ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ ಹಿನ್ನೆಲೆಯಲ್ಲಿ ಇಂದು ಸಂಭ್ರಮಾಚರಣೆಯನ್ನು ಮಾಡಲಾಗುತ್ತಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ ಹರ್ಷ ವ್ಯಕ್ತಪಡಿಸಿದರು.
ಅವರಿಂದು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ಸಂಭ್ರಮಾಚರಣೆ ಅಂಗವಾಗಿ ಮಹಿಳಾ ಪ್ರಯಾಣಿಕರಿಗೆ ಸಿಹಿ ಹಂಚುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನಂತರ ಭೇಟಿಯಾದ ಮಾಧ್ಯಮಗಳೊಂದಿಗೆ ಮಾತನಾಡಿದರು.
ರಾಜ್ಯದ ಜನರ ಆರ್ಥಿಕತೆ ಸುಧಾರಣೆ ಮಾಡುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಿಂದ ಮಹಿಳೆಯರು, ದಲಿತರು, ಹಿಂದುಳಿದ ವರ್ಗದ ಹಾಗೂ ಅಲ್ಪಸಂಖ್ಯಾತರ ಸಮುದಾಯ ಹಾಗೂ ಶೋಷಿತರ ಕಲ್ಯಾಣವಾಗಿದೆ. ರಾಜ್ಯ ಸರ್ಕಾರದ ಯೋಜನೆಗಳಿಂದ ಸಾವಿರಾರು ಕುಟುಂಬಗಳು ತಮ್ಮ ಬದುಕನ್ನು ರೂಪಿಸಿಕೊಂಡಿದ್ದು, ಜಿಲ್ಲೆಯಲ್ಲಿಯೂ ಅನೇಕ ಕುಟುಂಬಗಳು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ಬಡಜನರ ಪರವಾದ ಯೋಜನೆಗಳನ್ನು ಸರ್ಕಾರದ ನೀಡಿದೆ. ಅದರಲ್ಲೂ ವಿಶೇಷವಾಗಿ ಶಕ್ತಿ ಯೋಜನೆಯೆಂಬ ಮಹಿಳೆಯರ ಪರವಾದ ಯೋಜನೆಯನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ 889.61 ಶೂನ್ಯ ದರದ ಟಿಕೆಟ್ಗಳಲ್ಲಿ ಮಹಿಳೆಯರು ಪ್ರಯಾಣಿಸಿದ್ದಾರೆ ಎಂದರು.
ಪ್ರತಿನಿತ್ಯ 1.16 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಈವರೆಗೆ 353.23 ಕೋಟಿ ರೂ.ಸಾರಿಗೆ ಆದಾಯವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮಕ್ಕೂ ಮೊದಲು ಬಸ್ಗಳಿಗೆ ಪೂಜೆ ಸಲ್ಲಿಸಿ, ಮಹಿಳಾ ಪ್ರಯಾಣಿಕರಿಗೆ ಸಿಹಿ ವಿತರಿಸಲಾಯಿತು. ನಂತರ ಮಹಿಳಾ ಪ್ರಯಾಣಿಕರಿಗೆ ಶಕ್ತಿ ಯೋಜನೆಯಡಿ ಟಿಕೇಟ್ ಹರಿದು. ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ನೂರಾರು ಮಹಿಳೆಯರು ಬಸ್ಗಳಲ್ಲಿ ಕುಳಿತು ಶಕ್ತಿ ಯೋಜನೆಯಡಿ ಶೂನ್ಯ ದರದ ಟಿಕೆಟ್ ಪಡೆದುಕೊಂಡರು. ಮಹಿಳೆಯರು ಪ್ರಯಾಣ ಬೆಳೆಸುವ ಬಸ್ಗಳಿಗೆ ಅಲಂಕರಿಸಲಾಗಿತ್ತು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮೂಲ ಸೌಕರ್ಯಕ್ಕೆ ಆಗ್ರಹಿಸಿ ಸಚಿವರಿಗೆ ಮನವಿ
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಪ್ರಭಾರ ಅಧ್ಯಕ್ಷ ಸಾಜೀದ್ ಸಮೀರ್, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ನಾಗೇಂದ್ರಪ್ಪ ಮಟಮಾರಿ, ತಾಲೂಕು ಅಧ್ಯಕ್ಷ ಪವನ್ ಕಿಶೋರ್ ಪಾಟೀಲ್, ಸದಸ್ಯೆ ಶಶಿಕಲಾ ಭೀಮರಾಯ್, ಚನ್ನಬಸವ ನಾಯಕ, ಮಹ್ಮದ್ ಶಾಲಂ, ತಿಮ್ಮಾರೆಡ್ಡಿ, ಕೆಕೆಆರ್ಟಿಸಿ ವಿಭಾಗೀಯ ನಿಯಂತ್ರಾಣಾಧಿಕಾರಿ ಚಂದ್ರಶೇಖರ, ರಾಣಿ ರಿಚರ್ಡ್, ಮಾಲಾ ಭಜಂತ್ರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.






