ಪ್ರವಾದಿ ಮುಹಮ್ಮದ್ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್(Basanagouda Patil Yatnal) ವಿರುದ್ಧ ಎಫ್ಐಆರ್(FIR) ದಾಖಲಿಸಲಾಗಿದೆ.
ಹುಬ್ಬಳ್ಳಿಯಲ್ಲಿ ಮಾಡಿದ್ದಾರೆ ಎನ್ನಲಾದ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಹನ್ನಾನ್ ಎಂಬುವರು ವಿಜಯಪುರ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
“ಏಪ್ರಿಲ್ 7ರಂದು ಹುಬ್ಬಳ್ಳಿಯ ಬಾನಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ್, ಇಸ್ಲಾಂ ಧರ್ಮ ಮತ್ತು ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದು, ಶಾಂತಿ ಸೌಹಾರ್ದತೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
“ಯತ್ನಾಳ ಅವರು ‘ಬಾಳ ಸಾಬ್ ಠಾಕ್ರೆ ಮನೆಯಲ್ಲಿ ಮುಹಮ್ಮದ್ ಪೈಗಂಬರ್ ಹುಟ್ಟಿದ್ದಾನೆ’ ಎಂಬ ಆಧಾರರಹಿತ ಹೇಳಿಕೆ ನೀಡಿದ್ದು, ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ಈ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ಉಂಟಾಗುವ ಸಾಧ್ಯತೆಯಿದೆ” ಎಂದು ದೂರುದಾರರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಿಜಯನಗರ | ಬೆಲೆ ಕುಸಿತ; ಈರುಳ್ಳಿ, ಟೊಮೆಟೊ ರಸ್ತೆಗೆ ಚೆಲ್ಲಿ ರೈತರ ಪ್ರತಿಭಟನೆ
“ಯತ್ನಾಳ ಅವರ ಈ ಕೃತ್ಯವು ಭಾರತೀಯ ನ್ಯಾಯ ಸಂಹಿತೆ(BNS)ಯ ಸೆಕ್ಷನ್ಗಳಾದ 196(ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶದಿಂದ ಹೇಳಿಕೆ), 299(ಉದ್ದೇಶಪೂರ್ವಕವಾಗಿ ಅವಮಾನಿಸುವುದು, ಶಾಂತಿ ಭಂಗಪಡಿಸುವ ಉದ್ದೇಶದಿಂದ) ಮತ್ತು 353(ಕೋಮು ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.





