ವಿದ್ಯಾರ್ಥಿಗಳು ಸಾಮಾಜಿಕವಾಗಿ, ರಾಜಕೀಯವಾಗಿ ಪ್ರಜ್ಞೆಯನ್ನು ಮೂಡಿಸಿಕೊಳ್ಳಬೇಕು ಜೊತೆಗೆ ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಹೋರಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಪ್ರಗತಿಪರ ಹೋರಾಟಗಾರ ದೊರೈರಾಜು ಅಭಿಪ್ರಾಯಪಟ್ಟರು.
ತುಮಕೂರು ನಗರದ ಪತ್ರಿಕಾ ಭವನದಲ್ಲಿ ರಾಜ್ಯದಲ್ಲಿ ಸರ್ಕಾರವೇ ಶಿಕ್ಷಣದ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಆಗ್ರಹಿಸಿ ನಡೆದ ಎಐಡಿಎಸ್ಒನ 2ನೇ ಜಿಲ್ಲಾ ಮಟ್ಟದ ವಿದ್ಯಾರ್ಥಿ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿ ಅವರು ಮಾತನಾಡಿದರು.
ಸಮಾಜದ ಬಗ್ಗೆ ವಿದ್ಯಾರ್ಥಿ ಸಮುದಾಯ ಅರಿವು ಮೂಡಿಸಿಕೊಳ್ಳಬೇಕು. ಈಗ ಬರುತ್ತಿರುವ ರಾಜ್ಯ ಶಿಕ್ಷಣ ನೀತಿ, ಎಐಡಿಎಸ್ಒ ಕಟ್ಟಿದ ಎನ್ಇಪಿ ವಿರೋಧಿ ಹೋರಾಟದಿಂದ ಸಾಧ್ಯವಾಗಿದೆ. ಇದರ ನಿಜವಾದ ಸಾರ್ಥಕತೆ ಜನಪರ ಶಿಕ್ಷಣ ನೀತಿ ರಚನೆಯಾಗುವುದರಲ್ಲಿದೆ ಎಂದು ಹೇಳಿದರು.
ಎಐಡಿಎಸ್ಒ ರಾಜ್ಯ ಉಪಾಧ್ಯಕ್ಷೆ ಅಪೂರ್ವ ಮಾತನಾಡಿ, ರಾಜ್ಯದಲ್ಲಿ ಎನ್ಇಪಿ 2020, ತೆಗೆದುಹಾಕಲು ಮುಖ್ಯ ಕಾರಣ ವಿದ್ಯಾರ್ಥಿಗಳ ಹೋರಾಟ. ರಾಜ್ಯ ಶಿಕ್ಷಣ ನೀತಿಯಲ್ಲಿ ಸರ್ಕಾರಿ ಶಾಲಾ ಕಾಲೇಜು ನಿರ್ವಹಣೆಯ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕು. ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸಲು ವಿದ್ಯಾರ್ಥಿಗಳ ಹಣದ ಮೇಲೆ ಅವಲಂಬಿತ ಆಗಬಾರದು. ಕಡಿಮೆ ದಾಖಲಾತಿ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲನಗೊಳಿಸುವುದು ಹಾಗೂ ಮುಚ್ಚುವುದನ್ನು ನಿಲ್ಲಿಸಬೇಕು. ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಕಾರ್ಪೊರೇಟ್ ಕಂಪನಿಗಳ ಬಳಿ ದನ ಸಹಾಯ ಪಡೆಯುವ ಬದಲು, ಜನಗಳಿಂದ ಸಂಗ್ರಹಿಸಿರುವ ತೆರಿಗೆ ಹಣದಲ್ಲಿ ಸರ್ಕಾರವೇ ನೀಡಬೇಕು.
ವಿದೇಶಿ ನೇರ ಬಂಡವಾಳ ಹೂಡಿಕೆ ಹೆಸರಿನಲ್ಲಿ ವಿದೇಶಿ ವಿವಿಗಳನ್ನು ತೆರೆಯಲು ಅವಕಾಶ ಕೊಡಬಾರದು. ವಿದ್ಯಾರ್ಥಿಗಳಿಗೆ ಕೌಶಲ್ಯ ಆಧಾರಿತ ಶಿಕ್ಷಣದ ಹೆಸರಿನಲ್ಲಿ ಮೌಲ್ಯಗಳನ್ನು ಕಡೆಗಣಿಸಬಾರದು. ಈ ಅಂಶಗಳನ್ನು ಗಮನಿಸಿ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಬೇಕು ಎಂದು ಅಗ್ರಹಿಸಿದರು.
ವಿದ್ಯಾರ್ಥಿಗಳ ಬೇಡಿಕೆಗಳಂತೆ ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕೂಡ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕು, ಶೈಕ್ಷಣಿಕ ಕ್ಷೇತ್ರಕ್ಕೆ ಹೆಸರಾಗಿರುವ ತುಮಕೂರಿನಲ್ಲೂ ಕೂಡ ಒಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಬೇಕೆಂದು ಆಗ್ರಹಿಸಿದರು. ವಿದ್ಯಾರ್ಥಿಗಳು ಭಗತ್ ಸಿಂಗ್, ನೇತಾಜಿಯವರ ವಿಚಾರಗಳನ್ನು ಅಳವಡಿಸಿಕೊಂಡು ಅನ್ಯಾಯದ ವಿರುದ್ಧ ಹೋರಾಟ ಮಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳುತ್ತ ಪರಿಪೂರ್ಣ ವಿದ್ಯಾರ್ಥಿಗಳಾಗಬೇಕು ಎಂದು ಕರೆ ನೀಡಿದರು.
ಈ ಸಮ್ಮೇಳನದಲ್ಲಿ ಎಐಡಿಎಸ್ಒ ತುಮಕೂರು ಜಿಲ್ಲಾ ಮಟ್ಟದ ನೂತನ ಕೌನ್ಸಿಲ್ ಅನ್ನು ಚುನಾಯಿಸಲಾಯಿತು ಜಿಲ್ಲಾಧ್ಯಕ್ಷರಾಗಿ ಅಶ್ವಿನಿ ಟಿ.ಇ, ಕಾರ್ಯದರ್ಶಿಯಾಗಿ ಲಕ್ಕಪ್ಪ , ಕಚೇರಿ ಕಾರ್ಯದರ್ಶಿಯಾಗಿ ಅಕ್ಷರ್ ಹಾಗೂ ಕಾರ್ಯದರ್ಶಿ ಮಂಡಳಿ ಸದಸ್ಯರಾಗಿ ಭರತ್, ಸುಮಂತ್, ಸಾಗರ್, ಸಚಿನ್, ಮಹೇಶ್, ಮಹಾಂತೇಶ, ನಾಗರಾಜ್, ಪಲ್ಲವಿ , ನಂದೀಶ್, ಮಿಥುನ್, ಅಭಿಷೇಕ್, ಶಶಾಂಕ್ ಹಾಗೂ ಕಾರ್ಯಕಾರಿ ಸಮಿತಿ ಸೇರಿದಂತೆ ವಿವಿಧ ಪದಾಧಿಕಾರಿಗಳಾಗಿ ಚುನಾಯಿಸಲ್ಪಟ್ಟರು.
ಕಾರ್ಯಕ್ರಮದಲ್ಲಿ ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ರವಿಕಿರಣ್ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.





