ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ “ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ಎಂಬ ಶೀರ್ಷಿಕೆಯಡಿ ವಿಚಾರ ಸಂಕಿರಣ ಆಯೋಜಿಸಿರುವುದರ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸದಸ್ಯರು ವಿಶ್ವವಿದ್ಯಾಲಯದ ಹೊರಗೆ ಪ್ರತಿಭಟನೆ ನಡೆಸಿದರು.
ಭಗವದ್ಗೀತಾ ಅಭಿಯಾನ ಜಿಲ್ಲಾ ಸಮಿತಿ, ಸ್ವರ್ಣ ರಶ್ಮಿ ಟ್ರಸ್ಟ್ ಮತ್ತು ಕುವೆಂಪು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿವಿಯ ಬಸವ ಮಂಟಪದಲ್ಲಿ ಇಂದು ಕಾರ್ಯಕ್ರಮ ಆಯೋಜಿಸಲಾಗಿದೆ.
ದಸಂಸ ರಾಜ್ಯ ಸಂಚಾಲಕ ಎಂ ಗುರುಮೂರ್ತಿ, “ಈ ವಿಚಾರ ಸಂಕಿರಣವು ಬಲಪಂಥೀಯ ಸೈದ್ಧಾಂತಿಕ ಕಾರ್ಯಸೂಚಿಯನ್ನು ಉತ್ತೇಜಿಸುತ್ತದೆ ಮತ್ತು ರಾಷ್ಟ್ರಕವಿ ಕುವೆಂಪು ಅವರ ಆದರ್ಶಗಳು ಮತ್ತು ಡಾ. ಬಿ ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಐತಿಹಾಸಿಕವಾಗಿ ಚಾತುರ್ವರ್ಣ ವ್ಯವಸ್ಥೆ ಮತ್ತು ಜಾತಿ ಶ್ರೇಣಿಯನ್ನು ಸಮರ್ಥಿಸಲು ಭಗವದ್ಗೀತೆಯನ್ನು ಬಳಸಲಾಗುತ್ತಿದೆ. ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳನ್ನು ಒಂದು ಸೈದ್ಧಾಂತಿಕ ಚೌಕಟ್ಟಿಗೆ ತಳ್ಳಲು ಮತ್ತು ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಯೋಜಿಸಿವೆ. ಇದೊಂದು ದಬ್ಬಾಳಿಕೆ ಆಚರಿಸುವ ಪ್ರಯತ್ನ” ಎಂದು ಆರೋಪಿಸಿದರು.
ವಿವಿ ಕುಲಪತಿಗಳು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವುದು ಕುವೆಂಪು ಅವರ ಸಾರ್ವತ್ರಿಕ ಮಾನವತಾವಾದಿ ಮೌಲ್ಯಗಳಿಗೆ ಮಾಡಿದ ಅವಮಾನ ಎಂದಿರುವ ದಸಂಸ, ಆಹ್ವಾನಿತ ಭಾಷಣಕಾರರು ಗಾಂಧಿ, ಬಸವಣ್ಣ ಮತ್ತು ಅಂಬೇಡ್ಕರ್ ಅವರ ಅಭಿಪ್ರಾಯಗಳನ್ನು ವಿರೋಧಿಸುವ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದೆ.
ಇದನ್ನೂ ಓದಿ: ಕುವೆಂಪು ವಿವಿಯಲ್ಲಿ ಭಗವದ್ಗೀತೆ ಅಭಿಯಾನಕ್ಕೆ ವಿರೋಧ; ಉಪಕುಲಪತಿಗಳಿಗೆ ಬಹಿರಂಗ ಪತ್ರ
ಆಹ್ವಾನ ಪತ್ರಿಕೆಯನ್ನು ಕಾರ್ಯಕ್ರಮಕ್ಕೆ ಕೇವಲ ಎರಡು ದಿನಗಳ ಮೊದಲು ಬಿಡುಗಡೆ ಮಾಡಲಾಗಿದೆ. ತಡವಾಗಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿರುವುದು ಕಳವಳ ಹುಟ್ಟುಹಾಕಿದೆ. ವಿಶ್ವವಿದ್ಯಾಲಯವು ವಿಚಾರ ಸಂಕಿರಣವನ್ನು ಕೂಡಲೇ ರದ್ದುಗೊಳಿಸಬೇಕು ಎಂದು ದಸಂಸ ಒತ್ತಾಯಿಸಿದೆ.
ನಿನ್ನೆ (ನ.17) ಪತ್ರಕರ್ತ ಹರ್ಷಮುಮಾರ್ ಕುಗ್ವೆ ಅವರು ಕುಲಪತಿ ಪ್ರೊ ಶರತ್ ಅನಂತಮೂರ್ತಿ ಅವರಿಗೆ ಬಹಿರಂಗ ಪತ್ರ ಬರೆದು, ಬಲಪಂಥೀಯರ ಷಡ್ಯಂತ್ರದ ಬಗ್ಗೆ ವಿವರವಾಗಿ ತಿಳಿಸಿದ್ದರು. ಸಿಂಡಿಕೇಟ್ ಸದಸ್ಯ ಶ್ರೀಪಾಲ್ ಅವರು ಖುದ್ದು ಪತ್ರ ಬರೆದು ಕಾರ್ಯಕ್ರಮ ನಡೆಸದಂತೆ ಒತ್ತಾಯಿಸಿದ್ದರು.





