ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರದ ಬೆನ್ನೆಲುಬಾದ ಕೆಡಿಸಿಸಿ ಬ್ಯಾಂಕ್ನ ನಿರ್ದೇಶಕರ ಚುನಾವಣೆ ಮುಗಿದು ತಿಂಗಳುಗಳೇ ಕಳೆದರೂ, ಆಡಳಿತ ಮಂಡಳಿ ಅಧಿಕಾರ ಸ್ವೀಕರಿಸಲು ಎದುರಾಗಿರುವ ಕಾನೂನು ಅಡೆತಡೆಗಳ ಬಗ್ಗೆ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ್ ಕಳವಳ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗೆ ಆಡಳಿತ ಮಂಡಳಿಯ ಅಸ್ತಿತ್ವ ಅತೀ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು. ಸದ್ಯದ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ ಅವರು, “ಇನ್ನು ಕೇವಲ ಎರಡು ನಿರ್ದೇಶಕ ಸ್ಥಾನಗಳ ಆಯ್ಕೆ ಬಾಕಿ ಇದೆ. ಈ ಕುರಿತು ನ್ಯಾಯಾಲಯಕ್ಕೆ ಮನವಿ ಮಾಡಲಾಗಿದ್ದು, ಮುಂದಿನ ಎರಡು ವಾರಗಳಲ್ಲಿ ಮತ ಎಣಿಕೆಗೆ ಅವಕಾಶ ಸಿಗುವ ಆಶಾವಾದವಿದೆ.
ಆರ್ಥಿಕ ವರ್ಷ ಮುಗಿಯಲು ಕೇವಲ 94 ದಿನಗಳಷ್ಟೇ ಬಾಕಿ ಇದ್ದು, ಆಡಳಿತ ಮಂಡಳಿ ರಚನೆ ವಿಳಂಬವಾಗುತ್ತಿರುವುದರಿಂದ ರೈತರಿಗೆ ನೀಡಬೇಕಾದ ಸಾಲ ವಿತರಣೆಯಲ್ಲಿ ಹಿನ್ನಡೆಯಾಗುತ್ತಿದೆ. ಇದು ನೇರವಾಗಿ ಬ್ಯಾಂಕಿನ ಲಾಭಾಂಶದ ಮೇಲೆ ಪರಿಣಾಮ ಬೀರಲಿದೆ,” ಎಂದರು.

ರಾಜ್ಯಮಟ್ಟದಲ್ಲಿ 3ನೇ ಸ್ಥಾನದಲ್ಲಿರುವ ಕೆಡಿಸಿಸಿ ಬ್ಯಾಂಕನ್ನು 2ನೇ ಸ್ಥಾನಕ್ಕೆ ಏರಿಸುವ ಗುರಿ ಹೊಂದಿದ್ದೇವೆ. ಚುನಾವಣೆಯಲ್ಲಿ ಸ್ಪರ್ಧೆ ಸಹಜ, ಆದರೆ ಗೆದ್ದ ನಂತರ ನಾವೆಲ್ಲರೂ ಒಟ್ಟಾಗಿ ಪಕ್ಷಾತೀತವಾಗಿ ರೈತರ ಹಿತರಕ್ಷಣೆಗಾಗಿ ಶ್ರಮಿಸುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬೇಡ್ತಿ-ವರದಾ ನದಿ ಜೋಡಣೆ: ಶ್ರೀಗಳ ನಿರ್ಣಯಕ್ಕೆ ಬದ್ಧ ಇದೇ ಸಂದರ್ಭದಲ್ಲಿ ವಿವಾದಿತ ಬೇಡ್ತಿ-ವರದಾ ನದಿ ಜೋಡಣೆ ಯೋಜನೆಯ ಬಗ್ಗೆಯೂ ಹೆಬ್ಬಾರ್ ತಮ್ಮ ಸ್ಪಷ್ಟ ನಿಲುವನ್ನು ತಿಳಿಸಿದರು. ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರು ಈ ಯೋಜನೆಗಾಗಿ ಕೇಂದ್ರದ ಮೇಲೆ ಒತ್ತಡ ಹೇರುತ್ತಿರುವುದನ್ನು ಉಲ್ಲೇಖಿಸಿದ ಅವರು,
ಈ ಸುದ್ದಿ ಓದಿದ್ದೀರಾ ? ಮುಂಡಗೋಡ-ಹಳಿಯಾಳದ ಮದ್ಯ-ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್ ದಾಳಿ; ಪಾಳಾ ಭಾಗದ ಮಟ್ಕಾ ದಂಧೆಗೆ ಬೀಳುತ್ತಾ ಬ್ರೇಕ್?
ಪರಿಸರಕ್ಕೆ ಪೂರಕವಲ್ಲದ ಈ ಯೋಜನೆಗೆ ತಡೆ ಬೀಳಲೇಬೇಕು ಎಂದರು. “ನದಿ ಜೋಡಣೆ ವಿಷಯದಲ್ಲಿ ನಾನು ಸ್ವರ್ಣವಲ್ಲೀ ಶ್ರೀಗಳ ನಿರ್ಣಯಕ್ಕೆ ಸಂಪೂರ್ಣವಾಗಿ ಬದ್ಧನಾಗಿದ್ದೇನೆ. ಈ ಯೋಜನೆಯಿಂದ ಆಗುವ ಅನಾಹುತಗಳ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇಂದ್ರ ಸರ್ಕಾರಕ್ಕೆ ಹಾಗೂ ಬಸವರಾಜ ಬೊಮ್ಮಾಯಿ ಅವರಿಗೆ ಮನವರಿಕೆ ಮಾಡಿಕೊಡಬೇಕಿದೆ.
ಶಾಸಕರಾಗಿ ನಾವು ಈ ಯೋಜನೆ ಜಾರಿಯಾಗದಂತೆ ಕಾನೂನುಬದ್ಧವಾಗಿ ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ,” ಎಂದು ಅವರು ಎಚ್ಚರಿಸಿದರು. ಕೇಂದ್ರ ಸರ್ಕಾರವು ಈ ಯೋಜನೆಯನ್ನು ಕೈಬಿಡುವ ಮೂಲಕ ಮಲೆನಾಡಿನ ಪರಿಸರ ಹಾಗೂ ಜನರ ಹಿತವನ್ನು ಕಾಯಬೇಕು ಎಂದು ಅವರು ಇದೇ ವೇಳೆ ಆಗ್ರಹಿಸಿದರು.





