ಮೈಸೂರಿನಲ್ಲಿ ಅಂಗನವಾಡಿ ಮಕ್ಕಳಲ್ಲಿರಬಹುದಾದ ವಾಕ್-ಶ್ರವಣ ಸಮಸ್ಯೆಗಳನ್ನು ಆರಂಭದಲ್ಲಿಯೇ ಗುರುತಿಸಿ ಚಿಕಿತ್ಸೆ ನೀಡುವ ಯೋಜನೆಯನ್ನು ರಾಜ್ಯದಲ್ಲಿಯೇ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ವಿನೂತನ ‘ಪ್ರಯಾಸ್‘ ಯೋಜನೆ ಸಂಬಂಧ ಅಂಗನವಾಡಿ ಕಾರ್ಯಕರ್ತೆಯರನ್ನು ಸಜ್ಜುಗೊಳಿಸುವ ತರಬೇತಿ ಆರಂಭವಾಗಿದೆ.
ಜಿಲ್ಲೆಯಲ್ಲಿ 6 ತಿಂಗಳಿನಿಂದ 6 ವರ್ಷದವರೆಗಿನ ಮಕ್ಕಳಲ್ಲಿ ಮಾತು ಅಥವಾ ಕಿವಿ ಸಮಸ್ಯೆ ಕಂಡು ಬಂದಲ್ಲಿ ಆರಂಭದಲ್ಲೇ ಗುರುತಿಸಿ ವಾಕ್ ಮತ್ತು ಶ್ರವಣ ತಜ್ಞರಿಂದ ತಪಾಸಣೆ, ಚಿಕಿತ್ಸೆ ಒದಗಿಸುವ ಜಿಲ್ಲಾಡಳಿತದ ಬಹುಮಹತ್ವದ ಯೋಜನೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಬಹು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಸೆಮಿನಾರ್ ಹಾಲ್ ನಲ್ಲಿ ಜಿಲ್ಲೆಯ 1344 ಅಂಗನವಾಡಿ ಕಾರ್ಯಕರ್ತೆಯರಿಗೆ 5 ಬ್ಯಾಚ್ ಗಳಲ್ಲಿ ಐದು ದಿನಗಳ ಕಾಲ ತರಬೇತಿ ನೀಡಲಾಗುತ್ತಿದೆ.
ಮೈಸೂರಿನಲ್ಲಿ ಬುಧವಾರ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಇದೇ ವೇಳೆ ಮಾತನಾಡಿ “ಜಿಲ್ಲೆಯ ಅಂಗನವಾಡಿಗಳಲ್ಲಿ ಸುಮಾರು 35 ಸಾವಿರ ಮಕ್ಕಳು ಇದ್ದಾರೆ. ಈ ಮಕ್ಕಳಲ್ಲಿ ಕಿವಿ ಮತ್ತು ಮಾತಿನ ತೊಂದರೆಯಂತಹ ಲಕ್ಷಣಗಳು ಕಂಡುಬಂದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಗುರುತಿಸಿ ಗಮನಕ್ಕೆ ತಂದರೆ ಮಕ್ಕಳನ್ನು ತಪಾಸಣೆಗೆ ಒಳಪಡಿಸಿ, ಅವರಿಗೆ ಅಗತ್ಯ ಬೀಳಬಹುದಾದ ಶಸ್ತ್ರಚಿಕಿತ್ಸೆ, ಸಾಧನ ಉಪಕರಣಗಳನ್ನ ಉಚಿತವಾಗಿ ಸಿ.ಎಸ್.ಆರ್ ಮೂಲಕ ಒದಗಿಸುವ ಬಹುಮುಖ್ಯ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ಚಾಲನೆ ನೀಡಿದ್ದಾರೆ” ಎಂದರು.

“ಪ್ರಯಾಸ್ ಹೆಸರಿನ ಈ ಯೋಜನೆ ಯಶಸ್ವಿಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ತುಂಬಾ ಮಹತ್ವದ್ದಾಗಿದೆ. ತಾಯಿಯಂತೆ ಮಕ್ಕಳನ್ನು ಪ್ರೀತಿ, ಕಾಳಜಿಯಿಂದ ನೋಡಿಕೊಳ್ಳುವ ಅಂಗನವಾಡಿ ಕಾರ್ಯಕರ್ತೆಯರು ಆರಂಭದಲ್ಲಿಯೇ ಮಕ್ಕಳ ವಾಕ್ ಮತ್ತು ಶ್ರವಣ ಸಮಸ್ಯೆಯನ್ನು ಗುರುತಿಸುವ ಸಲುವಾಗಿ ತರಬೇತಿ ಆಯೋಜಿಸಲಾಗಿದೆ. ಇಲ್ಲಿ ಪಡೆದುಕೊಂಡ ತರಬೇತಿ ಅನುಭವವನ್ನು ತಮ್ಮ ಕಾರ್ಯಕ್ಷೇತ್ರದ ಅಂಗನವಾಡಿಗಳಲ್ಲಿ ಪ್ರೀತಿಯಿಂದ ಅನುಷ್ಠಾನ ಮಾಡಿದರೆ ಮಕ್ಕಳ ಭವಿಷ್ಯ ಆರೋಗ್ಯ ಉತ್ತಮವಾಗುತ್ತದೆ. ಇದೊಂದು ಅರ್ಥಪೂರ್ಣ ಕಾರ್ಯಕ್ರಮ. ಇದರಲ್ಲಿ ಪ್ರತಿ ಅಂಗನವಾಡಿ ಕಾರ್ಯಕರ್ತೆಯರು ಉತ್ಸಾಹದಿಂದ ತೊಡಗಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಜಿಲ್ಲೆಯ ಮಕ್ಕಳ ಆರೋಗ್ಯದ ಉದ್ದೇಶದಿಂದ ಅನುಷ್ಠಾನಗೊಳಿಸುತ್ತಿರುವ ಪ್ರಯಾಸ್ ಯೋಜನೆ ಅತ್ಯುತ್ತಮ ಪ್ರಯತ್ನವಾಗಿದೆ. ಆರಂಭದಲ್ಲಿಯೇ ಆರೋಗ್ಯ ಸಮಸ್ಯೆಗಳನ್ನು ಗುರುತಿಸುವುದರಿಂದ ಮಕ್ಕಳ ಕಲಿಕಾ ಸಾಮಥ್ರ್ಯಕ್ಕೆ ನೆರವಾಗಲಿದೆ. ಮಕ್ಕಳು ಉತ್ಸಾಹದಿಂದ ಇರಲು ಅವರಲ್ಲಿರುವ ತೊಂದರೆಗಳನ್ನು ನಿವಾರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇಂತಹ ಒಳ್ಳೆಯ ಕಾರ್ಯಕ್ಕೆ ಎಲ್ಲರು ಮುಂದಾಗೋಣ ಎಂದು ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಮಾತನಾಡಿ ‘ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ವಿಶೇಷ ಕಳಕಳಿ, ಕಾಳಜಿಯಿಂದ ಪ್ರಯಾಸ್ ಯೋಜನೆ ರೂಪಿತವಾಗಿದೆ. ಮಕ್ಕಳ ಆರೋಗ್ಯ ಹಾಗೂ ಭವಿಷ್ಯದ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಎಲ್ಲರು ಕೈ ಜೋಡಿಸಿ ಬೆಂಬಲ ನೀಡುವುದು ಅಗತ್ಯವಾಗಿದೆ’ ಎಂದರು.

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ನಿರ್ದೇಶಕಿ ಪುಷ್ಪಾವತಿ ಮಾತನಾಡಿ “ವಾಕ್ ಮತ್ತು ಶ್ರವಣ ಸಮಸ್ಯೆಯಿಂದ ಬಳಲುತ್ತಿದ್ದ ಅನೇಕರು ಪ್ರತಿಷ್ಠಿತ ನಮ್ಮ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆದು ಉನ್ನತ ಶಿಕ್ಷಣ, ಉದ್ಯೋಗ ಪಡೆದು ಬದುಕಿನಲ್ಲಿ ಯಶಸ್ಸು ಕಂಡಿದ್ದಾರೆ. ಹೀಗಾಗಿ, ಆರಂಭಿಕ ಹಂತದಲ್ಲಿಯೇ ಕಂಡು ಬರುವ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಅಂಗನವಾಡಿಗಳಲ್ಲಿ ಮಕ್ಕಳ ತೊಂದರೆಗಳನ್ನು ಗುರುತಿಸಿ ಶಿಫಾರಸು ಮಾಡುವ ಬಗ್ಗೆ ವಿವರವಾಗಿ ತಿಳಿಸಿಕೊಡುತ್ತಿದ್ದೇವೆ. ಈ ತರಬೇತಿಯ ಪ್ರಯೋಜನ ಪಡೆಯುವುದರಿಂದ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ನಿಮ್ಮ ಕೊಡುಗೆ ನೀಡಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಮಹಿಳೆಯರ ಮೇಲಿನ ದೌರ್ಜನ್ಯ, ಅಶ್ಲೀಲತೆ, ಮದ್ಯಪಾನ ಹಾವಳಿಯ ವಿರುದ್ಧ ದೇಶ ವ್ಯಾಪಿ ಪ್ರತಿಭಟನೆ
ಆಡಿಯಾಲಾಜಿ ಪ್ರೊ. ಡಾ. ಎಂ. ಸಂದೀಪ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಸುರೇಶ್ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಇದ್ದರು.





