ರಾಜ್ಯ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಇತ್ತೀಚೆಗೆ ಆರ್ ಎಸ್ ಎಸ್ ವಿರುದ್ಧ ನೀಡಿದ ಹೇಳಿಕೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ವಿರೋಧಿಸುತ್ತಿರುವುದು ಅನಾವಶ್ಯಕ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಆರ್ಎಸ್ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರು ಸಂಘಟನೆ ರಾಜಕೀಯ ಪಕ್ಷವಲ್ಲವೆಂದು ಹಲವು ಬಾರಿ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಹೀಗಿರುವಾಗ ಸಚಿವರು ಸಂಘಟನೆ ಕುರಿತು ಪ್ರಶ್ನೆ ಮಾಡಿದಾಗ ಭಾರತೀಯ ಜನತಾ ಪಕ್ಷ ನಾಯಕರು ತೀವ್ರ ಪ್ರತಿಕ್ರಿಯೆ ನೀಡುತ್ತಿರುವುದು ಪ್ರಶ್ನಾರ್ಹವಾಗಿದೆ ಎಂದು ತಿಳಿಸಿದ್ದಾರೆ.
ಆರ್ಎಸ್ಎಸ್ ಮತ್ತು ಬಿಜೆಪಿ ನಡುವೆ ಸಂಬಂಧವಿಲ್ಲವೆಂದು ಹೇಳಲಾಗುತ್ತಿದ್ದರೂ, ಪ್ರಸ್ತುತ ರಾಜಕೀಯ ಪ್ರತಿಕ್ರಿಯೆಗಳು ಎರಡೂ ಸಂಘಟನೆಗಳು ಪರಸ್ಪರ ಸಂಬಂಧ ಹೊಂದಿರುವಂತೆ ತೋರುತ್ತಿವೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆರ್ಎಸ್ಎಸ್ಗೆ ಬಂದ ದೇಣಿಗೆಯ ಕುರಿತು ಸಚಿವ ಪ್ರಿಯಾಂಕ ಖರ್ಗೆ ಅವರು ಕೇಳಿರುವ ಪ್ರಶ್ನೆಯೇ ಬಿಜೆಪಿ ನಾಯಕರಿಗೆ ತಲೆನೋವಾಗಿದ್ದು, ಅದರ ಹಿನ್ನೆಲೆಯಲ್ಲಿಯೇ ನಿರಂತರವಾಗಿ ಸಚಿವರ ವಿರುದ್ಧ ಹೇಳಿಕೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜಕೀಯ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿಕೊಳ್ಳುವುದನ್ನು ಬಿಟ್ಟು, ರಾಜ್ಯದಲ್ಲಿ ಜಾತ್ಯಾತೀತ ನೆಲೆಯಲ್ಲಿ ಶಾಂತಿ ಮತ್ತು ಸಹಬಾಳ್ವೆಯನ್ನು ಕಾಪಾಡುವ ದಿಕ್ಕಿನಲ್ಲಿ ಕೆಲಸ ಮಾಡುವುದು ಅಗತ್ಯವಾಗಿದೆ. ನಾವು ಎಲ್ಲರೂ ಭಾರತೀಯರು ಎಂಬ ಭಾವನೆ ಸಮಾಜದಲ್ಲಿ ಬಲವಾಗಬೇಕು ಎಂದು ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ.





