ಕನಕಪುರ ತಾಲೂಕಿನ ಸಾತನೂರು ಹೋಬಳಿಯ ಹೊನ್ನಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಿಹರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಜಿಲ್ಲಾ ಒಂಬಡ್ಸ್ಮನ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.
ಹರಿಹರ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿವೆ ಎಂದು ಸ್ಥಳೀಯ ಸಾಮಾಜಿಕ ಹೋರಾಟಗಾರರಾದ ಸ್ವಾಮಿ ಹರಿಹರ ಜಿಲ್ಲಾ ಒಂಬಡ್ಸ್ಮನ್ ಅವರಿಗೆ ದಾಖಲೆ ಸಮೇತ ದೂರು ನೀಡಿದ್ದರು. ಈ ದೂರಿನ ಗಂಭೀರತೆಯನ್ನು ಪರಿಗಣಿಸಿದ ಅಧಿಕಾರಿಗಳು ಕಾಮಗಾರಿಗಳ ನೈಜತೆಯನ್ನು ತಿಳಿಯಲು ಸ್ಥಳಕ್ಕೆ ಭೇಟಿ ನೀಡಿದರು.
ಪರಿಶೀಲನೆ ಸಂದರ್ಭದಲ್ಲಿ ಕಾಮಗಾರಿ ನಡೆದಿದೆ ಎನ್ನಲಾದ ಸ್ಥಳಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ಮಂಜೂರಾದ ಅನುದಾನ ಮತ್ತು ವಾಸ್ತವವಾಗಿ ನಡೆದಿರುವ ಕೆಲಸಗಳ ನಡುವಿನ ವ್ಯತ್ಯಾಸವನ್ನು ಗಮನಿಸಿದರು. ಈ ವೇಳೆ ಗ್ರಾಮಸ್ಥರಿಂದಲೂ ಮಾಹಿತಿಯನ್ನು ಪಡೆದುಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಹೊನ್ನಿಗನಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ), ನರೇಗಾ ಇಂಜಿನಿಯರ್, ಜಿಲ್ಲಾ ಒಂಬಡ್ಸ್ಮನ್ ಅಧಿಕಾರಿಗಳು ಹಾಗೂ ದೂರುದಾರರಾದ ಸ್ವಾಮಿ ಹರಿಹರ ಉಪಸ್ಥಿತರಿದ್ದರು.
ಇದನ್ನೂ ಓದಿ: ಕನಕಪುರ | ಸಾತನೂರು ಸಂತೆ ಜಾಗ ಅತಿಕ್ರಮಣ; ರಸ್ತೆಯಲ್ಲೇ ವ್ಯಾಪಾರ ಮಾಡುವ ದುಸ್ಥಿತಿ
ಪರಿಶೀಲನೆ ವೇಳೆ ಕಂಡುಬಂದ ಲೋಪದೋಷಗಳ ಬಗ್ಗೆ ವರದಿ ಸಿದ್ಧಪಡಿಸಿ, ತಪ್ಪಿತಸ್ಥ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.
“ಬಡವರಿಗಾಗಿ ಇರುವ ಯೋಜನೆಯಲ್ಲಿ ಅಕ್ರಮ ಎಸಗಿರುವುದು ಖಂಡನೀಯ, ಶೀಘ್ರವೇ ಸತ್ಯಾಸತ್ಯತೆ ಹೊರಬರಲಿದೆ” ಎಂದು ಸ್ಥಳೀಯರು ಆಶಯ ವ್ಯಕ್ತಪಡಿಸಿದ್ದಾರೆ.





