ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಬಿಟ್ಟಿ ಅಲ್ಲ ನಮ್ಮ ಹಕ್ಕು. ಐದು ಯೋಜನೆಗಳು ಜನಪರ ಯೋಜನೆಗಳಾಗಿದ್ದು ನುಡಿದಂತೆ ನಡೆದಿದ್ದೇವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.
ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಮೇಳ ಯೋಜನೆಗಳ ಸಮಾವೇಶವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಮಾರ್ಗದರ್ಶನದಲ್ಲಿ ಈ ಯೋಜನೆಗಳನ್ನು ಮೊದಲ ಸಂಪುಟದಲ್ಲಿಯೇ ಜಾರಿಗೆ ತರಲಾಗಿದ್ದು, ಐದು ಗ್ಯಾರಂಟಿ ಯೋಜನೆಗಳಿಗೆ ಒಟ್ಟಾರೆ ೧ ಲಕ್ಷ ೧೨ ಸಾವಿರ ಕೋಟಿ ವೆಚ್ಚವಾಗಿದೆ. ಶಕ್ತಿ ಯೋಜನೆ ೧೧-೦೬-೨೦೨೩ ರಂದು ಪ್ರಾರಂಭವಾಗಿದ್ದು, ಇದುವರೆಗೆ ಮಹಿಳೆಯರು ಬಸ್ಗಳಲ್ಲಿ ೬೬೫ ಕೋಟಿ ಜನರು ಪ್ರಯಾಣ ಮಾಡಿದ್ದಾರೆ. ಇದು ಪ್ರಪಂಚದಲ್ಲೇ ದಾಖಲೆಯ ಸಾಧನೆಯಾಗಿದೆ ಎಂದು ಹೇಳಿದರು.
ಈ ಯೋಜನೆಯಿಂದ ಮಹಿಳೆಯರ ಜೀವನದಲ್ಲಿ ಸಂತೋಷ ಮತ್ತು ಸ್ವಾತಂತ್ರ್ಯ ಹೆಚ್ಚಾಗಿದೆ. ಮನೆಮಧ್ಯೆ ಸೀಮಿತವಾಗಿದ್ದ ಮಹಿಳೆಯರು ಇದೀಗ ದೇವಸ್ಥಾನಗಳು, ಬಂಧು-ಬಳಗದ ಮನೆಗಳಿಗೆ ಮುಕ್ತವಾಗಿ ಸಂಚರಿಸುತ್ತಿರುವುದು ಕಾಣಸಿಗುತ್ತಿದೆ ಎಂದು ವಿವರಿಸಿದರು. ಶಕ್ತಿ ಯೋಜನೆಗೆ ರಾಜ್ಯದಲ್ಲಿ ಇದುವರೆಗೆ ೧೭,೨೫೮ ಕೋಟಿ ವೆಚ್ಚವಾಗಿದ್ದು, ರಾಯಚೂರು ಜಿಲ್ಲೆಯಲ್ಲಿ ಮಾತ್ರವೇ ೧೧ ಕೋಟಿ ೩೮ ಲಕ್ಷ ಜನರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದಕ್ಕೆ ೪೬೫ ಕೋಟಿ ವೆಚ್ಚವಾಗಿದೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಫಲಾನುಭವಿ ವೃದ್ಧೆ ಬಾಳಮ್ಮ ಅವರು ಗ್ಯಾರಂಟಿ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡ ಅನುಭವವನ್ನು ಹಂಚಿಕೊAಡರು. ನಾಗರತ್ನ ಅವರು ಅನ್ನಭಾಗ್ಯ ಯೋಜನೆಯಿಂದ ತಮ್ಮ ಕುಟುಂಬಕ್ಕೆ ಆಗಿರುವ ಲಾಭದ ಕುರಿತು ಮಾತನಾಡಿದರು. ಈ ಎಲ್ಲಾ ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಮಧ್ಯವರ್ತಿಗಳಿಲ್ಲ, ಏಜೆಂಟ್ ವ್ಯವಸ್ಥೆಯಿಲ್ಲ. ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿದೆ. ಇದು ಇಡೀ ಭಾರತದಲ್ಲೇ ಮೊದಲ ಬಾರಿಗೆ ಜಾರಿಯಾದ ಪಾರದರ್ಶಕ ವ್ಯವಸ್ಥೆಯಾಗಿದೆ. ಮೊದಲು ಈ ಯೋಜನೆಗಳು ಸಾಧ್ಯವಿಲ್ಲ ಎಂದು ಟೀಕಿಸಿದವರೇ ಇಂದು ಬೇರೆ ರಾಜ್ಯಗಳಲ್ಲಿ ಅನುಸರಿಸುತ್ತಿದ್ದಾರೆ. ಆದರೆ ಚುನಾವಣೆ ಬಳಿಕ ಅನೇಕ ರಾಜ್ಯಗಳಲ್ಲಿ ಯೋಜನೆಗಳನ್ನು ನಿಲ್ಲಿಸಲಾಗಿದೆ. ಕರ್ನಾಟಕದಲ್ಲಿ ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನೇತೃತ್ವದಲ್ಲಿ ನುಡಿದಂತೆ ನಡೆದು, ಮುಂದೆಯೂ ಈ ಯೋಜನೆಗಳನ್ನು ಮುಂದುವರಿಸಲಾಗುವುದು ಎಂಬ ಭರವಸೆಯನ್ನು ಸರ್ಕಾರ ನೀಡಿದೆ ಎಂದು ಎಚ್.ಎಂ. ರೇವಣ್ಣ ಹೇಳಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಜೆಜೆಎಂ ಕಾಮಗಾರಿಗೆ ರಸ್ತೆಗಳನ್ನು ಅಗೆದು ಮುಚ್ಚದೆ ನಿರ್ಲಕ್ಷ್ಯ; ಸ್ಥಳೀಯರಲ್ಲಿ ಆತಂಕ
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಪ್ರಕಾಶ ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ಸಂಸದ ಜಿ. ಕುಮಾರ ನಾಯಕ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ, ಶಾಸಕರಾದ ಬಸನಗೌಡ ದದ್ದಲ್, ಬಸನಗೌಡ ತುರ್ವಿಹಾಳ, ಎಂಎಲ್ಸಿಗಳಾದ ಎ. ವಸಂತಕುಮಾರ, ಬಸನಗೌಡ ಬಾದರ್ಲಿ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಆರ್ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ, ಜಾಗೃತ ಕರ್ನಾಟಕದ ಸಂಚಾಲಕ ಪ್ರೊ. ಬಿ.ಸಿ. ಬಸವರಾಜ, ಪ್ರಮುಖರಾದ ನಾಗೇಂದ್ರಪ್ಪ ಮಟಮಾರಿ, ಬಷೀರ್ ಅಹ್ಮದ್ ಸೇರಿದಂತೆ ಅನೇಕರಿದ್ದರು.





