ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಆನವೇರಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ವಸತಿ ನಿಲಯದಲ್ಲಿ ನೀರು, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ವರ್ಷ ಪಿಯುಸಿ ತರಗತಿಯೂ ಆರಂಭವಾಗಿದ್ದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ ಹಾಸ್ಟೆಲ್ ಕೊಠಡಿಗಳ ಸರಿಯಾದ ನಿರ್ವಹಣೆ ಇಲ್ಲದಿರುವುದರಿಂದ ಅವು ಹಾಳಾಗುತ್ತಿವೆ ಸಮಸ್ಯೆಗಳ ಸರಮಾಲೆ ಬಗ್ಗೆ ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಹೆಣ್ಣುಮಕ್ಕಳ ಸ್ನಾನಗೃಹಗಳಿಗೆ ಹಾಗೂ ಹಾಸ್ಟೆಲ್ ಬಾಗಿಲುಗಳಿಗೆ ಲಾಕ್ ವ್ಯವಸ್ಥೆ ಇಲ್ಲದಿರುವುದು ವಿದ್ಯಾರ್ಥಿನಿಯರ ಸುರಕ್ಷತೆಗೆ ಆತಂಕ ಉಂಟುಮಾಡಿದೆ.
ಇದರ ಜೊತೆಗೆ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಇಲ್ಲದಿರುವುದು, ಊಟದ ಗುಣಮಟ್ಟ ಕಡಿಮೆಯಿರುವುದು ಹಾಗೂ ಅನ್ನದಲ್ಲಿ ನುಸಿ ಹುಳಗಳು ಇರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಶೌಚಾಲಯಗಳ ಸ್ವಚ್ಛತೆ ಸಮರ್ಪಕವಾಗಿಲ್ಲದ ಕಾರಣ ಅವು ತುಂಬಿಕೊಂಡಿದ್ದು ಆರೋಗ್ಯ ಸಮಸ್ಯೆಗಳ ಭೀತಿ ಹೆಚ್ಚಿಸಿದೆ. ಈ ಹಿಂದೆ ಒಬ್ಬ ವಿದ್ಯಾರ್ಥಿನಿ ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿದ್ದಾಳೆ ಎನ್ನುವ ಮಾತುಗಳೂ ಕೇಳಿಬರುತ್ತಿವೆ. ಅಲ್ಲದೆ ಶಿಕ್ಷಕರ ನಡುವೆ ಹೊಂದಾಣಿಕೆ ಕೊರತೆಯಿಂದ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ಸಿಗುತ್ತಿಲ್ಲ ಎಂಬ ಆರೋಪವೂ ಕೇಳಿಬರುತ್ತಿದ್ದು, ರಾತ್ರಿ ವೇಳೆ ಸರಿಯಾದ ಬೆಳಕಿನ ವ್ಯವಸ್ಥೆಯ ಕೊರತೆಯೂ ವಿದ್ಯಾರ್ಥಿಗಳಲ್ಲಿ ಆತಂಕ ಉಂಟುಮಾಡಿದೆ.

ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಮಸ್ಯೆ ಉಂಟಾಗಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಓ) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಲೆಯ ಪರಿಸ್ಥಿತಿ, ವಸತಿ ಗೃಹಗಳ ವ್ಯವಸ್ಥೆ, ಕುಡಿಯುವ ನೀರು ಹಾಗೂ ಊಟದ ಗುಣಮಟ್ಟ ಸೇರಿದಂತೆ ಹಲವು ವಿಷಯಗಳನ್ನು ಸಿಇಓ ಪರಿಶೀಲಿಸಿದರು.
ಈ ವೇಳೆ ವಿದ್ಯಾರ್ಥಿಗಳೊಂದಿಗೆ ನೇರವಾಗಿ ಮಾತನಾಡಿ ಅವರ ಸಮಸ್ಯೆಗಳು ಮತ್ತು ಅಸೌಕರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಮಕ್ಕಳು ತಮಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ವಿವರಿಸಿದ್ದು, ಅದನ್ನು ಗಮನದಿಂದ ಆಲಿಸಿದ ಸಿಇಓ ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಪೋಷಕರು ಮತ್ತು ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗಳನ್ನು ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.





