ಹಿಂದುತ್ವ ಭಾಷಣಕಾರ, ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎನ್ಎಸ್ಯುಐ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್.ಎನ್ ಅವರು ನೀಡಿದ್ದ ದೂರಿನ ಆಧಾರದ ಮೇಲೆ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 505/1ಬಿ 505/1ಸಿ 505/2 ಕಲಂ ಅಡಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಇತ್ತೀಚೆಗೆ ಪ್ರಕಟವಾದ ಎಸ್ಎಸ್ಎಲ್ಸಿ ಪೂರ್ವ ಸಿದ್ದತಾ ಪರೀಕ್ಷಾ ವೇಳಾಪಟ್ಟಿ ಸಂಬಂಧ ಚಕ್ರವರ್ತಿ ಸೂಲಿಬೆಲೆ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದರು. ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದ ಸೂಲಿಬೆಲೆ, ‘KARNATAKA STATE 10 STANDARD EXAM TIME TABLE RELEASED. ALL THE EXAM IN THE MORNING SESSION BUT FOR FRIDAY, WHY?, OH.. TIME FOR NAMAZ 1’ (10ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆಯಾಗಿದೆ. ಎಲ್ಲ ಪರೀಕ್ಷೆಗಳು ಬೆಳಗ್ಗಿನ ಸಮಯದಲ್ಲಿ ನಡೆಯಲಿವೆ. ಆದರೆ, ಶುಕ್ರವಾರ ಮಾತ್ರ ಮಧ್ಯಾಹ್ನವಿದೆ. ಯಾಕೆ? ಓಹ್, ಅಂದು ನಮಾಜ್ ಸಮಯ) ಎಂದು ಪೋಸ್ಟ್ ಹಾಕಿದ್ದರು.
ಅವರ ಪೋಸ್ಟ್ ಧಾರ್ಮಿಕ ಭಾವನೆ ಕೆರಳಿಸುತ್ತದೆ. ಶಿಕ್ಷಣ ಮತ್ತು ಪರೀಕ್ಷೆಯ ವಿಚಾರದಲ್ಲಿ ಕೋಮು ಪ್ರಚೋದನೆ ನೀಡುವ ಪ್ರಯತ್ನವನ್ನು ಸೂಲಿಬೆಲೆ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಜಯ್ ಕುಮಾರ್ ತಮ್ಮ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಇದೀಗ, ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು, ವಿವಾದಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ, “ಅದೇ ದಿನದಿಂದ (ಶುಕ್ರವಾರ) ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿವೆ. ಬೆಳಗ್ಗೆ ಪಿಯುಸಿ ಪರೀಕ್ಷೆ ನಡೆಯಲಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ. ಸೂಲಿಬೆಲೆ ಕಾಮನ್ ಸೆನ್ಸ್ ಇಲ್ಲದೆ ಏನೇನೋ ಹೇಳುತ್ತಾರೆ. ಆತನ ವಿರುದ್ಧ ಸಾಕಷ್ಟು ದೂರುಗಳು ಬರುತ್ತಿವೆ. ಆತನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ” ಎಂದಿದ್ದರು.




