ರಾಯಚೂರು ನಗರದ ಎಂಪಿಸಿಎಲ್ (ಗಂಜ) ದಿಂದ ಶಕ್ತಿನಗರ ಕಡೆಗೆ ತೆರಳುವ ಕೃಷ್ಣ ಬ್ರಿಡ್ಜ್ ವರೆಗೆ ಕಳೆದ 47 ತಿಂಗಳಲ್ಲಿ ನೂರಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿ ಸಾವು-ನೋವು ಸಂಭವಿಸಿ ಅನೇಕರು ಸಾವಿಗೀಡಾಗಿದ್ದಾರೆ.
ಈ ರಸ್ತೆಯಲ್ಲಿ ಕಳೆದ 2022ರಿಂದ 2025ರ ನವೆಂಬರ್ 30ರವರೆಗೆ ಒಟ್ಟು 131 ಅಪಘಾತ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 62 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ 144 ಜನರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ನೀಡಿದ ಅಂಕಿ-ಅಂಶಗಳಿಂದ ತಿಳಿದು ಬಂದಿದೆ.
2022ನೇ ಸಾಲಿನಲ್ಲಿ ಒಟ್ಟು 33 ಅಪಘಾತ ಪ್ರಕರಣ ದಾಖಲಾಗಿವೆ, ಅದರಲ್ಲಿ 12 ಜನ ಸವಾರರು ಮೃತಪಟ್ಟು, 30 ಜನ ಗಾಯಗೊಂಡಿದ್ದರು. 2023ರಲ್ಲಿ ನಡೆದ 24 ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 4, ಗಾಯಗೊಂಡವರು 35 ಜನರು. 2024 23 ಜನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಇನ್ನು 2025 ನವಂಬರ್ ತಿಂಗಳವರಗೆ ಒಟ್ಟು 28 ಅಪಘಾತ ಸಂಭವಿಸಿದ್ದು, 23 ಜನ ಕೊನೆಯುಸೆರೆಳಿದ್ದಾರೆ. 26 ಜನ ಗಾಯಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಈ ರಸ್ತೆಯಲ್ಲಿ ಸಮರ್ಪಕ ರಸ್ತೆ ಅಗಲೀಕರಣ ಕೈಗೊಳ್ಳದಿರುವುದೇ ಅಪಘಾತಗಳ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ದಿನೇ ದಿನೇ ವಾಹನ ಸಂಚಾರ ಹೆಚ್ಚುತ್ತಿರುವುದರಿಂದ ಇಳಿವಾದ ರಸ್ತೆ ಅಪಾಯಕಾರಿಯಾಗಿ ಪರಿಣಮಿಸಿದೆ. ವಿಶೇಷವಾಗಿ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಈ ಮಾರ್ಗದಲ್ಲಿ ಸಂಚರಿಸುವುದು ಅಪಾಯಕಾರಿಯಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಇಷ್ಟೊಂದು ಅಪಘಾತಗಳು, ಸಾವು ಸಂಭವಿಸಿದ್ದರೂ ಸಂಬಂಧಿಸಿದ ಇಲಾಖೆಗಳು ಯಾವುದೇ ಶಾಶ್ವತ ಪರಿಹಾರ ಕ್ರಮ ಕೈಗೊಂಡಿಲ್ಲ. ರಸ್ತೆ ಅಗಲೀಕರಣ, ವೇಗ ನಿಯಂತ್ರಣ ಸೂಚಕ ಫಲಕಗಳ ಅಳವಡಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ನಾಗರಿಕ ಸಮಾಜ ಒತ್ತಾಯಿಸಿದೆ.
ಈ ಬಗ್ಗೆ ಸಾಮಾಜಿಕ ಹೋರಾಟಗಾರ ಬಾಬು ಮಾತನಾಡಿ, ʼಗಂಜ್ ವೃತ್ತದಿಂದ ಶಕ್ತಿನಗರದವರೆಗೆ ಸಾಗುವ ರಸ್ತೆಯಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುವುದು ಗಂಭೀರ ವಿಚಾರವಾಗಿದ್ದು, ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣ. ಕೂಡಲೇ ರಸ್ತೆ ಅಗಲೀಕರಣ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆʼ ಎಂದು ಹೇಳಿದರು.
ರಾಯಚೂರು ಜಿಲ್ಲೆಯಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ ಒಟ್ಟು 1,184 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಯಚೂರು ಜಿಲ್ಲಾಡಳಿತ ಹೇಳಿದೆ.
ವಾಹನ ಸವಾರರು ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಇರುವುದು, ಸಂಚಾರ ನಿಯಮಗಳ ಉಲ್ಲಂಘನೆ ರಸ್ತೆ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದಾಗ್ಯೂ, ರಸ್ತೆಗಳು ಹಾಳಾಗಿರುವ ಕಾರಣದಿಂದಲೇ ಹೆಚ್ಚು ಅಪಘಾತಗಳು ಸಂಭವಿಸಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಕಳೆದ ಮೂರೂವರೆ ವರ್ಷಗಳಿಗೆ ಹೋಲಿಸಿದರೆ, 2021ರಲ್ಲಿಯೇ ಹೆಚ್ಚು ಅಪಘಾತಗಳು ಸಂಭವಿಸಿವೆ. ಆ ವರ್ಷ, ಗರಿಷ್ಠ 335 ಮಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನು, 2022ರಲ್ಲಿ 330 ಮಂದಿ ಅಪಘಾತಗಳಿಗೆ ಬಲಿಯಾಗಿದ್ದಾರೆ. 2023ರಲ್ಲಿ 279 ಮಂದಿ ಸಾವನ್ನಪ್ಪಿದ್ದರೆ. ಈ ವರ್ಷದ 10 ತಿಂಗಳಲ್ಲಿ 240 ಮಂದಿ ಅಪಘಾತದಲ್ಲಿ ಜೀವ ಕಳೆದುಕೊಂಡಿದ್ದಾರೆ ಎಂಬುದು ವರದಿಯಾಗಿದೆ.
ಇದನ್ನೂ ಓದಿ : ಬೀದರ್ | ಮಕ್ಕಳ ಚಾರಿತ್ರ್ಯ ಉಳಿಯಬೇಕಾದರೆ ಮನೆ ತರಬೇತಿ ಕೇಂದ್ರವಾಗಲಿ : ಮುಹಮ್ಮದ್ ಕುಂಞ
ʼ2021ರಿಂದ 2024 ಅಕ್ಟೋಬರ್ವರೆಗೆ ಒಟ್ಟು 2,509 ರಸ್ತೆ ಅಪಘಾತಗಳು ಸಂಭವಿಸಿದ್ದು, ಅದರಿಂದ 1,184 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ, 3,365 ಮಂದಿ ಗಾಯಗೊಂಡಿದ್ದಾರೆ. ಬಹುತೇಕ ಪ್ರಕರಣಗಳಲ್ಲಿ ಚಾಲಕರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿದೆ. ಸಂಚಾರ ನಿಯಮ ಹಾಗೂ ರಸ್ತೆ ಸುರಕ್ಷತೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆʼ ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಪುಟ್ಟಮಾದಯ್ಯ ತಿಳಿಸಿದ್ದಾರೆ.

ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್




