ದೇಶದ ಆರ್ಥಿಕ ಹಾಗೂ ಸಾಮಾಜಿಕ ವ್ಯವಸ್ಥೆಯನ್ನು ಅಲುಗಾಡಿಸುವ ಪ್ರಯತ್ನಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಸಂವಿಧಾನ, ಅಂಬೇಡ್ಕರ್ ಚಿಂತನೆ, ಸಾಮಾಜಿಕ ನ್ಯಾಯ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯವಿದೆ ಎಂದು ಕರ್ನಾಟಕ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಹೇಳಿದರು.
ಅವರು ಇಂದು ಬ್ರಹ್ಮಾವರದ ಆಶ್ರಯ ಹೋಟೆಲ್ ಸಭಾಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಉಡುಪಿ ಜಿಲ್ಲಾ ಸಮಿತಿಯ ಬ್ರಹ್ಮಾವರ ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಶೋಷಿತ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಸರ್ವಾಧಿಕಾರಿ ಧೋರಣೆಯ ರಾಜಕಾರಣ, ಜನವಿರೋಧಿ ಸರಕಾರ ಬಲವಾಗುತ್ತಿರುವುದರಿಂದ ದಲಿತರು, ಅಲ್ಪಸಂಖ್ಯಾತರು ಮತ್ತು ಶೋಷಿತರ ಏಕತೆ ಪ್ರಜಾಪ್ರಭುತ್ವವನ್ನು ಉಳಿಸಲು ಅತ್ಯವಶ್ಯಕ ಎಂದು ಅವರು ಹೇಳಿದರು. “ಬೆಲೆ ಏರಿಕೆ, ಶೋಷಣೆ, ದೌರ್ಜನ್ಯ ಕಡಿಮೆಯಾಗದ ಪರಿಸ್ಥಿತಿಯಲ್ಲೂ ಸರ್ವಾಧಿಕಾರಕ್ಕೆ ಜನರು ಮಾನ್ಯತೆ ನೀಡುತ್ತಿರುವುದು ದುರಂತ,” ಎಂದು ವಿಷಾದ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಸಂವಿಧಾನ ನೀಡಿರುವ ಮೌಲ್ಯಗಳನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು. ಸಂಘಟಿತ ಚಳುವಳಿಗಳ ಮೂಲಕ ದಸಂಸ ಧ್ವನಿಯಿಲ್ಲದವರ ಧ್ವನಿಯಾಗುತ್ತಿದೆ ಎಂದು ಪ್ರಶಂಸಿಸಿದರು.

ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ ಗಿಳಿಯಾರು ಪ್ರಾಸ್ತವಿಕವಾಗಿ ಮಾತನಾಡಿ, ದಸಂಸ ಚಳುವಳಿಯನ್ನು ಮುಂದಿನ ತಲೆಮಾರಿಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದರು. ಜಿಲ್ಲೆಯ ಏಳು ತಾಲೂಕುಗಳಲ್ಲಿ ಸಂಘಟನೆ ಸಕ್ರಿಯವಾಗಿ ಜನಪರ ಹೋರಾಟ ನಡೆಸುತ್ತಿದ್ದು, ಸಮಸಮಾಜದ ಗುರಿಯತ್ತ ಹೋರಾಟದ ರಥವನ್ನು ಗ್ರಾಮಾಂತರಕ್ಕೆ ವಿಸ್ತರಿಸುವ ಯೋಜನೆ ಮುಂದುವರಿದಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬ್ರಹ್ಮಾವರ ತಾಲೂಕು ನಿಯೋಜಿತ ಸಂಚಾಲಕರಾದ ಶ್ಯಾಮಸುಂದರ್ ತೆಕ್ಕಟ್ಟೆ ಹಾಗೂ ನೂತನ ಪದಾಧಿಕಾರಿಗಳು ಪದಗ್ರಹಣ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ದಲಿತಪರ ಹೋರಾಟಗಾರರು ಮತ್ತು ಸಾಧಕರಿಗೆ ಸನ್ಮಾನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಸಾದ್ ರಾಜ್ ಕಾಂಚನ್, ಎಸ್. ನಾರಾಯಣ್, ಪ್ರಶಾಂತ್ ಜತ್ತನ್, ಶ್ಯಾಮರಾಜ್ ಬಿರ್ತಿ, ಅಣ್ಣಪ್ಪ ನಕ್ರೆ, ಮಂಜುನಾಥ ನಾಗೂರು, ಸುರೇಶ್ ಹಕ್ಲಾಡಿ, ಅಣ್ಣಪ್ಪ ಮಾರ್ಸ್ತ ಹೆಬ್ರಿ, ಭಾಸ್ಕರ್ ನಿಟ್ಟೂರು, ಕುರ್ಮಾ ಕೋಟ, ಕೆ.ಸಿ.ರಾಜು ಬೆಟ್ಟಿನಮನೆ, ಶಿವರಾಜ್, ರಾಘವ ಕುಕ್ಕುಜೆ, ಶಂಕರದಾಸ್ ಚೇಂಡ್ಕಳ, ದೇವು ಹೆಬ್ರಿ, ರಾಜೇಂದ್ರನಾಥ್, ಗೀತಾ ಸುರೇಶ್ ಕುಮಾರ್, ವಸಂತಿ ಶಿವಾನಂದ್ ಮೊದಲಾದವರು ಉಪಸ್ಥಿತರಿದ್ದರು.












