ಮಲ್ಪೆ ಬಂದರಿನಲ್ಲಿ ಮೀನು ಏಲಂ ಮಾಡುವ ಕೂಲಿ ಕಾರ್ಮಿಕ ಶೇಖ್ ಅಯ್ಯೂಬ್ ಅವರ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಇದರ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಲ್ಪೆ ಬಂದರಿನೊಳಗೆ ತಮ್ಮ ಹೊಟ್ಟೆಪಾಡಿಗಾಗಿ ದುಡಿಯುತ್ತಿರುವ ಕೂಲಿ ಕಾರ್ಮಿಕರ ಮೇಲೆ ನಿರಂತರವಾಗಿ ಗೂಂಡಾಗಿರಿ ಮತ್ತು ಹಲ್ಲೆಗಳು ನಡೆಯುತ್ತಿವೆ. ಇಂತಹ ಪ್ರಕರಣಗಳು ಪೊಲೀಸ್ ಠಾಣೆ ವರೆಗೆ ತಲುಪುವುದು ಬಹಳ ಕಡಿಮೆ. ಬಲಾಡ್ಯರು ಮತ್ತು ಶ್ರೀಮಂತರು ಬಡ ಕೂಲಿ ಕಾರ್ಮಿಕರನ್ನು ಶೋಷಣೆ ಮಾಡುತ್ತಾ, ಭಯದ ವಾತಾವರಣ ನಿರ್ಮಿಸಿ ಅವರನ್ನು ತಮ್ಮ ಕಪಿಮುಷ್ಠಿಯೊಳಗೆ ಇಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಸರ್ಕಾರದ ಹಣದಿಂದ ನಿರ್ಮಿತವಾದ ಬಂದರು ಪ್ರದೇಶವನ್ನು ತಮ್ಮ ಸ್ವಂತ ಆಸ್ತಿಯಂತೆ ಬಳಸಿಕೊಳ್ಳುತ್ತಿರುವುದು ಅಹಂಕಾರಪೂರ್ಣ ನಡವಳಿಕೆಯಾಗಿದ್ದು ಖಂಡನೀಯ ಎಂದು ಹೇಳಿದ್ದಾರೆ.
ಕಳೆದ ವರ್ಷ ಕೂಲಿ ಕಾರ್ಮಿಕ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದ ಪ್ರಕರಣದಲ್ಲಿ ಆರೋಪಿಗಳು ರಾಜಕೀಯ ಪ್ರಭಾವ ಮತ್ತು ಹಣದ ಬಲ ಬಳಸಿ ಸಂತ್ರಸ್ತೆಯಿಂದಲೇ ಪ್ರಕರಣವನ್ನು ಹಿಂಪಡೆಯುವಂತೆ ಮಾಡಿದ ಘಟನೆ ನಡೆದಿದೆ. ಇದರ ಪರಿಣಾಮವಾಗಿ ಕಾನೂನು ನಿರ್ಲಕ್ಷ್ಯಕ್ಕೊಳಗಾದಂತೆ ಕಂಡುಬಂದಿದ್ದು, ಇಂತಹ ಹಲ್ಲೆ ಹಾಗೂ ಗೂಂಡಾಗಿರಿ ಮರುಕಳಿಸಲು ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಮಲ್ಪೆ ಬಂದರಿನಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಯಾವುದೇ ಭಯವಿಲ್ಲದೆ, ಸ್ವತಂತ್ರವಾಗಿ ಮತ್ತು ನೆಮ್ಮದಿಯಿಂದ ದುಡಿದು ಬದುಕುವ ವಾತಾವರಣ ನಿರ್ಮಾಣವಾಗಬೇಕು. ಇದಕ್ಕಾಗಿ ಕೂಲಿ ಕಾರ್ಮಿಕರ ಮೇಲೆ ಹಲ್ಲೆ ಹಾಗೂ ಗೂಂಡಾಗಿರಿ ನಡೆಸುವವರ ವಿರುದ್ಧ ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಜೈಲಿಗೆ ಕಳುಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಬಡವರು ಹಾಗೂ ಕೂಲಿ ಕಾರ್ಮಿಕರ ಮೇಲೆ ಹಲ್ಲೆಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆ ಎಂದು ಸುಂದರ ಮಾಸ್ತರ್ ಎಚ್ಚರಿಸಿದ್ದಾರೆ.





