ಹೇರೂರು ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿ ಎಂದು ಆಡಳಿತಾಧಿಕಾರಿಯಾಗಿ ನೇಮಕಗೊಂಡ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಗದೀಶ್ ಎಲ್ಲಾ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕಿನ ಕಸಬ ಹೋಬಳಿ ಹೇರೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಿಬ್ಬಂದಿಗಳ ಕುರಿತು ಮಾತನಾಡಿದ ಅವರು ಬೇಸಿಗೆ ಕಾಲದಲ್ಲಿ ನೀರಿನ ವ್ಯವಸ್ಥೆ ಬಹುಮುಖ್ಯವಾಗಿರುತ್ತದೆ. ಸರ್ಕಾರಿ ಶಾಲೆ, ಅಂಗನವಾಡಿ ಸೇರಿದಂತೆ ಎಲ್ಲಾ ಗ್ರಾಮದಲ್ಲೂ ಕುಡಿಯುವ ನೀರಿನ ಬಗ್ಗೆ ಎಲ್ಲಾ ವಾಟರ್ ಮೆನ್ ಗಳು ನಿಗಾವಹಿಸಬೇಕು ಎಂದು ತಿಳಿಸಿದರು.
ಗ್ರಾಮಗಳ ಆರೋಗ್ಯ ಕಾಪಾಡಲು ಸ್ವಚ್ಚತೆ ಕಡೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಕಸ ವಿಲೇವಾರಿ ಬಗ್ಗೆ ಎಲ್ಲಾ ಸಿಬ್ಬಂದಿಗಳು ಹೆಚ್ಚಿನ ಗಮನಹರಿಸಬೇಕು. ಹಾಗೆಯೇ ನಿರ್ವಹಣೆ ಮಾಡಬೇಕು. ಎಲ್ಲೂ ದೂರು ಬಾರದಂತೆ ಕ್ರಮ ವಹಿಸಿ ಸಿಬ್ಬಂದಿಗಳು ಕೆಲಸ ಮಾಡಿ. ಯಾವುದೇ ಒತ್ತಡಕ್ಕೆ ಮಣಿಯದೆ ಗೊಂದಲಕ್ಕೀಡಾಗದೇ ಕೆಲಸ ಮಾಡಿ. ನಿಮ್ಮಲ್ಲಿ ಕಾನೂನು ರೀತ್ಯಾ ಕೆಲಸ ಮಾಡುವ ಒಗ್ಗಟ್ಟು ಪ್ರದರ್ಶನ ಮಾಡಿ. ಸಾರ್ವಜನಿಕರನ್ನು ಅಲೆದಾಡಿಸಬೇಡಿ ಎಂದು ಕರೆ ನೀಡಿದ ಅವರು ಆದಾಯ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಪಟ್ಟಣಕ್ಕೆ ಸಮೀಪದ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆದಾಯ ಹೆಚ್ಚಿಸಲು ತೆರಿಗೆ ವಸೂಲಿ ಕಟ್ಟುನಿಟ್ಟಿನಲ್ಲಿ ನಡೆಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಿಡಿಓ ಚಂದ್ರಶೇಖರ್, ಕಾರ್ಯದರ್ಶಿ ರಘು ಪ್ರಕಾಶ್, ಬಿಲ್ ಕಲೆಕ್ಟರ್ ಸಿದ್ದೇಶ್ ಸೇರಿದಂತೆ ಎಲ್ಲಾ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.





