ಜಿಲ್ಲೆಯಲ್ಲಿ ಈವರೆಗೂ 182 ಡೆಂಘೀ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಎಲ್ಲ ಜನವಸತಿ ಪ್ರದೇಶಗಳಲ್ಲಿ ವಾರಕ್ಕೆರಡು ಬಾರಿ ಫಾಗಿಂಗ್, ಚರಂಡಿಗಳ ಸ್ವಚ್ಛತೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದರು.
ತುಮಕೂರು ಜಿಲ್ಲಾಧಿಕಾ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಡೆಂಘೀ ನಿಯಂತ್ರಣಕ್ಕೆ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡು ಮಾತನಾಡಿದರು.
“ಡೆಂಘೀ ಪ್ರಕರಣಗಳು ಜೂನ್ ಮಾಹೆಯಿಂದ ಸೆಪ್ಟೆಂಬರ್ ಮಾಹೆಯವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುವುದರಿಂದ ಮಹಾನಗರ ಪಾಲಿಕೆ, ಆರೋಗ್ಯ, ಶಿಕ್ಷಣ ಇಲಾಖೆಗಳು ಸೇರಿದಂತೆ ಮತ್ತಿತರ ಇಲಾಖೆಗಳ ಸಹಭಾಗಿತ್ವದಲ್ಲಿ ಈಗಾಗಲೇ ಡೆಂಘೀ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.
“ರಾಜ್ಯದಲ್ಲಿ ಈವರೆಗೆ ಸುಮಾರು 5,700 ಡೆಂಘೀ ಪ್ರಕರಣಗಳು ವರದಿಯಾಗಿದ್ದು, ಸಾವುಗಳೂ ಸಂಭವಿಸಿವೆ. ಇದರಿಂದ ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗುತ್ತಿದೆ. ಜಿಲ್ಲೆಯಲ್ಲಿ ಡೆಂಘೀ-ಚಿಕುನ್ಗುನ್ಯಾದಿಂದ ಯಾವುದೇ ಸಾವು-ನೋವು ಸಂಭವಿಸಿಲ್ಲವಾದರೂ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಬೇಕೆಂದು ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ ನಿರ್ದೇಶನ ನೀಡಲಾಗಿದೆ” ಎಂದು ಮಾಹಿತಿ ನೀಡಿದರು.
“ಜಿಲ್ಲೆಯಲ್ಲಿ ಈವರೆಗೂ 3,305 ಶಂಕಿತ ಡೆಂಘೀ ಪ್ರಕರಣಗಳ ಪೈಕಿ 1662 ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದ್ದು, ಇದರಲ್ಲಿ 182 ಜನರಲ್ಲಿ ಡೆಂಘೀ ಇರುವುದು ದೃಢಪಟ್ಟಿದೆ. ಜಿಲ್ಲೆಯ ಜನತೆ ಆರೋಗ್ಯದ ಹಿತದೃಷ್ಟಿಯಿಂದ ಡೆಂಘೀ ನಿಯಂತ್ರಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಾಲಿಕೆ, ಆರೋಗ್ಯ ಇಲಾಖೆ ಜಂಟಿಯಾಗಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿವೆ” ಎಂದು ತಿಳಿಸಿದರು.
“ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, 148 ಪ್ರಾಥಮಿಕ ಆರೋಗ್ಯ ಕೇಂದ್ರ, 3 ವೈದ್ಯಕೀಯ ಕಾಲೇಜು ಹಾಗೂ 2 ಸರ್ಕಾರಿ ಸೇರಿದಂತೆ 9 ಖಾಸಗಿ ಪ್ರಯೋಗಾಲಯಗಳಲ್ಲಿ ಡೆಂಘೀ ಪರೀಕ್ಷೆ ಮಾಡಿಸಬಹುದಾಗಿದ್ದು, ಜನರು ಡೆಂಘೀ ರೋಗ ಲಕ್ಷಣಗಳು ಕಂಡುಬಂದ ಕೂಡಲೇ ಉದಾಸೀನ ಮಾಡದೆ ರಕ್ತದ ಮಾದರಿಯನ್ನು ಪರೀಕ್ಷೆಗೊಳಪಡಿಸಬೇಕು. ಡೆಂಘೀ ಪರೀಕ್ಷೆಗೆ ಖಾಸಗಿ ಆಸ್ಪತ್ರೆ/ಪ್ರಯೋಗಾಲಯಗಳು ₹300ಕ್ಕಿಂತ ಹೆಚ್ಚಿನ ದರ ಪಡೆದಲ್ಲಿ ಅಂತಹ ಆಸ್ಪತ್ರೆ/ಪ್ರಯೋಗಾಲಯಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು” ಎಂದು ಮಾಹಿತಿ ನೀಡಿದರು.
“ಆಸ್ಪತ್ರೆಗಳಲ್ಲಿ ಡೆಂಘೀ ಟೆಸ್ಟಿಂಗ್ ಕಿಟ್ ಹಾಗೂ ಔಷಧಿ ಕೊರತೆಯಿದ್ದಲ್ಲಿ ಹೊಸದಾಗಿ ಖರೀದಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.
ಜಿಲ್ಲೆಯಲ್ಲಿ ದೃಢಪಟ್ಟ 182ಡೆಂಗ್ಯೂ ಪ್ರಕರಣಗಳಲ್ಲಿ ಜಿಲ್ಲಾಸ್ಪತ್ರೆಯಲ್ಲಿ 9ರೋಗಿಗಳು ಒಳರೋಗಿಯಾಗಿ ದಾಖಲಾಗಿದ್ದರು. ಈ ಪೈಕಿ ಐಸಿಯುನಲ್ಲಿ 1 ಮಗು ಸೇರಿ 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರನ್ನು ಗುಣಮುಖರಾದ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರಲ್ಲದೆ ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ರೋಗಿಗಳಿಗೆ ಚಿಕಿತ್ಸೆ ನೀಡಲು 20 ಹಾಸಿಗೆಗಳುಳ್ಳ ಪ್ರತ್ಯೇಕ ವಾರ್ಡನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, “ಡೆಂಘೀ ನಿಯಂತ್ರಣಕ್ಕೆ ರಾಜ್ಯ ಆರೋಗ್ಯ ಸಚಿವಾಲಯದಿಂದ ಹೊರಡಿಸಿರುವ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಸೊಳ್ಳೆಯಿಂದ ಹರಡುವ ಡೆಂಘೀ ಮತ್ತು ಚಿಕುನ್ಗುನ್ಯಾ ರೋಗ ನಿಯಂತ್ರಣ ಕ್ರಮಗಳ ಬಗ್ಗೆ ಮನೆ-ಮನೆ ಲಾರ್ವಾ ಸಮೀಕ್ಷೆ ಮಾಡುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ” ಎಂದರು.
“ಹಠಾತ್ತನೆ ಬರುವ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರತೆ ನೋವಿನಂತಹ ಅನುಭವಗಳು ಡೆಂಘೀ ಜ್ವರದ ಲಕ್ಷಣಗಳಾಗಿವೆ. ಇಂತಹ ಲಕ್ಷಣಗಳು ಕಂಡುಬಂದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಲು ಅರಿವು ಮೂಡಿಸಲಾಗುತ್ತಿದೆ. ಮನೆಯಲ್ಲಿ ನೀರನ್ನು ಸಂಗ್ರಹಿಸುವ ತೊಟ್ಟಿ, ಡ್ರಮ್, ಬ್ಯಾರಲ್ಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಛಗೊಳಿಸಬೇಕು. ನೀರನ್ನು ಮುಚ್ಚಿಡಬೇಕು. ನೀರು ನಿಲ್ಲದಂತೆ ಸೊಳ್ಳೆ ಉತ್ಪತ್ತಿ ತಡೆಯುವ ಬಗ್ಗೆ ಎಚ್ಚರಿಕೆ ಸಂದೇಶಗಳನ್ನು ಜನ ಸಮುದಾಯಗಳಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ” ಎಂದು ಡೆಂಘೀ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, “ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿ ಸ್ವಚ್ಛತೆಗಾಗಿ ಎಲ್ಲ ಪಂಚಾಯತಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದು, ಸುಮಾರು 3 ಲಕ್ಷ ಮೀಟರ್ ಚರಂಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆಯಲ್ಲದೆ, ಮಧುಗಿರಿ ಚಿನ್ನೇನಹಳ್ಳಿ ಪ್ರಕರಣದ ನಂತರ ಜನರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲ ಓವರ್ಹೆಡ್ ಟ್ಯಾಂಕ್ ಸ್ವಚ್ಛತೆ ಹಾಗೂ ನೀರನ್ನು ಪರೀಕ್ಷೆಗೊಳಪಡಿಸಲಾಗಿದೆ. ಈವರೆಗೆ 9,090 ಕೊಳವೆ ಬಾವಿ ಹಾಗೂ 5,650 ಸಿಸ್ಟನ್ ಸೇರಿ 36,000 ಜಲಮೂಲಗಳನ್ನು ಪರೀಕ್ಷೆಗೊಳಪಡಿಸಲಾಗಿದೆ” ಎಂದು ಸಭೆಗೆ ಮಾಹಿತಿ ನೀಡಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಸಿದ್ದರಾಮಯ್ಯ ಸರ್ಕಾರ ಯಾರಿಗೂ ಮೋಸ ಮಾಡುವುದಿಲ್ಲ: ಗೃಹ ಸಚಿವ ಪರಮೇಶ್ವರ್
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್, ಪಾಲಿಕೆ ಆಯುಕ್ತ ಬಿ ವಿ ಅಶ್ವಿಜ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಅಸ್ಗರ್ಬೇಗ್, ಮಲೇರಿಯಾ ಅಧಿಕಾರಿ ಡಾ. ಚಂದ್ರಶೇಖರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ, ಪಾಲಿಕೆ ಆರೋಗ್ಯಾಧಿಕಾರಿ ಡಾ. ವೀರೇಶ್ ಕಲ್ಮಟ್, ಹಲವು ತಾಲೂಕಿನ ಆರೋಗ್ಯ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.





