ಸಿದ್ದಾಪುರ: ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗಳ ಮೂಲಕ ಬಡವರ ಕೈಹಿಡಿಯುವುದರ ಜೊತೆಗೆ ಕ್ಷೇತ್ರಗಳ ಅಭಿವೃದ್ಧಿಗೂ ಪೂರಕವಾದ ಅನುದಾನ ಬಿಡುಗಡೆ ಮಾಡುತ್ತಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುತ್ತಿದ್ದರೂ, ಜಿಲ್ಲಾಡಳಿತದ ಮಂದಗತಿಯ ಧೋರಣೆಯಿಂದಾಗಿ ಶಿರಸಿ-ಸಿದ್ದಾಪುರ ಕ್ಷೇತ್ರದ ಪ್ರಗತಿಗೆ ಹಿನ್ನಡೆಯಾಗುತ್ತಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಸಿದ್ದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಡಳಿತದ ಕಾರ್ಯವೈಖರಿಯನ್ನು “ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ” ಎಂಬ ಗಾದೆ ಮಾತಿಗೆ ಹೋಲಿಸಿದರು. ಮುಖ್ಯಮಂತ್ರಿಗಳು ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ರೂ. ಅನುದಾನ ಘೋಷಿಸಿ, ಶಾಸಕರು ಅನುಮೋದನೆಗಾಗಿ ಬೆಂಗಳೂರಿಗೆ ಅಲೆಯುವುದನ್ನು ತಪ್ಪಿಸಲು ಜಿಲ್ಲಾಧಿಕಾರಿಗಳಿಗೇ ಜವಾಬ್ದಾರಿ ನೀಡಿದ್ದಾರೆ.
ಆದರೆ, ಶಿರಸಿ-ಸಿದ್ದಾಪುರ ಕ್ಷೇತ್ರಕ್ಕೆ ಸಂಬಂಧಿಸಿದ 50 ಕೋಟಿ ರೂ. ಮೊತ್ತದ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ ಕಳುಹಿಸಿದರೂ ಜಿಲ್ಲಾಧಿಕಾರಿಗಳು ಈವರೆಗೆ ಅನುಮೋದನೆ ನೀಡಿಲ್ಲ ಎಂದು ದೂರಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದು, ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರು ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸುತ್ತಿದ್ದಾರೆ. ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದರೂ ಜಿಲ್ಲಾಡಳಿತ ಮಾತ್ರ ಮೌನಕ್ಕೆ ಶರಣಾಗಿದೆ.
ಈ ಸುದ್ದಿ ಓದಿದ್ದೀರಾ? ಕಾರವಾರ | ಟ್ಯಾಗೋರ್ ಕಡಲತೀರದಲ್ಲಿ ಮಹಿಳೆ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ!
ಮುಖ್ಯಮಂತ್ರಿಗಳ ಅಭಿವೃದ್ಧಿ ವೇಗಕ್ಕೆ ಉತ್ತರ ಕನ್ನಡ ಜಿಲ್ಲಾಡಳಿತವು ‘ರೋಡ್ ಬ್ರೇಕ್’ ಹಾಕಿದಂತೆ ವರ್ತಿಸುತ್ತಿರುವುದು ಕ್ಷೇತ್ರದ ಜನತೆಗೆ ಮಾಡುತ್ತಿರುವ ಅನ್ಯಾಯ ಎಂದು ಶಾಸಕರು ಆಕ್ರೋಶ ಹೊರಹಾಕಿದರು. ಅಡಿಕೆ ಬೆಳೆಗಾರರು ಸೇರಿದಂತೆ ಜಿಲ್ಲೆಯ ರೈತ ಸಮೂಹ ಇಂದು ಸಾಲು ಸಾಲು ಸಮಸ್ಯೆಗಳಿಂದ ಕಂಗೆಟ್ಟಿದೆ. ಇಂತಹ ಸಂಕಷ್ಟದ ಸಮಯದಲ್ಲಿ ರೈತರ ನೆರವಿಗೆ ಧಾವಿಸಬೇಕಾದ ಜಿಲ್ಲಾಡಳಿತವು, ಕೋಟ್ಯಂತರ ರೂಪಾಯಿಗಳನ್ನು ದುಂದುವೆಚ್ಚ ಮಾಡಿ ‘ಕರಾವಳಿ ಉತ್ಸವ’ ಆಯೋಜಿಸುತ್ತಿರುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು.
ಜನರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ಹೊತ್ತಿನಲ್ಲಿ ಇಂತಹ ವೈಭವದ ಆಚರಣೆಗಳ ಅಗತ್ಯವಿತ್ತೇ ಎನ್ನುವ ಸಾರ್ವಜನಿಕರ ಪ್ರಶ್ನೆಗೆ ಜಿಲ್ಲಾಡಳಿತವೇ ಉತ್ತರಿಸಬೇಕಿದೆ ಎಂದು ಅವರು ಹೇಳಿದರು. ರಾಜ್ಯ ಸರ್ಕಾರವು ಜನಪರ ಕೆಲಸಗಳಿಗೆ ಹಣದ ಕೊರತೆ ಮಾಡದಿದ್ದರೂ, ಸ್ಥಳೀಯ ಮಟ್ಟದಲ್ಲಿ ಅನುಷ್ಠಾನಗೊಳಿಸಬೇಕಾದ ಅಧಿಕಾರಿಗಳ ವಿಳಂಬ ನೀತಿಯಿಂದಾಗಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಳ್ಳುತ್ತಿರುವುದು ಕ್ಷೇತ್ರದ ಜನರಲ್ಲಿ ಬೇಸರ ಮೂಡಿಸಿದೆ ಎಂದು ಹೇಳಿದರು.





