ಹತ್ತಿ, ಮೆಣಸಿನಕಾಯಿ, ಭತ್ತ ಸೇರಿದಂತೆ ಹಲವು ಬೆಳೆಗಳು ಮಳೆಯಿಂದ ಹಾನಿಗೊಳಗಾಗಿದ್ದು, ನಷ್ಟ ಅನುಭವಿಸುತ್ತಿರುವ ರೈತರಿಗೆ ಪರಹಾರ ಘೋಷಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ. ಯಾವುದೇ ವಿಳಂಬ ಮಾಡದೇ ಪರಿಹಾರ ಘೋಷಿಸಬೇಕು ಎಂದು ರಾಯಚೂರು ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದೆ.
ಜಿಲ್ಲೆಯಲ್ಲಿ ವ್ಯಾಪಕವಾಗಿ ಹತ್ತಿ ಬೆಳೆಯಲಾಗಿದೆ. ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಹತ್ತಿ ಬರುತ್ತಿದೆ. ಪ್ರತಿ ಕ್ವಿಂಟಲಿಗೆ ಈಗ ರೂ. 6500 ರಿಂದ 7000 ರೂಪಾಯಿವರೆಗೆ ಮಾತ್ರ ಸಿಗುತ್ತಿದೆ. ಕೇಂದ್ರ ಸರ್ಕಾರ 8110 ರೂಗಳ ಬೆಂಬಲ ಬೆಲೆ ಘೋಷಿಸಿದ್ದರೂ, ಖರೀದಿ ಕೇಂದ್ರಗಳಲ್ಲಿ ಅಧಿಕಾರಿಗಳ ಭಾರೀ ಭ್ರಷ್ಟಾಚಾರದ ಪರಿಣಾಮವಾಗಿ ರೈತರಿಗೆ ದರ ಲಭಿಸುತ್ತಿಲ್ಲ ಎಂದು ಸಂಘದ ಮುಖಂಡರು ಆರೋಪಿಸಿದರು.
ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಹತ್ತಿ, ಭತ್ತ, ಮೆಣಸಿನಕಾಯಿ, ಜೋಳ, ತೊಗರಿ, ಈರುಳ್ಳಿ ಸೇರಿದಂತೆ ವಿವಿಧ ತರಕಾರಿ ಬೆಳೆಗಳನ್ನು ಬೆಳೆಯಲಾಗಿದೆ. ಆದರೆ ಅತಿಯಾದ ಮಳೆಯಿಂದಾಗಿ ರೈತರ ಬೆಳೆಗಳಿಗೆ ಭಾರೀ ನಷ್ಟವಾಗಿದೆ. ಈ ಕುರಿತು ರೈತ ಸಂಘ ಸರ್ಕಾರದ ಗಮನಕ್ಕೆ ತಂದಿದ್ದು, ಮುಖ್ಯಮಂತ್ರಿಗಳು ಸ್ವತಃ ವೈಮಾನಿಕ ಸಮೀಕ್ಷೆ ನಡೆಸಿ, ವಿವಿಧ ಬೆಳೆಗಳಿಗೆ ಅನುಗುಣವಾಗಿ ಪರಿಹಾರದ ಮೊತ್ತವನ್ನು ಘೋಷಿಸಿದ್ದಾರೆ. ಆದಾಗ್ಯೂ, ಜಿಲ್ಲೆಯ ಯಾವುದೇ ರೈತರ ಖಾತೆಗೆ ಇದುವರೆಗೂ ಅತೀವೃಷ್ಟಿ ಪರಿಹಾರದ ಹಣ ಜಮಾ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹತ್ತಿ ಖರೀದಿಗಾಗಿ ನೋಂದಣಿ ಮಾಡಿಕೊಳ್ಳುವುದೇ ರೈತರಿಗೆ ದೊಡ್ಡ ಸವಾಲಾಗಿದ್ದು, ಸ್ಲಾಟ್ ಬುಕ್ಕಿಂಗ್ ಕೇವಲ 30 ಸೆಕೆಂಡ್ಗಳಲ್ಲಿ ಮುಕ್ತಾಯವಾಗುತ್ತಿರುವುದರಿಂದ ಬಹುತೇಕ ರೈತರು ನೋಂದಣಿ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದನ್ನು ತಕ್ಷಣ ಸರಿಪಡಿಸುವಂತೆ ಅವರು ಆಗ್ರಹಿಸಿದರು. ಹತ್ತಿ, ತೊಗರಿ, ಭತ್ತ ಮತ್ತು ಜೋಳ ಖರೀದಿ ಕೇಂದ್ರಗಳನ್ನು ಸಮಯಕ್ಕೆ ಸರಿಯಾಗಿ ತೆರೆಯಬೇಕು ಹಾಗೂ ರೈತರ ಖಾತೆಗೆ ಹಣವನ್ನು ಕಾಲಮಿತಿಯೊಳಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.
ಬೆಂಬಲ ಬೆಲೆಯಲ್ಲಿ ಜೋಳ ಖರೀದಿಗೆ ಜಿಪಿಎಸ್ ಪರಿಶೀಲನೆ ನಡೆಯುತ್ತಿಲ್ಲ. ಅದನ್ನು ಕೂಡಲೇ ಪ್ರಾರಂಭಿಸಬೇಕು.
ಅತಿಯಾದ ಮಳೆಯಿಂದ ಗ್ರಾಮೀಣ ಭಾಗದ ರಸ್ತೆಗಳು ಹದಗೆಟ್ಟಿರುವುದರಿಂದ ಅವುಗಳನ್ನು ತಕ್ಷಣ ದುರಸ್ಥಿ ಕೆಲಸಕ್ಕೆ ಕ್ರಮಕೈಗೊಳ್ಳಬೇಕು. ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಜಿಲ್ಲೆಯಲ್ಲಿ ನಡೆದ ಕಾಮಗಾರಿಗಳು ತೀರಾ ಕಳಪೆಯಾಗಿದ್ದು, ಇದರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಇದನ್ನೂ ಓದಿ:ರಾಯಚೂರು | ಉಸಿರುಗಟ್ಟಿ 20ಕ್ಕೂ ಹೆಚ್ಚು ಕುರಿಗಳು ಸಾವುಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಆಗಾಗ ವ್ಯತ್ಯಯ ಉಂಟಾಗುತ್ತಿದ್ದು, ಅದನ್ನು ಸರಿಪಡಿಸಬೇಕು. ರಾಯಚೂರಿನಲ್ಲಿ ಮೆಣಸಿನಕಾಯಿ ಮಾರುಕಟ್ಟೆ ನಿರ್ಮಿಸುವ ಅಗತ್ಯತೆ ಇದೆ. ಸರ್ಕಾರ ಇದನ್ನು ಆದ್ಯತೆಯಾಗಿ ಪಡಿಗಣಿಸಬೇಕು. ನಾರಾಯಣಪುರ ಬಲದಂಡೆ ನಾಲೆಯ ಉಪಕಾಲುವೆಗಳು 15, 16, 17 ಮತ್ತು 18ರ ಎಡ-ಬಲ ರಸ್ತೆಗಳ ಮೇಲೆ ಪೊದೆ ಬೆಳೆದಿದ್ದು, ರಸ್ತೆಗಳು ಹದಗೆಟ್ಟಿವೆ. ಗಿಡ ಗಂಟಿ ತೆರವುಗೊಳಿಸಿ ಮೊರಂ ಹಾಕಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದರು.
ಪ್ರತಿಭಟನೆಯಲ್ಲಿ ಸಂಘದ ಗೌರವ ರಾಜ್ಯಾಧ್ಯಕ್ಷ ಚಾಮರಸ ಮಾಲೀಪಾಟೀಲ್, ದೊಡ್ಡ ಬಸನಗೌಡ ಬಲ್ಲಟಗಿ, ಸುಗೂರಯ್ಯ ಆರ್ ಎಸ್ ಮಠ, ಯಂಕಪ್ಪ ಕಾರಬಾರಿ, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾಳ, ಬಸವರಾಜ ಮಾಲೀಪಾಟೀಲ್, ಲಿಂಗಾರೆಡ್ಡಿ ಪಾಟೀಲ್, ವೀರೇಶ ಗವಿಗಟ್, ಸಿದ್ದಯ್ಯಸ್ವಾಮಿ ಗೋರ್ಕಲ್, ಹೆಚ್ ಶಂಕ್ರಪ್ಪ, ದೇವರಾಜ ನಾಯಕ, ಶರಣಪ್ಪ, ಉಮಾಪತಿ ಗೌಡ, ಬೂದಯ್ಯಸ್ವಾಮಿ, ಗಾಣಧಾಳ, ಅಂಬ್ರೇಶ ಪಾಟೀಲ ಆಶಾಪುರು, ಭೀಮರೆಡ್ಡಿ ಸರ್ಜಾಪುರ, ಚೆನ್ನಾರೆಡ್ಡಿ, ಹಂಪಯ್ಯನಾಯಕ, ನಾಗರಾಜಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.





