- ನಮ್ಮೂರ ಹೆಮ್ಮೆ-2023 ಕಾರ್ಯಕ್ರಮ ಉದ್ಘಾಟಿಸಿ ಅಭಿಮತ
- ‘ಗ್ಯಾರಂಟಿ ಯೋಜನೆಗಳಿಂದ ಜನ ಖುಷಿಯಾಗಿದ್ದಾರೆ’
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಬಡ-ಮಧ್ಯಮ ವರ್ಗದ ಕುಟುಂಬವೊಂದಕ್ಕೆ ಕನಿಷ್ಠ 5 ರಿಂದ 6 ಸಾವಿರ ತಿಂಗಳಿಗೆ ಉಳಿತಾಯವಾಗಲಿದೆ. ಈ ಉಳಿತಾಯದ ಹಣದ ಪೈಕಿ ಕನಿಷ್ಠ ಶೇ.50ರಷ್ಟು ಹಣವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡಿ ಎಂದು ಸಚಿವ ಕೃಷ್ಣಭೈರೇಗೌಡ ಪೋಷಕರಿಗೆ ಕಿವಿಮಾತು ಹೇಳಿದರು.
ಭಾನುವಾರ ಕುವೆಂಪುನಗರ ವಾರ್ಡ್ನಲ್ಲಿ ಆಯೋಜಿಸಲಾಗಿದ್ದ “ನಮ್ಮೂರ ಹೆಮ್ಮೆ-2023 ” ಕಾರ್ಯಕ್ರಮ ಉದ್ಘಾಟಿಸಿ, ಉತ್ತಮ ಅಂಕ ಗಳಿಸಿದ 400ಕ್ಕೂ ಹೆಚ್ಚು ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು.
“ಗ್ಯಾರಂಟಿ ಯೋಜನೆಗಳಿಂದ ಜನ ಖುಷಿಯಾಗಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ದಿನೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಬಡ-ಮಧ್ಯಮ ವರ್ಗದ ಜನ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಅವರ ಸಂಕಷ್ಟಕ್ಕೆ ಸಹಾಯಹಸ್ತ ಚಾಚುವ ಕೆಲಸಕ್ಕೆ ಮುಂದಾಯಿತು” ಎಂದರು.
“ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದ ಜನ ಖುಷಿಯಾಗಿದ್ದಾರೆ. ನಾವು ಅಧಿಕಾರಕ್ಕೆ ಬಂದು ನಾಲ್ಕು ವರ್ಷದ ನಂತರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಬಹುದಿತ್ತು. ಆದರೆ, ಅಧಿಕಾರಕ್ಕೆ ಬಂದು ಎರಡೇ ತಿಂಗಳಲ್ಲಿ ಎಲ್ಲ ಆಶ್ವಾಸನೆಗಳನ್ನೂ ಈಡೇರಿಸುವ ಮೂಲಕ ಕೊಟ್ಟ ಮಾತನ್ನು ಕಾಂಗ್ರೆಸ್ ಉಳಿಸಿಕೊಂಡಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಪಿಎಸ್ಐ ನೇಮಕಾತಿ ಹಗರಣ ನ್ಯಾಯಾಂಗ ತನಿಖೆಗೆ; ಕಾಂಗ್ರೆಸ್ ದ್ವೇಷದ ರಾಜಕಾರಣ: ಬೊಮ್ಮಾಯಿ
“ಕಠಿಣ ಪರಿಶ್ರಮಕ್ಕೆ ಯಾವುದೇ ಬದಲಿ ಮಾರ್ಗಗಳು ಇರುವುದಿಲ್ಲ. ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಗುರಿ ಇರುತ್ತದೆ. ಈ ಗುರಿಯನ್ನು ತಲುಪಲು, ಬದುಕಿನಲ್ಲಿ ಯಶಸ್ಸು ಗಳಿಸಲು ಕಠಿಣ ಪರಿಶ್ರಮವೊಂದೇ ಕೀಲಿಕೈ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
“ಅಂಕಗಳೊಂದೇ ಶಿಕ್ಷಣದ ಮಾನದಂಡವಲ್ಲ. ಆದರೆ, ವಿದ್ಯಾರ್ಥಿ ಶಿಕ್ಷಣವನ್ನು ಎಷ್ಟು ಗಂಭೀರವಾಗಿ ಪರಿಗಣಿಸಿದ್ದಾನೆ, ಪರೀಕ್ಷೆಗೆ ಎಷ್ಟು ಕಷ್ಟಪಟ್ಟು ಓದಿದ್ದಾನೆ ಎಂಬುದನ್ನು ಆತನ ಅಂಕಗಳು ಹೇಳುತ್ತವೆ. ಹೀಗಾಗಿ ನಾವು ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನ ಮಾಡುತ್ತಿದ್ದೇವೆ. ಈ ಮೂಲಕ ಇತರರಿಗೆ ಸ್ಫೂರ್ತಿ ನೀಡುವುದು ನಮ್ಮ ಕಾರ್ಯಕ್ರಮದ ಉದ್ದೇಶ” ಎಂದರು.





