ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಿಯಮ ಉಲ್ಲಂಘಿಸಿ 75 ಬೋಧಕೇತರ ಸಿಬ್ಬಂದಿಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿರುವುದು ಗಂಭೀರ ಅಕ್ರಮವಾಗಿದೆ. ನೇಮಕಾತಿ ಅಧಿಸೂಚನೆಯನ್ನು ಕೂಡಲೇ ರದ್ದುಗೊಳಿಸಬೇಕೆಂದು ಎಂದು ಪರಿಶಿಷ್ಟ ಜಾತಿ ಒಳಮೀಸಲಾತಿ ಹೋರಾಟ ಸಮಿತಿ ರಾಜ್ಯ ಸಂಚಾಲಕ ಅಂಬಣ್ಣ ಆರೋಲಿಕರ ಆರೋಪಿಸಿದರು.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಲಪತಿ ಡಾ. ಹನುಮಂತಪ್ಪ ಅವರು ನಿಯಮಗಳನ್ನು ಮೀರಿ ಹುದ್ದೆಗಳ ನೇಮಕಾತಿಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಅಧಿಸೂಚನೆ ರದ್ದುಗೊಳಿಸದೇ ಇದ್ದಲ್ಲಿ, ಜನವರಿ ಮೊದಲ ವಾರದಲ್ಲಿ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಬೀಗ ಹಾಕಿ ಮುತ್ತಿಗೆ ಹಾಕುವ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿಶ್ವವಿದ್ಯಾಲಯ ನಿಯಮಗಳಂತೆ ಸಹ ಪ್ರಾಧ್ಯಾಪಕರ ನೇಮಕಾತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸದೇ ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಮೂಲಕ ಜ.17 ರಿಂದ 20ವರೆಗೆ ನಡೆಸಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳು ವಿಶ್ವವಿದ್ಯಾಲಯದಿಂದ ನಿಗಧಿಯಾಗಿರುವ ಪರೀಕ್ಷೆ ಕುರಿತಂತೆ ನ್ಯಾಯಾಲಯಕ್ಕೂ ಹೋಗಿದ್ದರಿಂದ ಮೂರು ಬಾರಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮೂರು ತಿಂಗಳಲ್ಲಿ ಸೇವಾ ನಿವೃತ್ತಿ ಹೊಂದಲಿರುವ ಕುಲಪತಿ ಡಾ.ಹನುಮಂತಪ್ಪ ಅವರು ಅಭ್ಯರ್ಥಿಗಳಿಂದ 40
ರಿಂದ 50 ಲಕ್ಷ ರೂ ಹಣ ವಸೂಲಿ ಮಾಡಿಕೊಂಡು ಕಾನೂನು ಬಾಹಿರ ನೇಮಕಾತಿ ಪ್ರಕ್ರಿಯೆ ನಡೆಸಲು ಹೊರಟಿದ್ದಾರೆ ಎಂದರು.
2023 ರಿಂದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳಲ್ಲಿ ಅಕ್ರಮಗಳು ನಡೆಯುತ್ತಿದ್ದರೂ ಯಾರು ಗಮನಹರಿಸುತ್ತಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಎಸ್ಇಪಿ ಮತ್ತು ಟಿಎಸ್ಪಿ ಅನುದಾನವನ್ನೂ ಸಹ ಸಮರ್ಪಕವಾಗಿ ಬಳಸಿಕೊಂಡಿಲ್ಲ. ಐಸಿಎಆರ್ನಿಂದ ಎಸ್ಇಪಿ ಮತ್ತು ಟಿಎಸ್ಪಿ ಯೋಜನೆಯಡಿ 2 ಕೋಟಿ ರೂ ಅನುದಾನ ಬಿಡುಗಡೆಯಾದರೂ ಪಾರದರ್ಶಕವಾಗಿ ಬಳಕೆ ಮಾಡಿಕೊಂಡಿಲ್ಲ. ಕೃಷಿ ವಿಜ್ಞಾನ ಕೇಂದ್ರದ ಪ್ರತಿ ಘಟಕಕ್ಕೆ ಒಂದು ಕೋಟಿ ಮಂಜೂರಿಯಾಗಿದ್ದರೂ ಯಾವುದೇ ಲೆಕ್ಕಪತ್ರ ಇಲ್ಲದೇ ಖರ್ಚು ಮಾಡಲಾಗಿದೆ. ಎಐಸಿಆರ್ಪಿ 18 ಯೋಜನೆಗಳಿಗೆ ಬಿಡುಗಡೆಯಾದ ಅನುದಾನದಲ್ಲಿಯೂ ಭಾರಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ವಿದೇಶಿ ಪ್ರವಾಸಕ್ಕೆ ಅನುದಾನವಿದ್ದರೂ ಒಬ್ಬ ವಿದ್ಯಾರ್ಥಿಯನ್ನೇ ಮೂರು ಬಾರಿ ವಿದೇಶಿ ಪ್ರವಾಸಕ್ಕೆ ಕಳುಹಿಸಲಾಗಿದೆ. ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿಯಲ್ಲಿಯೂ ಹಣವಸೂಲಿ ಮಾಡಲಾಗಿದೆ. ಕಮೀಷನ ಕೊಟ್ಟರೆ ಕೆಲಸ, ಹುದ್ದೆ ನೀಡಲಾಗುತ್ತಿದೆ. ನ್ಯಾಯಾಲಯದ ಆದೇಶಗಳನ್ನು ಗಾಳಿಗೆ ತೂರಿ ನಿವೃತ್ತ ಹೊಂದುವ ಮುನ್ನವೇ ಹಣ ಮಾಡುವದರಿಂದ ಆತುರತೆಯಿಂದ ನೇಮಕಾತಿ ನಡೆಸಲಾಗುತ್ತಿದೆ ಎಂದರು.
ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ, ಕೃಷಿ ಇಲಾಖೆ ಸಚಿವರು, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕುರಿತು ರಾಜ್ಯಪಾಲರು, ಉನ್ನತ ಶಿಕ್ಷಣ, ಕೃಷಿ ಸಚಿವರು ಸೇರಿದಂತೆ ದೂರು ನೀಡಲು ನಿಯೋಗ ತೆರಳಿ ಮನವಿ ಸಲ್ಲಿಸಲಾಗುತ್ತದೆ. ಪರೀಕ್ಷೆ ರದ್ದುಗೊಳಿಸಿ ಹೊಸ ಅಧಿಸೂಚನೆ ಹೊರಡಿಸದೇ ಇದ್ದರೆ ಜನವರಿ ಮೊದಲ ವಾರದಲ್ಲಿ ವಿಶ್ವವಿದ್ಯಾಲಯಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸುವದಾಗಿ ಹೇಳಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಅವ್ಯವಸ್ಥೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ; ಅರ್ಚನಾ ಸುಂಕಾರಿ ಒತ್ತಾಯ
ಪತ್ರಿಕಾಗೋಷ್ಠಿಯಲ್ಲಿ ಕೆ.ಪಿ.ಅನಿಲ್ಕುಮಾರ, ಎಸ್.ರಾಜು, ಮಲ್ಲೇಶ, ರಾಘವೇಂದ್ರ ಬೋರೆಡ್ಡಿ ಇದ್ದರು.





