ಶಿವಮೊಗ್ಗ, ಧರ್ಮಸ್ಥಳದಲ್ಲಿ ನೂರಾರು ಹೆಣ್ಣು ಮಕ್ಕಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ನಡೆದಿವೆ ಎನ್ನಲಾದ ಆರೋಪಗಳಿಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ಕೂಡಲೇ ವಿಶೇಷ ತನಿಖಾ ದಳ (SIT) ರಚಿಸಿ ತನಿಖೆ ನಡೆಸಬೇಕು ಎಂದು ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಶಿವಮೊಗ್ಗ ಜಿಲ್ಲಾ ಸಮಿತಿ ಇಂದು ಆಗ್ರಹಿಸಿದೆ.
ಈ ಸಂಬಂಧ, SDPI ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನೇತೃತ್ವವಹಿಸಿದ್ದ SDPI ಜಿಲ್ಲಾಧ್ಯಕ್ಷ ಮೊಹಮ್ಮದ್ ಜೀಲನ್ ಖಾನ್ ಮಾತನಾಡಿ, ಧರ್ಮಸ್ಥಳದಲ್ಲಿ ಕಳೆದ ನಾಲ್ಕು ದಶಕಗಳಿಂದ ನೂರಕ್ಕೂ ಹೆಚ್ಚು ಹೆಣ್ಣು ಮಕ್ಕಳ ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿಯೊಬ್ಬ ಸಾಕ್ಷಿ ಸಮೇತ ದೂರು ನೀಡಿದ್ದಾರೆ. ಆದರೂ ರಾಜ್ಯ ಸರ್ಕಾರ ಈ ಪ್ರಕರಣವನ್ನು ತನಿಖೆ ಮಾಡಲು ಹಿಂದೇಟು ಹಾಕುತ್ತಿದೆ.
ರಾಜ್ಯ ಸರ್ಕಾರದ ಈ ನಡೆ ರಾಜ್ಯದ ಜನತೆಯಲ್ಲಿ ಅನುಮಾನ ಮೂಡಿಸಿದೆ” ಎಂದು ಆತಂಕ ವ್ಯಕ್ತಪಡಿಸಿದರು. “ಆದಷ್ಟು ಬೇಗ ರಾಜ್ಯ ಸರ್ಕಾರ ಮತ್ತು ರಕ್ಷಣಾ ಇಲಾಖೆ ಈ ಪ್ರಕರಣವನ್ನು SIT ಗೆ ವಹಿಸುವ ಮೂಲಕ ಅಪರಾಧಿಗಳಿಗೆ ಕಾನೂನಾತ್ಮಕ ಶಿಕ್ಷೆಯನ್ನು ಕೊಡಿಸಬೇಕಾಗಿದೆ” ಎಂದು ಅವರು ಒತ್ತಾಯಿಸಿದರು.
ಈ ಪ್ರತಿಭಟನೆಯಲ್ಲಿ SDPI ಜಿಲ್ಲಾಧ್ಯಕ್ಷ ಮೊಹಮ್ಮದ್ ಜೀಲನ್ ಖಾನ್ ಅವರೊಂದಿಗೆ ಉಪಾಧ್ಯಕ್ಷ ಸಲೀಂ ಖಾನ್, ಜಿಲ್ಲಾ ಸಮಿತಿ ಸದಸ್ಯರಾದ ಇಸಾಕ್ ಅಹ್ಮದ್, ಮನ್ಸೂರ್ ಖಾನ್, ಝಮೀರ್ ಮತ್ತು ನಗರಾಧ್ಯಕ್ಷರಾದ ಮುರ್ ಅಹ್ಮದ್ ಸೇರಿದಂತೆ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.





