ರಾಮನಗರದ ಬಿಡದಿಯಲ್ಲಿನ ಕೈಗಾರಿಕಾ ಪ್ರದೇಶದ ಕಾಡುಮನೆ ಕ್ರಾಸ್ ಬಳಿಯ ಭೀಮೇನಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದ್ದ ಕಟ್ಟಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಇತರೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಕಟ್ಟಡ ಕಾರ್ಮಿಕರು ತಂಗಿದ್ದ ಶೆಡ್ನಲ್ಲಿ ಅಡುಗೆ ಅನಿಲ ಸೋರಿಕೆಯಾಗಿ, ಬೆಂಕಿ ಹೊತ್ತಿಕೊಂಡಿದ್ದರಿಂದ ಶೆಡ್ನಲ್ಲಿದ್ದ ಪಶ್ಚಿಮ ಬಂಗಾಳ ಮೂಲದ ಏಳು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು.
ಕಾರ್ಮಿಕರಾದ ಮನ್ರುಲ್ ಶೇಕ್, ತಜ್ಬುಲ್ ಶೇಕ್, ಜಾವೆದ್ ಅಲಿ, ಜಿಯಾಬುರ್ ಶೇಕ್, ಶಫಿಜುಲ್ ಶೇಕ್ ಹಾಗೂ ನೂರ್ ಜಮಲ್ ಗಾಯಗೊಂಡವರು. ಶೇ 60ಕ್ಕೂ ಹೆಚ್ಚು ಸುಟ್ಟ ಗಾಯಗಳಾಗಿರುವ ಎಲ್ಲರನ್ನೂ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳು ಸಾವು–ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಭೀಮೇನಹಳ್ಳಿ ಬಳಿ ಎಲಿಗೆನ್ಸ್ ಲೇಔಟ್ನಲ್ಲಿ ಐಶಾರಾಮಿ ವಿಲ್ಲಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದ ಕಾರ್ಮಿಕರು, ಕಟ್ಟಡ ನಿರ್ಮಾಣ ಹಂತದ ಸಮೀಪದಲ್ಲೇ ತಾತ್ಕಾಲಿಕವಾಗಿ ತಗಡಿನ ಶೆಡ್ ನಿರ್ಮಿಸಿಕೊಂಡು ತಂಗಿದ್ದರು. ಸೋಮವಾರ(ಅ.6) ಕೆಲಸ ಮುಗಿಸಿಕೊಂಡು ಬಂದಿದ್ದ ಕಾರ್ಮಿಕರು, ರಾತ್ರಿ ಶೆಡ್ನಲ್ಲೇ ಅಡುಗೆ ಮಾಡಿಕೊಂಡು ಊಟ ಮಾಡಿ ಮಲಗಿದ್ದರು.
ಸಿಲಿಂಡರ್ ಸರಿಯಾಗಿ ಬಂದ್ ಆಗದಿದ್ದರಿಂದ, ರಾತ್ರಿಯಿಡೀ ಅನಿಲ ಸೋರಿಕೆಯಾಗಿದೆ. ನಸುಕಿನಲ್ಲಿ 2 ಗಂಟೆ ಸುಮಾರಿಗೆ ಎದ್ದಿರುವ ಕಾರ್ಮಿಕನೊಬ್ಬ, ಬೀಡಿ ಸೇದಲು ಬೆಂಕಿ ಕಡ್ಡಿ ಗೀರುತ್ತಿದ್ದಂತೆ, ಇಡೀ ಶೆಡ್ಗೆ ಬೆಂಕಿ ವ್ಯಾಪಿಸಿಕೊಂಡಿದೆ. ಇದರಿಂದಾಗಿ ಎದ್ದಿದ್ದ ಕಾರ್ಮಿಕ ಸೇರಿದಂತೆ ಮಲಗಿದ್ದವರಿಗೂ ಬೆಂಕಿ ಹೊತ್ತಿಕೊಂಡಿದೆ.
ಕೂಡಲೇ ಎಲ್ಲರೂ ಕೂಗಿಕೊಂಡು ಹೊರಕ್ಕೆ ಓಡಿ ಬಂದಿದ್ದಾರೆ. ಕಾರ್ಮಿಕರ ಚೀರಾಟ ಕೇಳಿದ ಸಮೀಪದ ಭದ್ರತಾ ಸಿಬ್ಬಂದಿ ಹಾಗೂ ಅಕ್ಕಪಕ್ಕದ ಮನೆಯವರು, ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಆ್ಯಂಬುಲೆನ್ಸ್ ಕರೆಯಿಸಿ ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ಘಟನೆಯಿಂದಾಗಿ, ಶೆಡ್ ಒಳಗಿದ್ದ ಎಲ್ಲ ವಸ್ತುಗಳೂ ಕೂಡ ಬೆಂಕಿಗೆ ಆಹುತಿಯಾಗಿವೆ ಎಂದು ಬಿಡದಿ ಠಾಣೆ ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಸಮಾಜದ ಸ್ಥಾನ ಮಾನ ಗೌರವಿಸುವುದು ಭಾರತದ ಪ್ರಜೆಯ ಕರ್ತವ್ಯ
“ಘಟನೆಗೆ ಸಂಬಂಧಿಸಿದಂತೆ ಬಿಡದಿ ಠಾಣೆ ಪೊಲೀಸರು ಕಾರ್ಮಿಕರ ಕಂಟ್ರ್ಯಾಕ್ಟರ್ ಹಸನ್ ಮಲಿಕ್ ಎಲಿಗೆನ್ಸ್ ಲೇಔಟ್ ಮಾಲೀಕ, ಜಮೀನಿನ ಮಾಲೀಕ, ಶೆಡ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಮಿಕರಿಗೆ ಯಾವುದೇ ಮೂಲಸೌಕರ್ಯ ಒದಗಿಸದೆ ಅತಿ ಕಿರಿದಾದ ಶೆಡ್ನಲ್ಲಿ ಏಳು ಮಂದಿ ಕಾರ್ಮಿಕರು ಮತ್ತು ಅಪಾಯಕಾರಿ ಅನಿಲ ಸಿಲಿಂಡರ್ ಇರಿಸಲಾಗಿತ್ತು. ಹಾಗಾಗಿ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರಯ್ಯ, ಡಿವೈಎಸ್ಪಿ ಬಿ ಎನ್ ಶ್ರೀನಿವಾಸ್, ಬಿಡದಿ ಠಾಣೆ ಇನ್ಸ್ಪೆಕ್ಟರ್ ಶಂಕರ್ ನಾಯಕ್ ಇದ್ದರು.





