ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಂಡಿಸ್ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಕ್ಕೆ ಸೋಮವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಪ್ರಭು.ಜಿ ಅವರು ದಿಢೀರ್ ಭೇಟಿ ನೀಡಿ ಪರೀಶಿಲನೆ ನಡೆಸಿದರು.
ಈ ಸಂದರ್ಭದಲ್ಲಿ, ಅಂಗನವಾಡಿ ಮೇಲ್ವಿಚಾರಕಿ ಗೈರು ಹಾಜರಾಗಿರುವುದನ್ನು ಯಾವುದೇ ದಾಖಲೆಗಳಲ್ಲಿ ದಾಖಲು ಮಾಡದೇ ಹಾಗೂ ಅಂಗನವಾಡಿ ಸಿಬ್ಬಂದಿಗೆ ಮಾಹಿತಿ ನೀಡದೇ ಹೋಗಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ಈ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ತಿಪಟೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿಗೆ ಸೂಚನೆ ನೀಡಿದರು.
ಅಂಗನವಾಡಿ ವ್ಯಾಪ್ತಿಗೆ ಒಳಪಡುವ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿದ ಅವರು ಫಲಾನುಭವಿಗಳಿಗೆ ನೇರವಾಗಿ ಕರೆ ಮಾಡಿ ಮಾಹಿತಿ ಖಚಿತಪಡಿಸಿಕೊಂಡರು.
ನಂತರ ಹಿಂಡಿಸ್ಕೆರೆ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ನರೇಗಾ, ಸ್ವಚ್ಛ ಭಾರತ್ ಮಿಷನ್, ಜಲ್ ಜೀವನ್ ಮಿಷನ್, ಸಂಜೀವಿನಿ, ಇ-ಸ್ವತ್ತು ಸೇರಿದಂತೆ 1 ರಿಂದ 7ರವರೆಗಿನ ವಹಿಗಳು ಹಾಗೂ ವಿವಿಧ ಕಡತಗಳನ್ನು ಪರಿಶೀಲಿಸಿದರು. ಪರಿಶೀಲನೆಯ ವೇಳೆ ಕಚೇರಿಯಲ್ಲಿ ಕೆಲ ನ್ಯೂನ್ಯತೆಗಳು ಕಂಡುಬಂದ ಹಿನ್ನೆಲೆಯಲ್ಲಿ, ಸಮಗ್ರ ವರದಿ ಸಲ್ಲಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗೆ ನಿರ್ದೇಶನ ನೀಡಿದರು.





