ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭೆ ಬಿಜೆಪಿಯ ಆಡಳಿತಕ್ಕೆ ಒಳಪಟ್ಟಿದ್ದು, ಈ ಅವಧಿಯಲ್ಲಿ ನಗರಸಭೆ ಭ್ರಷ್ಟಾಚಾರದಿಂದ ತುಂಬಿ ತುಳುಕಿದೆ ಹಾಗೂ ಯಾವುದೇ ಗಮನಾರ್ಹ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರು ಹಾಗೂ ಉಡುಪಿ ನಗರಸಭೆಯ ನಾಮನಿರ್ದೇಶಿತ ಸದಸ್ಯರಾದ ಶ್ರೀ ಸುರೇಶ್ ಶೆಟ್ಟಿ ಬನ್ನಂಜೆ ಅವರು ಆರೋಪಿಸಿದ್ದಾರೆ.
ತಮ್ಮ ಆಡಳಿತ ವೈಫಲ್ಯವನ್ನು ಮರೆಮಾಚುವ ಉದ್ದೇಶದಿಂದ ಬಿಜೆಪಿಯ ಮಾಜಿ ಅಧ್ಯಕ್ಷರು ಹಾಗೂ ನಗರಸಭಾ ಸದಸ್ಯರು, ನಗರಸಭೆಯ ಅಧಿಕಾರಿಗಳು ಮತ್ತು ನೌಕರರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಉಡುಪಿ ಜನರನ್ನು ದಾರಿ ತಪ್ಪಿಸಲು ಯತ್ನಿಸುತ್ತಿದ್ದಾರೆ. ಇದು ಜನರನ್ನು ಮೋಸಗೊಳಿಸುವ ನೇರ ಪ್ರಯತ್ನವಾಗಿದೆ ಎಂದು ಅವರು ಹೇಳಿದರು.
ಐದು ವರ್ಷಗಳ ಅವಧಿಯಲ್ಲಿ ಉಡುಪಿ ನಗರಸಭೆಗೆ ಇಬ್ಬರು ಅಧ್ಯಕ್ಷರು ಹಾಗೂ ಇಬ್ಬರು ಶಾಸಕರು ಬಿಜೆಪಿಯವರೇ ಇದ್ದರೂ ನಗರಸಭಾ ವ್ಯಾಪ್ತಿಯ ಯಾವುದೇ ವಾರ್ಡಿನಲ್ಲಿಯೂ ಅಭಿವೃದ್ಧಿ ಕಂಡುಬಂದಿಲ್ಲ. ಪರಿಣಾಮವಾಗಿ ಉಡುಪಿ ನಗರಸಭೆ ಇಂದು ‘ಅಭಿವೃದ್ಧಿಹೀನ ನಗರಸಭೆ’ ಎಂಬ ದುಷ್ಟನಾಮಕ್ಕೆ ಗುರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ನಗರಸಭೆಯನ್ನು ಗುಡಿಸಿ ಗುಂಡಾಂತರ ಮಾಡಿದ ಬಿಜೆಪಿಯವರು ಇದೀಗ ತಮ್ಮ ತಪ್ಪುಗಳನ್ನು ಮರೆಮಾಚಲು ಅಧಿಕಾರಿಗಳು ಹಾಗೂ ನೌಕರರ ಮೇಲೆ ಆರೋಪ ಹೊರಿಸುತ್ತಿದ್ದು, ಇದನ್ನು ಉಡುಪಿ ಜನತೆ ಸಹಿಸುವುದಿಲ್ಲ. ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡುಗಳ ಮತದಾರರು ಬಿಜೆಪಿಯ ಸುಳ್ಳು ಹೇಳಿಕೆಗಳಿಗೆ ಮರುಳಾಗದೆ, ಮುಂದಿನ ಚುನಾವಣೆಯಲ್ಲಿ ಮತದಾನದ ಮೂಲಕ ತಕ್ಕ ಉತ್ತರ ನೀಡಲಿದ್ದಾರೆ ಎಂದು ಸುರೇಶ್ ಶೆಟ್ಟಿ ಬನ್ನಂಜೆ ಅವರು ತಿಳಿಸಿದರು.





