ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಹೆಚ್ಚುವರಿ ಮೀಸಲಾತಿ ನೀಡುವ ಉದ್ದೇಶದಿಂದ ಜಾರಿಗೆ ಬಂದಿರುವ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು (ರಾಜ್ಯ ಅಧೀನದಲ್ಲಿರುವ ಶಿಕ್ಷಣ ಸಂಸ್ಥೆಗಳಲ್ಲಿ ಆಸನಗಳ ಮೀಸಲು ಹಾಗೂ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳ ಮೀಸಲು) ಕಾಯ್ದೆ, 2022 ಅನ್ನು ಭಾರತೀಯ ಸಂವಿಧಾನದ ಒಂಬತ್ತನೇ ಅನುಕ್ರಮದಲ್ಲಿ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ.ಕುಮಾರ ನಾಯಕ ಸೇರಿದಂತೆ ಕರ್ನಾಟಕದ ಸಂಸದರಿಂದ ಕೇಂದ್ರದ ಮಾನ್ಯ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಿಗೆ ಮನವಿ ಸಲ್ಲಿಸಿದರು.
ಈ ಸಂಬಂಧ ಸಂಸದರು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಡಾ. ವಿರೇಂದ್ರ ಕುಮಾರ ಅವರಿಗೆ ಪತ್ರ ಬರೆದು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಈ ಕಾಯ್ದೆಯನ್ನು ಸಂವಿಧಾನದ 31(B) ಮತ್ತು 31(C) ಕಲಂಗಳಡಿ ಒಂಬತ್ತನೇ ಅನುಕ್ರಮದಲ್ಲಿ ಸೇರಿಸುವ ಪ್ರಸ್ತಾವನೆ ಇನ್ನೂ ಭಾರತ ಸರ್ಕಾರದ ಮಟ್ಟದಲ್ಲಿ ಬಾಕಿಯಿರುವುದರಿಂದ ರಾಜ್ಯದ ಲಕ್ಷಾಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ನ್ಯಾಯ ಹಾಗೂ ಸಮರ್ಪಕ ಪ್ರತಿನಿಧಿತ್ವ ದೊರಕುವಲ್ಲಿ ವಿಳಂಬವಾಗುತ್ತಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಈ ಕಾಯ್ದೆ ಸಂವಿಧಾನದ 15, 16, 38, 39 ಮತ್ತು 46ನೇ ಕಲಂಗಳು ಸೂಚಿಸುವ ಸಾಮಾಜಿಕ ನ್ಯಾಯದ ಗುರಿಗಳನ್ನು ಸಾಧಿಸಲು ಜಾರಿಗೆ ತರಲಾಗಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ. ಸಮಾಜದ ದುರ್ಬಲ ವರ್ಗಗಳ ಶಿಕ್ಷಣ ಹಾಗೂ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸುವುದು, ಅಸಮಾನತೆಯನ್ನು ಕಡಿಮೆ ಮಾಡುವುದು ಮತ್ತು ಸಾಮಾಜಿಕ ನ್ಯಾಯವನ್ನು ಉತ್ತೇಜಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.
ಕರ್ನಾಟಕ ಸರ್ಕಾರವು ಈ ಕಾಯ್ದೆಯನ್ನು ಒಂಬತ್ತನೇ ಅನುಕ್ರಮದಲ್ಲಿ ಸೇರಿಸುವ ಪ್ರಸ್ತಾವನೆಯನ್ನು ಗೃಹ ವ್ಯವಹಾರಗಳ ಸಚಿವಾಲಯಕ್ಕೆ ಈಗಾಗಲೇ ಕಳುಹಿಸಿದ್ದು, ನಂತರ ಅದನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯಕ್ಕೆ ರವಾನಿಸಲಾಗಿದೆ ಎಂದು ತಿಳಿಸಲಾಗಿದೆ.
ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಹೆಚ್ಚುವರಿ ಮೀಸಲಾತಿಯ ಬೇಡಿಕೆ ಹಲವು ದಶಕಗಳಿಂದ ಮುಂದುವರಿದಿದೆ. 1976ರ ಕೇಂದ್ರ ಕಾಯ್ದೆ ಜಾರಿಗೆ ಬಂದ ನಂತರ ಹಲವು ಸಮುದಾಯಗಳಿಗೆ ಇದ್ದ ಭೌಗೋಳಿಕ ನಿರ್ಬಂಧಗಳನ್ನು ತೆಗೆದುಹಾಕಲಾಗಿದ್ದು, ಇದರ ಪರಿಣಾಮವಾಗಿ ಈ ವರ್ಗಗಳ ಜನಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಆದರೆ ರಾಜ್ಯದಲ್ಲಿ ಮೀಸಲಾತಿ ಪ್ರಮಾಣವು 1958ರಿಂದ ಬದಲಾವಣೆಯಾಗಿಲ್ಲ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳ ಮೀಸಲಾತಿ ಜಾರಿ ಹೋರಾಟದಲ್ಲಿ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ
ಈ ವಿಷಯವನ್ನು ಪರಿಶೀಲಿಸಲು ನ್ಯಾಯಮೂರ್ತಿ ಎಚ್. ಎನ್. ನಾಗಮೋಹನದಾಸ್ ಆಯೋಗವನ್ನು ರಚಿಸಲಾಗಿತ್ತು. ಆಯೋಗದ ಶಿಫಾರಸುಗಳ ಆಧಾರದ ಮೇಲೆ ಹಾಗೂ ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ಅವರ ಅಧ್ಯಕ್ಷತೆಯಲ್ಲಿದ್ದ ಅನುಷ್ಠಾನ ಸಮಿತಿಯ ಪರಿಶೀಲನೆಯ ಬಳಿಕ ಪ್ರಸ್ತುತ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ, ವಿಷಯಕ್ಕೆ ಆದ್ಯತೆ ನೀಡಿ ಸಂಸತ್ತಿನ ಪ್ರಸ್ತುತ ಬಜೆಟ್ ಅಧಿವೇಶನದಲ್ಲಿಯೇ ಪರಿಗಣನೆಗೆ ತೆಗೆದುಕೊಳ್ಳುವಂತೆ ಸಂಸದರು ಕೇಂದ್ರ ಸರ್ಕಾರವನ್ನು ಮನವಿ ಮಾಡಿದ್ದಾರೆ. ಈ ಕ್ರಮದಿಂದ ಕರ್ನಾಟಕದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಮಹತ್ತರ ಪ್ರಯೋಜನವಾಗಲಿದೆ ಎಂದು ಸಂಸದರು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದರು..





