ಇತಿಹಾಸ ಪ್ರಸಿದ್ದ ಹೆತ್ತೇನಹಳ್ಳಿಯ ಶ್ರೀ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ರಾತ್ರಿಯಿಂದ ಆರಂಭವಾಗಿದ್ದು, ಶ್ರೀ ಅಮ್ಮನವರ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಮುಂಜಾನೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ಪ್ರತಿ ವರ್ಷದಂತೆ ಈ ಬಾರಿಯೂ ಮುಂಜಾನೆ ನಡೆದ ಹೆತ್ತೇನಹಳ್ಳಿಯಮ್ಮನ ರಥೋತ್ಸವಕ್ಕೆ ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತ ಸಮೂಹ ಸಾಕ್ಷಿಯಾಯಿತು.
ತುಮಕೂರು ತಾಲ್ಲೂಕಿನ ಗೂಳೂರು ಹೋಬಳಿಯ ಹೆತ್ತೇನಹಳ್ಳಿ, ಕೈದಾಳ, ಗೂಳೂರು, ಕಂಭತ್ತನಹಳ್ಳಿ, ರಂಗಯ್ಯನಪಾಳ್ಯ, ಕುಮಂಜಿಪಾಳ್ಯ, ಚಿಕ್ಕಸಾರಂಗಿ, ಗಳಿಗೇನಹಳ್ಳಿ, ನಂದಿಹಳ್ಳಿ, ಹೊಸಹಳ್ಳಿ, ನರುಗನಹಳ್ಳಿ, ಮಾಯಣ್ಣಗೌಡನ ಪಾಳ್ಯ ಸೇರಿದಂತೆ ಈ ಭಾಗದ ಹಳ್ಳಿಗಳಲ್ಲಿ ಹೆತ್ತೇನಹಳ್ಳಿಯಮ್ಮನ ಜಾತ್ರೆಗೆ ವಿಶೇಷವಾಗಿಯೇ ಭಕ್ತ ಸಮೂಹ ಸಜ್ಜಾಗುತ್ತಾರೆ. ಅದರಂತೆ ಸೋಮವಾರ ಇಡೀ ದಿನ ಭಕ್ತರು ಉಪವಾಸ ವ್ರತ ಮಾಡಿ ಮುಂಜಾನೆ ಅಗ್ನಿಕೊಂಡ ಹಾಯ್ದು ಅಮ್ಮನವರಿಗೆ ಹರಕೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.
ಇನ್ನು ಈ ಭಾಗದ ಹೆಣ್ಣು ಮಕ್ಕಳು ಅಮ್ಮನವರಿಗೆ ಬಾಯಿ ಬೀಗದ ಹರಕೆ ತೀರಿಸುವ ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಹದಿ ಹರೆಯದ ಹೆಣ್ಣು ಮಕ್ಕಳು, ಮಹಿಳೆಯರು ಸಹ ಉಪವಾಸ ವ್ರತ ಮಾಡಿ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ಬಾಯಿಬೀಗ ಹಾಕಿಸಿಕೊಂಡು ಪೂಜೆ ಸಲ್ಲಿಸುವ ಮೂಲಕ ತಮ್ಮ ಹರಕೆ ತೀರಿಸಿದರು.
ಹೆತ್ತೇನಹಳ್ಳಿ ಜಾತ್ರೆಗೆಂದೇ ಕಂಭತ್ತನಹಳ್ಳಿಯ ವೀರ ಮಕ್ಕಳು ಒಂದು ವಾರದಿಂದ ಉಪವಾಸವಿದ್ದು, ನಸುಕಿನಲ್ಲಿ ಅಗ್ನಿಕೊಂಡ ಹಾಯುವ ಮೂಲಕ ಹರಕೆ ತೀರಿಸಿದ್ದು ವಿಶೇಷವಾಗಿತ್ತು.
ನಾಡಿನ ನಾನಾ ಕಡೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತ ಸಮೂಹ ಅಗ್ನಿಕೊಂಡ ಹಾಯ್ದ ಬಳಿಕ ವಿವಿಧ ಬಗೆಯ ಪುಷ್ಪಗಳಿಂದ ವರ್ಣರಂಜಿತವಾಗಿ ಅಲಂಕರಿಸಲಾಗಿದ್ದ ರಥಕ್ಕೆ ಹೆತ್ತೇನಹಳ್ಳಿಯಮ್ಮ ದೇವಿಯನ್ನು ಕೂರಿಸುತ್ತಿದ್ದಂತೆ ನೆರೆದಿದ್ದ ಭಕ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತು.
ಅಮ್ಮನವರನ್ನು ರಥಕ್ಕೆ ಕೂರಿಸಿದ ಬಳಿಕ ಭಕ್ತರು ರಥವನ್ನು ಎಳೆಯಲು ನಾ.. ಮುಂದು, ತಾ.. ಮುಂದು ಎಂದು ಮುಗಿ ಬೀಳುತ್ತಿದ್ದ ದೃಶ್ಯ ಕಂಡು ಬಂತು.
ಅಮ್ಮನವರ ಅರ್ಚಕರು, ತಹಶೀಲ್ದಾರ್ ರಥದ ಗಾಲಿಗೆ ತೆಂಗಿನ ಕಾಯಿ ಒಡೆದು ಅಮ್ಮನವರಿಗೆ ಪೂಜೆ ಸಲ್ಲಿಸಿದ ನಂತರ ರಥದ ಗಾಲಿ ಒಂದು ಸುತ್ತು ಉರುಳುತ್ತಿದ್ದಂತೆ ಭಕ್ತರು ಶ್ರದ್ಧಾ ಭಕ್ತಿಯಿಂದ ರಥಕ್ಕೆ ಹೂವು, ದವನ, ಬಾಳೆಹಣ್ಣು ಎಸೆದು ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಮಾಡಿಕೊಂಡಿದ್ದ ಹರಕೆಯನ್ನು ತೀರಿಸಿದರು.
ಇಡೀ ರಾತ್ರಿ ಹೆತ್ತೇನಹಳ್ಳಿಯಲ್ಲಿ ಜಮಾಯಿಸಿದ್ದ ಭಕ್ತ ಸಮೂಹ ಅಗ್ನಿಕೊಂಡ ಹಾಯ್ದು, ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
ಹೆತ್ತೇನಹಳ್ಳಿಯಮ್ಮನ ಜಾತ್ರೆ ಒಂದು ವಾರ ಕಾಲ ನಡೆಯಲಿದ್ದು, ಶನಿವಾರದ ವರೆಗೆ ಭಕ್ತಾದಿಗಳ ದಂಡು ಹೆತ್ತೇನಹಳ್ಳಿಗೆ ಹರಿದು ಬರಲಿದೆ.
ರಥೋತ್ಸವದಲ್ಲಿ ಶಾಸಕ ಸುರೇಶ್ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಉಪವಿಭಾಗಾಧಿಕಾರಿ ನಾಹಿದಾ ಜಮ್ಜಮ್, ತಹಶೀಲ್ದಾರ್ ರಾಜೇಶ್ವರಿ, ಉಪತಹಶೀಲ್ದಾರ್ ಭಾನುಪ್ರಕಾಶ್, ರವಿನ್ಯೂ ಇನ್ಸ್ಪೆಕ್ಟರ್ ರಮೇಶ್ಕುಮಾರ್ ಹಾಗೂ ಗೂಳೂರು ಹೋಬಳಿಯ ಗ್ರಾಮ ಆಡಳಿತಾಧಿಕಾರಿಗಳು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು.
ಒಂದು ವಾರಗಳ ಕಾಲ ನಡೆಯಲಿರುವ ಹೆತ್ತೇನಹಳ್ಳಿ ಜಾತ್ರೆಯಲ್ಲಿ ಯಾವುದೇ ರೀತಿಯ ಅಹಿತರ ಘಟನೆಗಳು, ಕಳ್ಳತನಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.





