ಇತ್ತೀಚಿಗೆ ವಿದ್ಯಾರ್ಥಿಗಳು ಹೆಚ್ಚು ಮೊಬೈಲ್ ಬಳಕೆಯಿಂದ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಮೊಬೈಲ್ ಚಟ ಮಾರಕ ಎಂಬುದು ಹೇಳಬೇಕಾದವರು ಸಹ ಮೊಬೈಲ್ ಗೆ ಮಾರು ಹೋಗಿದ್ದಾರೆ ಎಂದು ಕಾನೂನು ಸೇವಾ ಪ್ರಾಧಿಕಾರದ ಸರಕಾರಿ ಅಭಿಯೋಜಕಿ ಕೆ.ಶೋಭಾ ಬೇಸರ ವ್ಯಕ್ತಪಡಿಸಿದರು.
ತಾಲೂಕಿನ ಕೆ.ಜಿ.ಟೆಂಪಲ್ ನಾಗಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸರಕಾರಿ ಅಭಿಯೋಜಕರ ಇಲಾಖೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸೈಬರ್ ಕೈಂ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಸಾಕಷ್ಟು ದೊಡ್ಡ ಮಟ್ಟದಲ್ಲಿ ಎಲ್ಲೆಡೆ ಹಬ್ಬುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸೈಬರ್ ವಂಚಕರ ಆಮಿಷಕ್ಕೆ ಒಳಗಾಗಿ ಮೊಬೈಲ್ ಬಳಕೆದಾರರು ಮೋಸ ಹೋಗುತ್ತಿದ್ದಾರೆ. ಅದರೊಂದಿಗೆ ತಮ್ಮ ಜೀವನದಲ್ಲಿ ಹಲವಾರು ಸಮಸ್ಯೆಗಳಿಗೆ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ. ಅದರಿಂದ ಕಾನೂನು ತೊಡಕುಗಳಿಗೆ ಹಾಗೂ ಮುಂದಿನ ಪೀಳಿಗೆಗೆ ದೊಡ್ಡ ಹೊಡೆತ ಬೀಳುತ್ತಿದೆ ಎಂದು ಹೇಳಿದರು.
ವಕೀಲರ ಸಂಘದ ಉಪಾಧ್ಯಕ್ಷ ಸಿ.ಕೆ.ರವೀಂದ್ರ ಮಾತನಾಡಿ, ಓದಿನ ಜತೆಯಲ್ಲಿ ಸಮಾಜದ ಆಗು ಹೋಗುಗಳ ಬಗ್ಗೆ ಮಾಹಿತಿ ಸಹ ಪಡೆಯುವಂತಹ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಾಸ್ತವ ಸತ್ಯ ಅರಿಯಬೇಕು. ಪೋಷಕರು ಅವಿದ್ಯಾವಂತರಾಗಿದ್ದಲ್ಲಿ ನೀವು ಸಮಾಜಕ್ಕೆ ದಾರಿಯಾಗಬೇಕಿದೆ. ಓದುವ ಸಮಯದಲ್ಲಿ ಯಾವುದೇ ಕಾರಣಕ್ಕೂ ಹೆಚ್ಚು ಮೊಬೈಲ್ ಬಳಸದೆ, ಚೆನ್ನಾಗಿ ಓದಿ ವಿದ್ಯಾವಂತರಾಗಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ವಸಂತ ಕುಮಾರಿ, ವಕೀಲರ ಸಂಘದ ಜಂಟಿ ಕಾರ್ಯದರ್ಶಿ ರಂಗಸ್ವಾಮಯ್ಯ, ಪೊಲೀಸ್ ಇಲಾಖೆಯ ಗಂಗರಾಜು, ಮತ್ತು ಶಿಕ್ಷಕರು, ವಿದ್ಯಾರ್ಥಿಗಳು ಇತರರು ಇದ್ದರು.





