇಕು. ದೇವಸ್ಥಾನದ ಪ್ರವೇಶಕ್ಕೆ ಒಂದು ಕಡೆ, ಹೊರಗೆ ಬರಲು ಇನ್ನೊಂದು ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಈ ಹಿಂದೆ ಬೆಟ್ಟದಲ್ಲಿ ಅಂಗಡಿ ಮಳಿಗೆಗಳನ್ನು ಇದ್ದವರಿಗೆ, ಮೂಲದಲ್ಲಿ ಇದ್ದ ಅರ್ಹರಿಗೆ ಮಾತ್ರ ಮಳಿಗೆ ಮಾಡಲು ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಮಲೆ ಮಹದೇಶ್ವರ ಬೆಟ್ಟ | ಚಿರತೆ ದಾಳಿಗೆ ಯುವಕ ಮೃತಪಟ್ಟ ಪ್ರಕರಣ; ರೈತ ಸಂಘದಿಂದ ರಸ್ತೆ ತಡೆ

ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಪ್ರಸಾದ್ ಯೋಜನೆಯಡಿ ₹45.70 ಕೋಟಿ ರೂಪಾಯಿ ಅನುಧಾನ ಮಂಜೂರು ಆಗಿರುತ್ತದೆ. ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಲು ಸರತಿ ಸಾಲಿಗೆ ಕಲ್ಲಿನ ಕ್ಯೂ ಮಂಟಪ ಮಾಡಲಾಗುತ್ತಿದೆ. ಮಹಾಬಲೇಶ್ವರ ದೇವಸ್ಥಾನದ ಪಕ್ಕದಲ್ಲಿ ಕ್ಯೂ ಬಂದು ದೇವಸ್ಥಾನದ ಮುಂಭಾಗದಲ್ಲಿ ಬಂದು ಸೇರುತ್ತದೆ ಎಂದು ಮಾಹಿತಿ ನೀಡಿದರು.
ಈ ವಿಶೇಷ ಸುದ್ದಿ ಓದಿದ್ದೀರಾ? ಮೈಸೂರು ಜಿಲ್ಲೆಯಾದ್ಯಂತ 18 ಸಾವಿರಕ್ಕೂ ಅಧಿಕ BPL ಕಾರ್ಡ್ ರದ್ದು; ಅನರ್ಹತೆಗೆ ಕಾರಣಗಳೇನು?
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.





