ಐತಿಹಾಸಿಕ ಪ್ರಸಿದ್ದ ತುಮಕೂರಿನ ಸಿದ್ದಗಂಗೆಯಲ್ಲಿ ಸಿದ್ದಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ಶ್ರೀಕ್ಷೇತ್ರ ಸಿದ್ದಗಂಗೆಯ ಆರಾಧ್ಯದೈವ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಬೆಳಿಗ್ಗೆ 11.59ಕ್ಕೆ ಸರಿಯಾಗಿ ರಥದ ಗಾಲಿಗೆ ತೆಂಗಿನಕಾಯಿ ಒಡೆದು ಹಾಗೂ ಶ್ರೀಸ್ವಾಮಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು.
ರಥೋತ್ಸವದಲ್ಲಿ ಶ್ರೀಕ್ಷೇತ್ರದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ, ಶಾಸಕ ಜ್ಯೋತಿಗಣೇಶ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ ವಿ, ಅಡಿಷನಲ್ ಎಸ್ಪಿ ವಿ ಮರಿಯಪ್ಪ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಮಹಾನಗರ ಪಾಲಿಕೆ ಆಯುಕ್ತೆ ಬಿ ವಿ ಅಶ್ವಿಜಾ, ತಹಶೀಲ್ದಾರ್ ಸಿದ್ದೇಶ್ ಸೇರಿದಂತೆ ಹಲವು ಮಠಾಧೀಶರು, ಅನೇಕ ಗಣ್ಯರು, ಭಕ್ತಾದಿಗಳು ಪಾಲ್ಗೊಂಡು ರಥವನ್ನು ಮುಂದಕ್ಕೆ ಎಳೆದು ಭಕ್ತಿ ಸಮರ್ಪಿಸಿದರು.
ಇದಕ್ಕೂ ಮುನ್ನ ರಥಕ್ಕೆ ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಃ, ಕಳಸಗಳ ಆರಾಧನೆ, ರಥಾಂಗ ಪೂಜೆ ಸೇರಿದಂತೆ ವಿವಿಧ ಪೂಜೆ ಸಲ್ಲಿಸಿ ಶ್ರೀಕ್ಷೇತ್ರದ ಆರಾಧ್ಯ ದೈವ ಸಿದ್ದಲಿಂಗೇಶ್ವರಸ್ವಾಮಿಯನ್ನು ರಥಕ್ಕೆ ಕೂರಿಸಿ ರಾಜೋಪಚಾರ ಮತ್ತು ಅಷ್ಟೋತ್ತರ ಪೂಜೆ ನೆರವೇರಿಸಿದರು. ರಥದ ಮುಂಭಾಗದಲ್ಲಿ ಜಯಾದಿ ಹೋಮ, ಗಣಹೋಮ, ಮೃತ್ಯುಂಜಯ ಹೋಮವನ್ನೂ ಮಾಡಿದರು.
ರಥವನ್ನು ಅಭೂತಪೂರ್ಣ ವಸ್ತ್ರಗಳಿಂದ ಸುವರ್ಣ ಕಲಶಗಳಿಂದ ಧಾರ್ಮಿಕ ಲಾಂಛನಗಳಾದ ಮಕರ, ತೋರಣ, ಕಲಶ, ಕನ್ನಡಿ, ವಿವಿಧ ಬಗೆಯ ಪುಷ್ಪ ಮಾಲೆಗಳಿಂದ ಅಲಂಕರಿಸಿದ್ದರು.
ರಥ ಸಾಗಿದ ದಾರಿಯುದ್ದಕ್ಕೂ ನಂದಿಧ್ವಜ, ಕರಡಿ ಮಜಲು, ನಾಗಸ್ವರ, ವೀರಗಾಸೆ, ಪಟಕುಣಿತ, ಡೋಲು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನ ನೆರೆದಿದ್ದ ಭಕ್ತ ಸಮೂಹವನ್ನು ಆಕರ್ಷಿಸಿದವು.
ನಾಡಿನ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಸುಡು ಬಿಸಿಲನ್ನೂ ಲೆಕ್ಕಿಸದೆ ರಥೋತ್ಸವದಲ್ಲಿ ಭಾಗವಹಿಸಿ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಮಾಡಿಕೊಂಡಿದ್ದ ಹರಕೆ ತೀರಿಸಲು ರಥಕ್ಕೆ ಬಾಳೆಹಣ್ಣು, ಹೂವು, ದವನ ಎಸೆದು ಭಕ್ತಿ ಸಮರ್ಪಿಸಿದರು. ಶಿವರಾತ್ರಿ ಪ್ರಯುಕ್ತ ಜಾಗರಣೆಗಾಗಿ ನಾಡಿನಾದ್ಯಂತ ಸಹಸ್ರಾರು ಭಕ್ತಾದಿಗಳು ರಾತ್ರಿಯೇ ಶ್ರೀಮಠಕ್ಕೆ ಆಗಮಿಸಿದ್ದು, ಇಂದು ನಡೆದ ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಅನರ್ಹತೆ ಹಿನ್ನೆಲೆ ನಗರಸಭೆ ಆಯುಕ್ತ ಮಂಜುನಾಥ್ ನೇಮಕಾತಿ ರದ್ದು; ವಾರ್ಡ್ ಸದಸ್ಯರ ಅಸಮಾಧಾನ
ಶ್ರೀಕ್ಷೇತ್ರದಲ್ಲಿಂದು ಸುಡುವ ಬಿಸಿಲನ್ನೂ ಲೆಕ್ಕಿಸದೆ ಭಕ್ತಾದಿಗಳು ಶ್ರೀಮಠದ ಶಾಲಾ ಕಟ್ಟಡಗಳ ಮೇಲೆ ಹತ್ತಿ ರಥೋತ್ಸವವನ್ನು ವೀಕ್ಷಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ರಥೋತ್ಸವದ ಪ್ರಯುಕ್ತ ಭಕ್ತಾದಿಗಳಿಗೆ ಹಲವು ಸಂಘ ಸಂಸ್ಥೆಗಳಿಂದ ಪಾನಕ, ಮಜ್ಜಿಗೆಯನ್ನು ವಿತರಿಸಿದರು.
ರಥೋತ್ಸವದಲ್ಲಿ ನಾಡಿನ ಹಲವೆಡೆಯಿಂದ ಪಾಲ್ಗೊಂಡಿದ್ದ ಸಹಸ್ರಾರು ಮಂದಿ ಭಕ್ತಾದಿಗಳಿಗೆ ವಿಶೇಷ ಪ್ರಸಾದ, ದಾಸೋಹ ವ್ಯವಸ್ಥೆ ಮಾಡಲಾಗಿತ್ತು. ರಥೋತ್ಸವದಲ್ಲಿ ನಾಡಿನ ವಿವಿಧೆಡೆಗಳಿಂದ ಸಹಸ್ರಾರು ಮಂದಿ ಭಕ್ತಾದಿಗಳು ಪಾಲ್ಗೊಂಡಿದ್ದರು.





