ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರ ಕ್ರಮ ವಿರೋಧಿಸಿ ಹಾಗೂ ಖಾಯಂ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಬಸವ ಕಲ್ಯಾಣದಿಂದ ಕಲ್ಬುರ್ಗಿಯವರಗೆ ಪಾದಯಾತ್ರೆ ನಡೆಸಿ ಜ.25ರಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತದೆ ಎಂದು ಸರ್ಕಾರಿ ಶಾಲಾ ಅಭಿವೃದ್ಧಿ ವೇದಿಕೆ ಸಂಚಾಲಕಿ ವಿದ್ಯಾ ಪಾಟೀಲ್ ಹೇಳಿದರು.
ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, “ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಹೇಳುತ್ತಿರುವ ಸರ್ಕಾರ 700 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಿ ಶಾಲೆಗಳನ್ನು ಮುಚ್ಚಲು ಮುನ್ನುಡಿ ಬರೆದಿದೆ. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ 200 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸುವುದಾಗಿ ಹೇಳುತ್ತಿದೆ. ಹೊಸ ಶಾಲೆ ಪ್ರಾರಂಭಿಸಿ ಮಕ್ಕಳ ಸಂಖ್ಯೆ ಕಡಿಮೆಯಿರುವ ಶಾಲೆಗಳನ್ನು ವಿಲೀನ ಮಾಡಿ ಸರ್ಕಾರಿ ಶಾಲೆಗಳನ್ನು ಶಾಶ್ವತವಾಗಿ ಮುಚ್ಚುವ ನಿರ್ಧಾರಕ್ಕೆ ಶಾಲಾ ಶಿಕ್ಷಣ ಇಲಾಖೆ ಬಂದಿದೆ. ಈಗಾಗಲೇ ಚನ್ನಪಟ್ಟಣದಲ್ಲಿ ಶಾಲೆಗಳ ವಿಲೀನ ಪ್ರಕ್ರಿಯೆ ಪ್ರಾರಂಭಗೊಂಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲು ಶಾಲೆಗಳನ್ನು ಸಹ ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ವಿವಿಧ ಹಂತದ ಹೋರಾಟ ನಡೆಸಿ ಸಚಿವರು, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮನವಿ ನೀಡಲಾಗಿದೆ. ಸರ್ಕಾರ ಯಾವುದೇ ಸ್ಪಂದನೆ ದೊರೆತಿಲ್ಲ. ಬದಲಾಗಿ ಶಾಲೆಗಳನ್ನು ಮುಚ್ಚುವ ಪ್ರಯತ್ನ ತೀವ್ರಗೊಳಿಸಲಾಗಿದೆ. 700 ಹೊಸ ಕೆಪಿಎಸ್ ಶಾಲೆಗಳು ಪ್ರಾರಂಭಗೊಂಡರೆ ಸರಿ ಸುಮಾರು 25 ಸಾವಿರ ಸರ್ಕಾರಿ ಶಾಲೆಗಳು ಮುಚ್ಚುವ ಸಾಧ್ಯತೆಯಿದೆ” ಎಂದು ವಿವರಿಸದರು.
“ಕೂಡಲೇ ಶಾಲೆಗಳ ವಿಲೀನ ಪ್ರಕ್ರಿಯೆ ನಿಲ್ಲಿಸಬೇಕು. ಶಾಲೆಗೆ ಅಗತ್ಯವಿರುವ ಖಾಯಂ ಶಿಕ್ಷಕರನ್ನು ನೇಮಿಸಬೇಕು. ಪ್ರತಿ ಶಾಲೆಗೆ ಪರಿಚಾರಕರನ್ನು ನೇಮಿಸಿ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಶಿಕ್ಷಕರ ನೇಮಕಾತಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಬೇಕು. ಬೇರೆ ಜಿಲ್ಲೆಗಳಿಗೆ ವರ್ಗಾವಣೆಯಾಗದಂತೆ ತಡೆಯಬೇಕೆಂದು ಆಗ್ರಹಿಸಿ ಹೋರಾಟ ನಡೆಸಲಾಗುತ್ತದೆ. 10 ಸಾವಿರಕ್ಕೂ ಹೆಚ್ಚು ಮಹಿಳೆಯರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ” ಎಂದರು.
ಇದನ್ನೂ ಓದಿ: ರಾಯಚೂರು | ಉಸಿರುಗಟ್ಟಿ 20ಕ್ಕೂ ಹೆಚ್ಚು ಕುರಿಗಳು ಸಾವು
ವೇದಿಕೆ ಸಂಚಾಲಕ ಸೈಯದ್ ಹಫಿಜುಲ್ಲಾ ಮಾತನಾಡಿ, “ಮಕ್ಕಳ ಸಂಖ್ಯೆ ಕಡಿಮೆ ಇರುವುದನ್ನೇ ನೆಪ ಮಾಡಿಕೊಂಡು ಶಾಲೆಗಳನ್ನು ಮುಚ್ಚುವ ಸರ್ಕಾರ, ಶಿಕ್ಷಕರಿಲ್ಲದ ಶಾಲೆಗಳನ್ನು ಅತಿಥಿ ಶಿಕ್ಷಕರ ಮೇಲೆ ನಡೆಸುತ್ತಿದೆ. ಗುಣಮಟ್ಟ ಶಿಕ್ಷಣಕ್ಕೆ ಖಾತ್ರಿಯೇ ಇಲ್ಲದಾಗಿದೆ. ಅನೇಕ ಶಾಲೆಗಳಲ್ಲಿ ವಿಷಯವಾರು ಬೋಧನೆಗೆ ಅತಿಥಿ ಶಿಕ್ಷಕರೂ ಇಲ್ಲದಿರುವ ಪರಿಸ್ಥಿತಿಯಿದೆ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರಿಲ್ಲ. ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ 5 ಸಾವಿರ ಶಿಕ್ಷಕರನ್ನು ನೇಮಿಸುವುದಾಗಿ ಹೇಳುತ್ತಿದೆ. ಸ್ಥಳೀಯರಿಗೆ ಅವಕಾಶ ನೀಡದೇ ಹೋದರೆ ಮತ್ತೆ ಹಳೆ ಸಮಸ್ಯೆಯೇ ತೀವ್ರಗೊಂಡು ಶಿಕ್ಷಕರೇ ಇಲ್ಲದಂತಾಗುತ್ತದೆ” ಎಂದರು.
ಈ ಸಂದರ್ಭದಲ್ಲಿ ಶಿವರಾಮರೆಡ್ಡಿ, ರಾಧಾ ಇದ್ದರು.





