ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಪೊಲೀಸರು ತನಿಖೆ ನಡೆಸುತಿದ್ದಾರೆ. ಬಿಜೆಪಿಯವರು ರಾಜಕೀಯಕರಣಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಹೇಳಿದರು.
ರಾಯಚೂರು ನಗರದಲ್ಲಿ ಅವರನ್ನು ಭೇಟಿಯಾದ ಮಾಧ್ಯಮಗಳೊಂದಿಗೆ ಮಾತನಾಡಿ, “ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರೇ ಪಾಕಿಸ್ತಾನ ಪರವಾಗಿ ಘೋಷಣೆ ಮಾಡಿದ್ದಾಗ ಏಕೆ ಕ್ರಮ ಕೈಗೊಳ್ಳಲಿಲ್ಲ. ಸರ್ಕಾರ ಘಟನೆಯನ್ನು ತನಿಖೆಗೆ ವಹಿಸಿ ಈಗಾಗಲೇ ಮೂರು ಜನರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ಪರ ಕ್ರಮ ಕೈಗೊಳ್ಳಬೇಕೆನ್ನುವುದು ಅರ್ಥವಿಲ್ಲದ್ದು. ಮಂಡ್ಯದಲ್ಲಿ ಬಿಜೆಪಿಯವರು ಪಾಕಿಸ್ತಾನ ಪರ ಘೋಷಣೆ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಕೊಡಬೇಕೆಂದು ಒತ್ತಾಯ ಮಾಡಬೇಕಾಗುತ್ತದೆ? ಹೆಸರಗಳನ್ನು ಬಹಿರಂಗಪಡಿಸಲು ಆಗುತ್ತಾ” ಎಂದು ಪ್ರಶ್ನಿಸಿದರು.
ರಾಯಚೂರು ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಯಾರು ಎಂಬದನ್ನು ಪಕ್ಷದ ವರಿಷ್ಟರು ನಿರ್ಧರಿಸಲಿದ್ದಾರೆ. ಈಗಾಗಲೇ ಐದು ಜನರ ಹೆಸರುಗಳನ್ನು ಕೆಪಿಸಿಸಿ ಕಳುಹಿಸಲಾಗಿದೆ. ಕೇಂದ್ರೀಯ ಸಮಿತಿ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಯಾರಾಗುತ್ತಾರೆಂದು ಈಗಲೇ ಹೇಳಲು ಆಗುವುದಿಲ್ಲ. ಪಕ್ಷದ ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಸಮೀಕ್ಷೆಯನ್ನೂ ನಡೆಸಲಾಗುತ್ತಿದೆ. ಪಕ್ಷದ ವರಿಷ್ಟರು ಅಂತಿಮಗೊಳಿಸಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿಯೂ ನಡೆಯಲಿದೆ” ಎಂದರು.
“ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಅಗತ್ಯ ಕ್ರಮಕ್ಕೆ ಸೂಚಿಸಲಾಗಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಎಲ್ಲ ಡಿಸಿ, ಸಿಇಒಗಳೊಂದಿಗೆ ಸಭೆ ನಡೆಸಲಾಗಿದೆ. ₹851 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಜಲಾಶಯಗಳಲ್ಲಿ ಲಭ್ಯವಿರುವ ನೀರು ಬಳಸಿಕೊಂಡು ಕೆರೆ ತುಂಬುವ ಕೆಲಸ ನಡೆಸಲು ಸೂಚಿಸಲಾಗಿದೆ” ಎಂದು ತಿಳಿಸಿದರು.
“ತಹಶೀಲ್ದಾರರ ಖಾತೆಗೆ ಹಣ ಜಮಾಮಾಡಲಾಗಿದ್ದು, ತುರ್ತು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಎನ್ಡಿಆರ್ಎಫ್ ನಿಯಮದಂತೆ ಹೊಸ ಕೊಳವೆ ಭಾವಿ ಕೊರೆಯಲು ಅವಕಾಸವಿಲ್ಲ. ತುಂಗಭದ್ರಾ ಮತ್ತು ನಾರಾಯಣಪುರು ಜಲಾಶಯಗಳಿಂದ ಕುಡಿಯುವ ನೀರಿಗೆ ಬಳಸಿಕೊಳ್ಳಲು ಸೂಚಿಸಲಾಗಿದೆ. ಅಧಿಕಾರಿಗಳ ತಂಡ ರಚಿಸಿ ಕೆಳಹಂತದಲ್ಲಿ ನಿಗಾವಹಿಸಲೂ ಕೂಡ ಸೂಚಿಸಲಾಗಿದೆ” ಎಂದರು.
ಶೇ.70ರಷ್ಟು ಜನರಿಗೆ ನದಿ ನೀರು ಒದಗಿಸಲಾಗುತ್ತದೆ. ಉಳಿದ ಶೇ.20ರಷ್ಟು ಜನರಿಗೆ ತ್ವರಿತವಾಗಿ ಕುಡಿಯುವ ನೀರು ಒದಗಿಸಲು ಸೂಚಿಸಲಾಗಿದೆ. ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಲಿದ್ದು, ನಿಗಾವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕಾಲುವೆ ನೀರು ದುರ್ಬಳಕೆ ತಡೆಯಲು ವಿದ್ಯುತ್ ಕಡಿತಗೊಳಿಸಿ ಜಲಾಶಯ, ಕೆರೆಗಳ ಭರ್ತಿಗೆ ಕ್ರಮ ವಹಿಸಲಾಗುತ್ತದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಶೇ.60ರಷ್ಟು ಕನ್ನಡ ನಾಮಫಲಕ ಕಡ್ಡಾಯ: ಜಿಲ್ಲಾಧಿಕಾರಿ
ಈ ಸಂದರ್ಭದಲ್ಲಿ ನಗರಸಭೆಯ ಹಿರಿಯ ಸದಸ್ಯ ಜಯಣ್ಣ, ಕೆ ಶಾಂತಪ್ಪ, ಜಿ ಶಿವಮೂರ್ತಿ ಸೇರಿದಂತೆ ಬಹುತೇಕರು ಇದ್ದರು.
ವರದಿ : ಹಫೀಜುಲ್ಲ





