ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಲಕ್ಷ್ಮಿನಾರಾಯಣ ನಾಗವಾರ ಸ್ಥಾಪಿತ) ರಾಜ್ಯ ಸಂಘಟನಾ ಕಾರ್ಯದರ್ಶಿ ದೇವಗಳ್ಳಿ ಸೋಮಶೇಖರ್ ಮೈಸೂರು ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಒಳಮೀಸಲಾತಿ ಹಾಗೂ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಮಾರ್ಚ್.4ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿ, ಹಕ್ಕೊತ್ತಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಲಾಗುವುದು ಎಂದು ಹೇಳಿದರು.
ಏಕಕಾಲದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಕಳಿಸಿಕೊಡುವಂತೆ ಕೋರಲಾಗುವುದು. ಹಾಗೆಯೇ, ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳ ಕಾರ್ಯಕರ್ತರು ನೇರವಾಗಿ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಒಳಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ನಡೆಸಿರುವ ಅವೈಜ್ಞಾನಿಕ ರೋಸ್ಟರ್ ಬಿಂದುವಿನಿಂದಾಗಿ ನೇಮಕಾತಿಗಳಲಿ ‘ಬಿ’ ಮತ್ತು ‘ಸಿ’ ವರ್ಗಗಳಿಗೆ ಅನ್ಯಾಯವಾಗಿದ್ದು, ಕೂಡಲೇ ಸರಿಪಡಿಸಬೇಕು. ರಾಜ್ಯದಲ್ಲಿ ಅಕ್ರಮ-ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಭೂರಹಿತ ಬಡವರಿಗೆ ಕೂಡಲೇ ಸಾಗುವಳಿ ಹಕ್ಕುಪತ್ರ ಹಾಗೂ ಅವಕಾಶ ವಂಚಿತರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದರು.
ಅಲೆಮಾರಿ ಸಮುದಾಯ ಮತ್ತು ಪೌರ ಕಾರ್ಮಿಕ ವರ್ಗಕ್ಕೆ ಪ್ರತ್ಯೇಕವಾಗಿ ಮೀಸಲಾತಿ ನಿಗದಿಪಡಿಸಬೇಕು. ಎಸ್ಎಸ್ಪಿ-ಟಿಎಸ್ಪಿ ಹಣವನ್ನು ರಾಜ್ಯ ಸರ್ಕಾರ ದುರುಪಯೋಗಪಡಿಸಿಕೊಂಡಿದ್ದು ಸರಿಸುಮಾರು ₹45 ಸಾವಿರ ಕೋಟಿ ರೂಪಾಯಿ ಹಣವನ್ನು ಗ್ಯಾರೆಂಟಿ ಯೋಜನೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಂಡಿದೆ. ಮೂಲ ಉದ್ದೇಶಕ್ಕೆ ಮೀಸಲಿರಿಸಿದ್ದ ಹಣ ಬೇರೆಯದಕ್ಕೆ ಬಳಕೆ ಮಾಡಿರುವುದು ಖಂಡನಿಯ ಹಾಗೂ ಕಾಯ್ದೆ ದುರುಪಯೋಗವಾಗಿರುತ್ತದೆ.
ಎಸ್ಸಿ, ಎಸ್ಟಿ ಸಮುದಾಯಗಳ ತಲಾ ಆದಾಯ ಮಿತಿಯನ್ನು ₹2.5 ಲಕ್ಷ ರೂಪಾಯಿಯಿಂದ ₹15 ಲಕ್ಷ ರೂಪಾಯಿಗೆ ಏರಿಕೆ ಮಾಡಬೇಕು. ರಾಜ್ಯದ ವಿಶ್ವ ವಿದ್ಯಾಲಯಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಖಾಯಂ ಪ್ರಾಧ್ಯಪಕರನ್ನು ನೇಮಕಗೊಳಿಸಿ, ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರನ್ನು ಒದಗಿಸಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಖಾಲಿಯಿರುವ 2.5 ಲಕ್ಷ ಹುದ್ದೆಗಳಿಗೆ ನೇಮಕಾತಿಯನ್ನು ಆರಂಭಿಸಬೇಕೆಂಬ ಹಕ್ಕೊತ್ತಾಯಗಳನ್ನು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಯುಗಧರ್ಮ | ಪ್ರಾಬಲ್ಯವನ್ನು ತಿರಸ್ಕರಿಸುವುದು ಭಾರತೀಯ ಒಕ್ಕೂಟದ ಧರ್ಮ
ಪತ್ರಿಕಾಗೋಷ್ಠಿಯಲ್ಲಿ ತಳೂರು ಪ್ರಸನ್ನ, ರಾಜಶೇಖರ ಕೋಟೆ, ಎಸ್ ಆರ್ ಎಸ್ ಮಂಜು ಇದ್ದರು.





